ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಸಿದ್ಧತಾ ಕಾರ್ಯ ಅಂತಿಮ ಹಂತದಲ್ಲಿ: ಸಚಿವ ಸಿ.ಪುಟ್ಟರಂಗಶೆಟ್ಟಿ

Update: 2018-12-21 16:08 GMT

ಬೆಳಗಾವಿ, ಡಿ.21: ರಾಜ್ಯದಲ್ಲಿ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸಿದ್ಧಪಡಿಸುವ ಕಾರ್ಯ ಅಂತಿಮ ಹಂತದಲ್ಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಮಂಡನೆಯಾದ ಪ್ರಶ್ನೋತ್ತರದಲ್ಲಿ ಬಿಜೆಪಿ ಸದಸ್ಯ ಬಾಲಚಂದ್ರ ಜಾರಕಿಹೊಳಿ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಸ್ವೀಕೃತಗೊಂಡ ನಂತರ ವರದಿಯನ್ನು ಬಿಡುಗಡೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ 2004-05ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಸರ್ಕಾರ 20,684 ಲಕ್ಷ ರೂ.ಗಳನ್ನು ನಿಗದಿ ಪಡಿಸಿದ್ದು, 19279 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದುವರೆಗೆ 15, 847.22 ಲಕ್ಷ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯ ಹಿಂದುಳಿದವರ್ಗಗಳ ಆಯೋಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಗಣೀಕರಣ ಕಾರ್ಯವನ್ನು ಬಿಇಎಲ್ ಸಂಸ್ಥೆಗೆ 43.09 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತ್ಮಾಕ ಮಂಜೂರಾತಿ ನೀಡಲಾಗಿದೆ. ಇದುವರೆಗೂ ಮೂರು ಕಂತುಗಳಲ್ಲಿ ಆ ಸಂಸ್ಥೆಗೆ ಒಟ್ಟು 3767.75 ಲಕ್ಷ ರೂ.ಗಳನ್ನು ಪಾವತಿಸಲಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News