‘ಬಡವರ ಬಂಧು’ ಯೋಜನೆ: ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ
ಉಡುಪಿ, ಜ.2: ಕರ್ನಾಟಕ ಸರ್ಕಾರ ತನ್ನ ಮಹತ್ವಾಕಾಂಕ್ಷಿ ಯೋಜನೆ ‘ಬಡವರ ಬಂಧು’ ಜಾರಿಗೊಳಿಸಿದ್ದು, ಈ ಯೋಜನೆಯಡಿಯಲ್ಲಿ ನಗರ ಪ್ರದೇಶದ ಬೀದಿ ಬದಿ ವ್ಯಾಪಾರಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಲಾಗುವುದು.
ಉಡುಪಿ ಜಿಲ್ಲೆಯಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (ಡಿಸಿಸಿ) ವತಿಯಿಂದ ಬಡ್ಡಿ ರಹಿತವಾಗಿ (ಶೂನ್ಯ ಬಡ್ಡಿ ದರದಲ್ಲಿ) ಉಡುಪಿ ನಗರ ವ್ಯಾಪ್ತಿಯಲ್ಲಿ ರುವ ಬಿಪಿಎಲ್ ಕಾರ್ಡು ಹೊಂದಿರುವ ಬೀದಿ ಬದಿ ವ್ಯಾಪಾರಿ ಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ಸಾಲ ವಿತರಿಸಲಾಗುವುದು.
‘ಬಡವರ ಬಂಧು’ ಯೋಜನೆಗೆ ಜ.7ರಂದು ಸಾಬರ್ಕಟ್ಟೆ ಬ್ಯಾಂಕಿನ ಶಾಖಾ ಕಛೇರಿ ಸ್ಥಳಾಂತರ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರಕುಮಾರ್ ಚಾಲನೆ ನೀಡಲಿರುವರು.
ಈ ಯೋಜನೆಯ ಪ್ರಯೋಜನವನ್ನು ಎಲ್ಲಾ ಉಡುಪಿ ನಗರದ ಬೀದಿ ಬದಿ ವ್ಯಾಪಾರಿಗಳು ಹಾಗೂ ಸಣ್ಣ ವ್ಯಾಪಾರಿಗಳು ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಉಡುಪಿ ನಗರ ವ್ಯಾಪ್ತಿಯಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗಳ ವ್ಯವಸ್ಥಾಪಕರನ್ನು ಸಂಪರ್ಕಿಸುವಂತೆ ಸಹಕಾರಿ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.