×
Ad

ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮರುವಿಂಗಡಣೆ ವಿಚಾರ: ದಾಖಲೆಗಳನ್ನು ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2019-01-03 22:50 IST

ಬೆಂಗಳೂರು, ಜ.3: ಮಹಾನಗರ ಪಾಲಿಕೆಗಳು ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಮರುವಿಂಗಡಣೆಗೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸುವಂತೆ ಹೈಕೋರ್ಟ್ ಗುರುವಾರ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಮೀಸಲಾತಿ ನಿಗದಿಪಡಿಸಿ ಹಾಗೂ ವಾರ್ಡ್‌ಗಳನ್ನು ಮರುವಿಂಗಡಣೆಗೊಳಿಸಿ ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನ್ಯಾ. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಈ ವೇಳೆ ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಗಳ ವಾರ್ಡ್‌ಗಳನ್ನು ಮರುವಿಗಂಡಣೆ ಮಾಡಿರುವ ಬಗ್ಗೆ ದಾಖಲೆಗಳನ್ನು ಕೋರ್ಟ್‌ಗೆ ಹಾಜರುಪಡಿಸುವಂತೆ ಸರಕಾರದ ಪರ ವಕೀಲರಿಗೆ ನಿರ್ದೇಶನ ನೀಡಿದ ನ್ಯಾಯಪೀಠ, ಅರ್ಜಿಗಳು ಇತ್ಯರ್ಥಗೊಳ್ಳುವವರೆಗೆ ಮುಂದಿನ ಕ್ರಮ ಕೈಗೊಳ್ಳದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಮೌಖಿಕ ಸೂಚನೆ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪ್ರತಿ ಜನಗಣತಿ ಬಳಿಕ ವಾರ್ಡ್‌ಗಳ ಮರುವಿಂಗಡಣೆ ಹಾಗೂ ಮೀಸಲಾತಿ ಆವರ್ತನೆ ಆಗಬೇಕು. ಅದರಂತೆ, 2011ರ ಜನಗಣತಿ ಆಧರಿಸಿ ವಾರ್ಡ್ ಮರುವಿಂಗಡಣೆ ಮತ್ತು ಮೀಸಲಾತಿ ಆವರ್ತನೆ ಮಾಡಲಾಗಿದೆ ಎಂದು ಸರಕಾರ ಹೇಳುತ್ತಿದೆ. ಆದರೆ, 2021ರಲ್ಲಿ ಮತ್ತೇ ಜನಗಣತಿ ನಡೆಯುತ್ತದೆ. ಅದರ ನಂತರ ಪುನಃ ಮೀಸಲಾತಿ ಆವರ್ತನೆ ಮಾಡಬೇಕಾಗುತ್ತದೆ. ಈ ರೀತಿ ಪ್ರತಿ ಹತ್ತು ವರ್ಷಗಳಿಗೊಮ್ಮೆ ಮೀಸಲಾತಿ ಆವರ್ತನೆ ಹಾಗೂ ಪುನಾರಾವರ್ತನೆ ನಡೆದರೆ, ಸಮಸ್ಯೆಗಳಿಗೆ ಕೊನೆ ಇಲ್ಲದಂತಾಗುತ್ತದೆ ಎಂದರು.

ಸರಕಾರದ ಪರ ವಕೀಲರು ರಾಜ್ಯ ಸರಕಾರದ ಕ್ರಮವನ್ನು ಸಮರ್ಥಿಸಿಕೊಂಡರು. ಮೀಸಲಾತಿ, ಆವರ್ತನೆ ಮತ್ತು ವಾರ್ಡ್ ಮುರುವಿಂಗಡಣೆಯ ಗೊಂದಲದಲ್ಲಿ ಚುನಾವಣೆ ವಿಳಂಬವಾಗಬಾರದು ಅನ್ನುವುದಷ್ಟೇ ಆಯೋಗದ ಕಾಳಜಿ ಎಂದು ಚುನಾವಣಾ ಆಯೋಗದ ಪರ ವಕೀಲರು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಾರ್ಡ್ ಮರುವಿಂಗಡಣೆಗೆ ಸಂಬಂಧಿಸಿದಂತೆ ದಾಖಲೆಗಳನ್ನು ಹಾಜರುಪಡಿಸುವಂತೆ ಸರಕಾರದ ಪರ ವಕೀಲರಿಗೆ ನಿರ್ದೇಶಿಸಿ, ವಿಚಾರಣೆಯನ್ನು ಶುಕ್ರವಾರಕ್ಕೆ (ಜ.4) ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News