ಮಂಗಳೂರು ವಿವಿ ಹಗರಣಗಳ ತನಿಖೆಗೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ

Update: 2018-12-19 16:50 GMT

ಮಂಗಳೂರು, ಡಿ.19: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಹಗರಣಗಳ ಕುರಿತು ರಾಜ್ಯ ಸರಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಬೆಗಾವಿ ಅಧಿವೇಶನದಲ್ಲಿ ಪ್ರಶ್ನಿಸಿದ್ದಾರೆ.

ಈ ಕುರಿತು ಅಧಿವೇಶನದಲ್ಲಿ ಮಾತನಾಡಿದ ಅವರು ಮಂಗಳೂರು ವಿವಿಯಲ್ಲಿ ಮೂರು ವರ್ಷಗಳಿಂದ ನಡೆದ ಹಗರಣಗಳು ಸರಕಾರದ ಗಮನಕ್ಕೆ ಬಂದಿದೆಯಾ ಎಂದು ಪ್ರಶ್ನೆ ಕೇಳಿದಾಗ ಗಮನಕ್ಕೆ ಬಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರು ಉತ್ತರ ನೀಡಿದ್ದಾರೆ.

ಮಂಗಳೂರು ವಿವಿಯಲ್ಲಿ ನಡೆದ ಹಗರಣಗಳ ಬಗ್ಗೆ ಪತ್ರಿಕೆ, ಟಿವಿ ಮಾಧ್ಯಮಗಳು ಸಾಕಷ್ಟು ವರದಿ ಮಾಡಿವೆ. ಇನ್ನು ಬೆಂಗಳೂರು ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ಕೂಡ ದಾಖಲೆಗಳೊಂದಿಗೆ ಮಾತನಾಡಿದ್ದಾರೆ. ಅದು ಕೂಡ ಮರುದಿನ ಮಾಧ್ಯಮಗಳಲ್ಲಿ ವರದಿಯಾಗಿದೆ. ತಾನು ಕೂಡ ಜುಲೈ 13ರಂದು ಪತ್ರದ ಮೂಲಕ ಸಚಿವರಿಗೆ ಮಾಹಿತಿ ನೀಡಿದ್ದೇನೆ. ಆದರೂ ಗಮನಕ್ಕೆ ಬಂದಿಲ್ಲ ಎನ್ನುವ ಉತ್ತರ ಬಂದಿರುವ ಬಗ್ಗೆ ಶಾಸಕ ಕಾಮತ್ ಸಭಾಧ್ಯಕ್ಷರ ಗಮನ ಸೆಳೆದರು.

ಇನ್ನು ಮಂಗಳೂರು ವಿವಿಯಲ್ಲಿ ನಡೆದ ಹಗರಣಗಳ ಬಗ್ಗೆ ತಪ್ಪಿತಸ್ಥರ ಮೇಲೆ ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಕೇಳಿದ ಪ್ರಶ್ನೆಗೆ ಮುದ್ರಣ ಮಾಧ್ಯಮದಲ್ಲಿ ವರದಿಯಾದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ವರದಿ ಪಡೆಯಲಾಗಿದೆ. ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂಬ ಉತ್ತರ ಬಂದಿದೆ. ಆದರೆ ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ದಾಖಲೆ ಸಮೇತ ನೀಡಬೇಕು ಎಂದು ಶಾಸಕ ಕಾಮತ್ ಒತ್ತಾಯಿಸಿದರು.

ಇಂತಹ ವಿಚಾರಗಳಿಗೆ ಸಮಯದ ಪರಿಧಿಯೊಳಗೆ ಸರಕಾರ ವಿಚಾರಣೆ ಮುಗಿಸಬೇಕು ಎಂದು ಸಭಾಧ್ಯಕ್ಷ ರಮೇಶ್ ಕುಮಾರ್ ಸೂಚಿಸಿದರು.
ಆ ಸಂದರ್ಭ ಕುಲಪತಿ ಆಗಿದ್ದವರು ಈಗ ನಿವೃತ್ತರಾಗಿದ್ದಾರೆ. ಆರೋಪಕ್ಕೆ ಒಳಗಾದವರು ಈಗ ಪದೋನ್ನತಿಗೊಂಡಿದ್ದಾರೆ ಎಂದು ಶಾಸಕ ಕಾಮತ್ ಹೇಳಿದಾಗ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಮೂರು ತಿಂಗಳೊಳಗೆ ಇದನ್ನು ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News