ಅತೃಪ್ತ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿಲ್ಲ: ಯಡಿಯೂರಪ್ಪ

Update: 2018-12-26 14:03 GMT

ಬೆಳಗಾವಿ, ಡಿ.26: ಸಚಿವ ಸಂಪುಟದಲ್ಲಿ ಅವಕಾಶ ಸಿಗದ ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ಯಾರೂ ಕೂಡ ನಮ್ಮ ಸಂಪರ್ಕದಲ್ಲಿಲ್ಲ. ಸಮ್ಮಿಶ್ರ ಸರಕಾರದಲ್ಲೇ ಹಲವು ಗೊಂದಲಗಳಿದ್ದು, ವಿನಾಕಾರಣ ನಮ್ಮ ವಿರುದ್ಧ ಬೊಟ್ಟು ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚಿಸಲು ನಾನು ಬೆಳಗಾವಿಗೆ ಬಂದಿದ್ದೇನೆಯೇ ಹೊರತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿಗಾಗಿ ಇಲ್ಲಿ ಬಂದಿಲ್ಲ ಎಂದರು.

ನಾವು ಸರಕಾರ ರಚನೆ ಮಾಡುವ ಕೆಲಸಕ್ಕೆ ಕೈ ಹಾಕುವುದಿಲ್ಲ. ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತು ಕೆಲಸ ಮಾಡುತ್ತೇವೆ. ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರುತ್ತಾರೆಯೇ, ಇಲ್ಲವೇ ಎಂಬುದಕ್ಕೆ ನಾನು ಈ ಸಂದರ್ಭದಲ್ಲಿ ಉತ್ತರಿಸುವುದಿಲ್ಲ ಎಂದು ಅವರು ಹೇಳಿದರು.

ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಕಳೆದ ವಾರವೇ ಚರ್ಚೆ ನಡೆಯಬೇಕಿತ್ತು. ಸ್ಥಳೀಯ ನಾಯಕರು ಹೊಸದಿಲ್ಲಿಗೆ ತೆರಳಿದ್ದ ಕಾರಣ ಚರ್ಚೆ ಸಾಧ್ಯವಾಗಿರಲಿಲ್ಲ. ಆದುದರಿಂದ, ಇವತ್ತು ಜಿಲ್ಲೆಯ ಎಲ್ಲ ಶಾಸಕರ ಜೊತೆ ಮಾತುಕತೆ ನಡೆಸಿ, ಆಕಾಂಕ್ಷಿಗಳ ಪಟ್ಟಿಯನ್ನು ರಾಷ್ಟ್ರೀಯ ನಾಯಕರಿಗೆ ಕಳುಹಿಸಿಕೊಡಲಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News