ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ: ಡಿಸಿಎಂ ಪರಮೇಶ್ವರ್
ಬೆಳಗಾವಿ, ಡಿ.17: ಬಾಗಲಕೋಟೆ ಜಿಲ್ಲೆಯ ಖಾಸಗಿ ಸಕ್ಕರೆ ಕಾರ್ಖಾನೆಯ ಸಂಸ್ಕರಣಾ ಘಟಕದಲ್ಲಿ ರವಿವಾರ ನಡೆದ ಸ್ಫೋಟ ಪ್ರಕರಣದಲ್ಲಿ ಮೃತರಾದ ನಾಲ್ವರು ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರಕಾರ ತಲಾ ಐದು ಲಕ್ಷ ರೂ. ಪರಿಹಾರವನ್ನು ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೋಮವಾರ ವಿಧಾನಸಭೆಯಲ್ಲಿ ಪ್ರಕಟಿಸಿದರು.
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕರಿಯಣ್ಣ ಅವರ ನಿಧನಕ್ಕೆ ಹಾಗೂ ಕಳೆದ ಎರಡು ದಿನಗಳಲ್ಲಿ ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ದುರಂತಗಳಲ್ಲಿ ಸಾವನ್ನಪ್ಪಿದ ಜನರಿಗೆ ಇಂದು ಸದನದಲ್ಲಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಂತಾಪ ಸೂಚಕ ನಿರ್ಣಯವನ್ನು ಮಂಡಿಸಿದರು. ಸಂತಾಪ ಸೂಚನ ನಿರ್ಣಯದ ಮೇಲಿನ ಚರ್ಚೆ ಬಳಿಕ ಮೃತರ ಗೌರವಾರ್ಥ ಸದನದಲ್ಲಿ ಒಂದು ನಿಮಿಷ ಮೌನ ಆಚರಿಸಲಾಯಿತು.
'ಚಾಮರಾಜ ನಗರ ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನ ಗೋಪುರದ ಶಿಲಾನ್ಯಾಸ ಸಮಾರಂಭದಲ್ಲಿ ವಿತರಿಸಲಾದ ಪ್ರಸಾದವನ್ನು ಸೇವಿಸಿ ಇಬ್ಬರು ಮಕ್ಕಳೂ ಒಳಗೊಂಡಂತೆ ಒಟ್ಟು ಹದಿನಾಲ್ಕು ಜನ ಸಾವನ್ನಪ್ಪಿದ್ದಾರೆ. ಇನ್ನೂ 108 ಜನರು ಮೈಸೂರು ಭಾಗದ 13 ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರೂ ಬೇಗ ಗುಣಮುಖರಾಗಲಿ. ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವುದರ ಜೊತೆಗೆ ಧೈರ್ಯ ತುಂಬುವ ಕಾರ್ಯವನ್ನು ಸರಕಾರ ಮಾಡಲಿ' ಎಂದು ಸ್ಪೀಕರ್ ಹೇಳಿದರು.
ಸ್ಪೀಕರ್ ಮಂಡಿಸಿದ ಸಂತಾಪ ಸೂಚಕ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಚಾಮರಾಜನಗರ ಜಿಲ್ಲೆಯ ದೇವಸ್ಥಾನದಲ್ಲಿ ನಡೆದ ದುರ್ಘಟನೆಯ ತನಿಖೆಗೆ ಆದೇಶಿಸಲಾಗಿದೆ. ಸಾವಿಗೆ ಕಾರಣವಾದ ಪ್ರಸಾದವನ್ನು ಈಗಾಗಲೇ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಪ್ರಾಥಮಿಕ ಪರೀಕ್ಷೆಯಲ್ಲಿ ಪ್ರಸಾದದಲ್ಲಿ ಕೀಟನಾಶಕದಲ್ಲಿ ಕಂಡು ಬರುವ ಮಾನೋಪ್ರೋಟ್ ರಾಸಾಯನಿಕ ಅಂಶವಿದೆ ಎಂದು ತಿಳಿದು ಬಂದಿದೆ ಎಂದರು.
ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕ ಇತರೆ ಅಂಶಗಳೂ ಬೆಳಕಿಗೆ ಬರಲಿವೆ. ಪ್ರಕರಣ ಕುರಿತಂತೆ ಈಗಾಗಲೇ ತನಿಖೆ ಪ್ರಾರಂಭಿಸಿ ಏಳು ಜನರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಕೆಲವರು ಹಳ್ಳಿಯನ್ನು ತೊರೆದಿದ್ದು, ಅವರಿಗಾಗಿ ಶೋಧ ಕಾರ್ಯ ಕೂಡಾ ಪ್ರಾರಂಭವಾಗಿದೆ. ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸದನಕ್ಕೆ ತಿಳಿಸಿದರು.
ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಕರಿಯಣ್ಣ ತಮ್ಮ ಆತ್ಮೀಯ ಗೆಳೆಯರಲ್ಲೊಬ್ಬರಾಗಿದ್ದರು. ಸಾರ್ವಜನಿಕ ಜೀವನದಲ್ಲಿ ಸರಳ, ಸಜ್ಜನಿಕೆಯನ್ನು ಅವರು ಮೈಗೂಡಿಸಿಕೊಂಡಿದ್ದರು ಎಂದರು. ಸುಳ್ವಾಡಿ ದುರ್ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು. ಮಾನವೀಯತೆಯ ದೃಷ್ಠಿಯಿಂದ ಸಕ್ಕರೆ ಕಾರ್ಖಾನೆಯ ದುರಂತದಲ್ಲಿ ಮಡಿದವರ ಕುಟುಂಬಗಳಿಗೂ ಸರ್ಕಾರ ಪರಿಹಾರ ನೀಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಸದಸ್ಯ ಗೋವಿಂದ ಕಾರಜೋಳ, ಸುಳ್ವಾಡಿ ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ರಾಜ್ಯ ಸರಕಾರ ಐದು ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. ಇದರ ಜೊತೆಗೆ ಸರಕಾರದ ವಿವಿಧ ಯೋಜನೆಗಳಡಿ ದೊರೆಯುವ ಸವಲತ್ತುಗಳನ್ನೂ ವಿಸ್ತರಿಸುವಲ್ಲಿ ಕ್ರಮಕೈಗೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಸುಳ್ವಾಡಿ ಪ್ರಕರಣದ ಕರಾಳ ನೆನಪು ಮಾಸುವ ಮುನ್ನವೇ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ಸಮೀಪ ಶಾಸಕ ಮುರುಗೇಶ್ ನಿರಾಣಿ ಅವರ ಒಡೆತನಕ್ಕೆ ಸೇರಿದ ಸಕ್ಕರೆ ಕಾರ್ಖಾನೆಯಲ್ಲಿ ಪ್ರಾಯೋಗಿಕವಾಗಿ ಪರೀಕ್ಷೆ ನಡೆಸುತ್ತಿದ್ದ ಸಂದರ್ಭದಲ್ಲಿ ತ್ಯಾಜ್ಯ ವಸ್ತು ನಿರ್ವಹಣೆಯ ಮಿಥೇನ್ ಗ್ಯಾಸ್ನ ಸುರಕ್ಷತಾ ಕವಾಟ (ಸೇಫ್ಟಿವಾಲ್ವ್) ದಲ್ಲಿ ಉಂಟಾದ ಸಮಸ್ಯೆಯಿಂದ ಸ್ಫೋಟ ಉಂಟಾಗಿ ನಾಲ್ಕು ಜನ ಮೃತ ಪಟ್ಟಿರುವುದು ಖೇದಕರ ಸಂಗತಿಯಾಗಿದೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಹಾಗೂ ಅವರ ಕುಟುಂಬಗಳಿಗೆ ಮೃತರ ಅಗಲಿಕೆಯಿಂದ ಉಂಟಾದ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಅವರು ಭಗವಂತನಲ್ಲಿ ಪ್ರಾರ್ಥಿಸಿದರು.