ಕೇಂದ್ರ ಸಚಿವ ಸುರೇಶ್ ಪ್ರಭು ಭೇಟಿಯಾದ ಸಿಎಂ ಕುಮಾರಸ್ವಾಮಿ

Update: 2018-12-27 13:49 GMT

ಹೊಸದಲ್ಲಿ, ಡಿ. 27: ಕಲಬುರಗಿ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನಯಾನ ಕಂಪೆನಿಗಳು ಕಾರ್ಯಾಚರಣೆ ಆರಂಭಿಸಲು ಉತ್ಸಾಹ ತೋರಿವೆ. ಹೀಗಾಗಿ ವಿಮಾನ ಹಾರಾಟಕ್ಕೆ ಕ್ರಮ ವಹಿಸಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿ, ವಿಮಾನಯಾನ ಸಚಿವರಿಗೆ ಮನವಿ ಮಾಡಿದ್ದಾರೆ.

ಗುರುವಾರ ಹೊಸದಿಲ್ಲಿಯಲ್ಲಿ ಕೇಂದ್ರ ವಾಣಿಜ್ಯ ಮತ್ತು ನಾಗರಿಕ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಕುಮಾರಸ್ವಾಮಿ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಸೂಚನೆಯಂತೆ ವಿಶೇಷ ಉದ್ದೇಶ ವಾಹಕ(ಎಸ್‌ಪಿವಿ)ದ ರಚನೆಯ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ. ಅಗತ್ಯ ಪರವಾನಿಗೆ ಹಾಗೂ ತಾಂತ್ರಿಕ ಅನುಮತಿಗಳನ್ನು ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಧಿಕಾರವು ಎಸ್‌ಪಿವಿ ರಚನೆವರೆಗೆ ಕಾಯದೆ, ಕೂಡಲೇ ಕಲಬುರಗಿ ವಿಮಾನ ನಿಲ್ದಾಣವನ್ನು ತನ್ನ ವಶಕ್ಕೆ ತೆಗೆದುಕೊಳ್ಳುವಂತೆಯೂ ನಿರ್ದೇಶನ ನೀಡಬೇಕು ಎಂದು ಕೋರಿದರು.

ಈ ಎಸ್‌ಪಿವಿ ಮೂಲಕ ರಾಜ್ಯ ಸರಕಾರವು ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ ಮತ್ತು ಕಾರವಾರಗಳಲ್ಲಿಯೂ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ ಎಂದು ಅವರು, ಬೀದರ್ ವಿಮಾನ ನಿಲ್ದಾಣ ನಿರ್ಮಾಣ ಪೂರ್ಣಗೊಂಡು ಕಾರ್ಯಾಚರಣೆಗೆ ಸಜ್ಜಾಗಿದ್ದು, ಈ ಕುರಿತು ಜಿಎಚ್‌ಈಎಎಲ್ ನೊಂದಿಗೆ ಪರಸ್ಪರ ಒಪ್ಪಂದ ಅಂತಿಮ ಹಂತದಲ್ಲಿದ್ದು, ಶೀಘ್ರವೇ ಒಪ್ಪಂದಕ್ಕೆ ಸಹಿ ಮಾಡುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಬೇಕೆಂದು ಹೇಳಿದರು.

ಭಾರತೀಯ ವಾಯುಪಡೆಯು ಬೆಂಗಳೂರಿನ ಯಲಹಂಕದಲ್ಲಿರುವ ತನ್ನ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಸ್ಥಳಾಂತರಿಸಲು ಪ್ರಸ್ತಾವನೆ ಸಲ್ಲಿಸಿದೆ. ಪುಣೆ, ಶ್ರೀನಗರ, ಚಂಡೀಘಢ ವಿಮಾನ ನಿಲ್ದಾಣಗಳ ಮಾದರಿಯಲ್ಲಿ ಮೈಸೂರು ವಿಮಾನ ನಿಲ್ದಾಣವನ್ನು ತನ್ನದೇ ವೆಚ್ಚದಲ್ಲಿ ಅಭಿವೃದ್ಧಿಪಡಿಸಿ, ನಾಗರಿಕರ ಬಳಕೆ ಹಾಗೂ ಮಿಲಿಟರಿ ಬಳಕೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ಸಮ್ಮತಿಸಿದೆ. ಇದರಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದರು.

ರಾಜ್ಯ ಸರಕಾರವು ಈ ಸ್ಥಳಾಂತರಕ್ಕೆ ನಿರಾಕ್ಷೇಪಣಾ ಪತ್ರ ನೀಡಿದ್ದು, ಮೈಸೂರು ವಿಮಾನ ನಿಲ್ದಾಣ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಸ್ವಾಧೀನದಲ್ಲಿದ್ದು, ಅವರೇ ಕಾರ್ಯಾಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆಗೆ ಮೈಸೂರು ವಿಮಾನ ನಿಲ್ದಾಣವನ್ನು ಅವರ ಹೆಲಿಕಾಪ್ಟರ್ ಬೇಸ್‌ಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News