ಮೀನುಗಾರರ ನಾಪತ್ತೆ ಪ್ರಕರಣದ ಬಗ್ಗೆ ರಾಜ್ಯ ಸರಕಾರದ ನಿರ್ಲಕ್ಷ: ಮಟ್ಟಾರು
ಉಡುಪಿ, ಜ.4: ಬೋಟು ಸಹಿತ ಮೀನುಗಾರರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಈವರೆಗೆ ಯಾವುದೇ ರೀತಿಯಲ್ಲೂ ಸ್ಪಂದಿಸಿಲ್ಲ. ಉಸ್ತುವಾರಿ ಸಚಿವರು ಈ ಬಗ್ಗೆ ಚಾಕರ ಎತ್ತಿಲ್ಲ. ಮೀನುಗಾರ ಸಚಿವರು ಈ ಭಾಗಕ್ಕೆ ಭೇಟಿ ನೀಡುವ ಕೆಲಸ ಮಾಡಿಲ್ಲ. ಸರಕಾರದ ಈ ಧೋರಣೆ ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ.
ಕಡಿಯಾಳಿಯಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರು ಹಾಗೂ ಸಂಸದರು ಕೇಂದ್ರ ಸಚಿವರನ್ನು ಸಂಪರ್ಕಿಸಿ ನಾಪತ್ತೆಯಾದ ಮೀನುಗಾರರನ್ನು ಶೀಘ್ರವೇ ಪತ್ತೆ ಹಚ್ಚು ವಂತೆ ಒತ್ತಡ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತವಾಗು ವಂತೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ನೌಕಪಡೆಗೆ ಸೂಚನೆ ನೀಡಿದ್ದಾರೆ. ಜ.6ರಂದು ನಡೆಯುವ ಮೀನುಗಾರರ ಹೆದ್ದಾರಿ ತಡೆ ಹೋರಾಟಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.
ಸ್ಥಳೀಯಾಡಳಿತ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದರೂ ಇನ್ನು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ. ಇದರಿಂದ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಮತ್ತು ಅಭಿವೃದ್ಧಿ ಕಾರ್ಯಗಳು ಸ್ಥಗಿತ ಗೊಂಡಿವೆ. ಈ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಆದುದರಿಂದ ಸರಕಾರ ತಕ್ಷಣವೇ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯ ಸಂಸ್ಥೆಗಳ ಆಡಳಿತ ವನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು.
ರೈತ ಸಾಲಮನ್ನಕ್ಕಾಗಿ ಜಿಲ್ಲೆಯ 2800 ರೈತರನ್ನು ಈಗಾಗಲೇ ಗುರುತಿಸ ಲಾಗಿದೆ. ಆದರೆ ಅವರಿಗೆ ಈವರೆಗೆ ಋಣಮುಕ್ತ ಪ್ರಮಾಣಪತ್ರವನ್ನು ನೀಡಿಲ್ಲ. ಆದುದರಿಂದ ಸರಕಾರ ಕೂಡಲೇ ಜಿಲ್ಲೆಯ ರೈತರ ಸಾಲವನ್ನು ಮನ್ನಾ ಮಾಡಬೇಕು. ತೈಲಬೆಲೆ ಇಳಿಕೆಯಿಂದ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಪೆಟ್ರೋಲ್, ಡಿಸೇಲ್, ಗ್ಯಾಸ್ ದೊರೆಯುತ್ತಿದೆ. ಇನ್ನಷ್ಟು ತೈಲ ಬೆಲೆಯನ್ನು ಇಳಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಲಾಗುವುದು ಎಂದರು.
ಮುಂದಿನ ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ನಡೆಸಲಾಗುತ್ತಿದ್ದು, ಬೂತ್ ಮಟ್ಟದಲ್ಲಿ ಸಶಕ್ತಿಕರಣ, ಶಕ್ತಿ ಹಾಗೂ ಮಹಾಶಕ್ತಿ ಕೇಂದ್ರವನ್ನು ಬಲಪಡಿ ಸುವ ನಿಟ್ಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಚಲನ ಸಮಿತಿಯನ್ನು ರಚಿಸುವ ಮೂಲಕ ಚುನಾವಣೆಗೆ ಕಾರ್ಯಪ್ರವೃತ್ತರಾಗುತ್ತಿದ್ದೇವೆ ಎಂದು ಅವರು ಹೇಳಿದರು.
ಬೈಂದೂರು, ಗಂಗೊಳ್ಳಿ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಮತ್ತೆ ಅಧಿಕಾರ ಗದ್ದುಗೇರಿದೆ. ಯಡ್ತರೆ ಗ್ರಾಪಂನಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಯಶ್ಪಾಲ್ ಸುವರ್ಣ, ಕುತ್ಯಾರ್ ನವೀನ್ ಶೆಟ್ಟಿ, ಶ್ರೀಶ ನಾಯಕ್, ಪ್ರವೀಣ್ ಕಪ್ಪೆಟ್ಟು ಉಪಸ್ಥಿತರಿದ್ದರು.