ಕ್ರಿಸ್‌ಮಸ್: ಕೆಎಸ್ಸಾರ್ಟಿಸಿಯಿಂದ 550 ಹೆಚ್ಚುವರಿ ಸಾರಿಗೆ ವ್ಯವಸ್ಥೆ

Update: 2018-12-18 17:36 GMT

ಬೆಂಗಳೂರು, ಡಿ. 18: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಯಿಂದ ಡಿ.21ರಿಂದ 22ರ ವರೆಗೆ ಬೆಂಗಳೂರು ನಗರದಿಂದ ರಾಜ್ಯ-ಹೊರರಾಜ್ಯದ ವಿವಿಧ ಸ್ಥಳಗಳಿಗೆ 550 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಅನಂತರ ರಾಜ್ಯದ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರು ನಗರಕ್ಕೆ ಡಿ.25ರಂದು ವಿಶೇಷ ಸಾರಿಗೆ ವಿಶೇಷ ವಾಹನಗಳು ಕಾರ್ಯಾಚರಣೆ ಮಾಡಲಿವೆ. ನಗರದ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಬೀದರ್, ತಿರುಪತಿ ಸೇರಿ ಇನ್ನಿತರ ಸ್ಥಳಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ.ತಮಿಳುನಾಡು ಮತ್ತು ಆಂಧ್ರ/ತೆಲಂಗಾಣ ಕಡೆಗೆ ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2ರ ಮುಂಭಾಗದಿಂದ ವಿಶೇಷ ಕಾರ್ಯಾಚರಣೆ ಮಾಡಲಾಗುವುದು.

ಬೆಂಗಳೂರು ನಗರದ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 18ನೆ ಅಡ್ಡರಸ್ತೆ, ಬನಶಂಕರಿ, ಜೀವನ್‌ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ ಸೇರಿ ಇನ್ನಿತರ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೇಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ರಿಯಾಯಿತಿ: ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು.

ಅಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಾರ್ವಜನಿಕ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಹೆಚ್ಚುವರಿ ವಿಶೇಷ ಸಾರಿಗೆ ವಾಹನಗಳ ಕಾರ್ಯಾಚರಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News