ಕುವೆಂಪು ವಿ.ವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ 60 ಎಕರೆ ಭೂಮಿ ಮಂಜೂರು: ಜಿ.ಟಿ.ದೇವೇಗೌಡ
ಬೆಳಗಾವಿ, ಡಿ.18: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕುರಬರ ಹಳ್ಳಿಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲು 60 ಎಕರೆ ಜಮೀನನ್ನು ಮಂಜೂರು ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.
ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪ ವೇಳೆ ಬಿಜೆಪಿ ಸದಸ್ಯ ಬೆಳ್ಳಿ ಪ್ರಕಾಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಡೂರು ತಾಲೂಕಿನ ಕುರಬರಹಳ್ಳಿ ಗ್ರಾಮದ ಸರ್ವೆ ನಂ.15, 16 ಮತ್ತು 17ರಲ್ಲಿ ಒಟ್ಟು 60 ಎಕರೆ ಜಮೀನನ್ನು ಕುವೆಂಪು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಸ್ಥಾಪಿಸುವ ಉದ್ದೇಶಕ್ಕೆ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ಕುವೆಂಪು ವಿಶ್ವವಿದ್ಯಾಲಯದಲ್ಲಿ 224 ಬೋಧಕ ಹುದ್ದೆಗಳು ಮಂಜೂರಾಗಿದ್ದು, ಅದರಲ್ಲಿ 190 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಅಲ್ಲದೆ, ಬೋಧಕೇತರ 590 ಹುದ್ದೆಗಳು ಮಂಜೂರಾಗಿದೆ. ಈ ಪೈಕಿ 335 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕುವೆಂಪು ವಿಶ್ವವಿದ್ಯಾಲಯದ ಖಾಲಿ ಇರುವ 21 ಬೋಧಕ ಹುದ್ದೆಗಳು ಹಾಗೂ 100 ಬೋಧಕೇತರ ಹುದ್ದೆಗಳನ್ನು ನೇರ ನೇಮಕಾತಿಯಲ್ಲಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಉಳಿದ 13 ಬೋಧಕ ಹುದ್ದೆ ಹಾಗೂ 252 ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಹಮತಿ ನೀಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ದೇವೇಗೌಡ ಸದನದಲ್ಲಿ ಸ್ಪಷ್ಟಪಡಿಸಿದರು.