ರಮೇಶ್ ಜಾರಕಿಹೊಳಿ ಸಂಪರ್ಕ ಸಾಧ್ಯವಾಗಿಲ್ಲ: ಸತೀಶ್ ಜಾರಕಿಹೊಳಿ

Update: 2019-01-01 14:37 GMT

ಬೆಳಗಾವಿ, ಜ.1: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆ ಇನ್ನೂ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ. ಅವರು ಹೊಸದಿಲ್ಲಿಗೆ ಹೋಗಿರಬಹುದೆಂದು ಹೇಳಲಾಗುತ್ತಿದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಯಾಕೆ ದಿಲ್ಲಿಗೆ ಹೋಗಿದ್ದಾರೆ ಅನ್ನೋದು ಗೊತ್ತಿಲ್ಲ. ಅವರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎಂಬುದು ಕೇವಲ ಊಹಾಪೋಹ ಎಂದರು.

ರಮೇಶ್ ಈ ರೀತಿ ಯಾರ ಕೈಗೂ ಸಿಗದೇ ಇರುವುದು ಗೊಂದಲಕ್ಕೆ ಕಾರಣವಾಗಿದೆ. ಅಷ್ಟೇನು ತುರ್ತು ಪರಿಸ್ಥಿತಿ ಇಲ್ಲ. ಅವರು ಬಂದ ನಂತರವೇ ನಾನು ಮಾತನಾಡುತ್ತೇನೆ. ನಾಳೆ ಗೋಕಾಕ್‌ಗೆ ಹೋಗುತ್ತಿದ್ದೇವೆ. ಅಲ್ಲಿಯೂ ಅವರನ್ನು ಸಂಪರ್ಕಿಸಿಲು ಪ್ರಯತ್ನಿಸುತ್ತೇನೆ ಎಂದು ಅವರು ಹೇಳಿದರು.

ನಾನೊಬ್ಬನೆ ಅಲ್ಲ. ಎಲ್ಲರೂ ರಮೇಶ್‌ರನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದಾರೆ. ಅವರ ಜೊತೆ ಮಾತುಕತೆ ನಡೆಸದೆ, ಏನನ್ನೂ ಹೇಳಲು ಸಾಧ್ಯವಿಲ್ಲ. ಕಳೆದ ಆರು ತಿಂಗಳಿನಿಂದಲೂ ಬಿಜೆಪಿಯವರು ರಾಜ್ಯದಲ್ಲಿ ಸರಕಾರ ರಚನೆ ಬಗ್ಗೆ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಸುಭದ್ರವಾಗಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News