ಗೆದ್ದ ಜೆಡಿಎಸ್ ಅಭ್ಯರ್ಥಿಯ ಬೆಂಬಲಿಗರ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ: ಆರೋಪ
Update: 2019-01-04 17:20 GMT
ವಿಜಯಪುರ,ಜ.4: ಸಿಂದಗಿ ತಾಲೂಕಿನ ಮಲಘಾಣ ತಾಲೂಕು ಪಂಚಾಯತ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಗೆದ್ದ ಅಭ್ಯರ್ಥಿಯ ಬೆಂಬಲಿಗರ ಮೇಲೆ ಸೋತ ಬಿಜೆಪಿ ಅಭ್ಯರ್ಥಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಮಲಘಾಣ ತಾ.ಪಂ ಕ್ಷೇತ್ರಕ್ಕೆ ಜೆಡಿಎಸ್ ನಿಂದ ಈರಮ್ಮ ಬಿರಾದಾರ ಆಯ್ಕೆಯಾಗಿದ್ದರು. ಗೆದ್ದ ನಂತರ ವಿಜಯೋತ್ಸವ ಆಚರಿಸುವ ವೇಳೆ ಘಟನೆ ನಡೆದಿದೆ ಎನ್ನಲಾಗಿದ್ದು, ಜೆಡಿಎಸ್ ನ ಐವರು ಕಾರ್ಯಕರ್ತರ ಮೇಲೆ ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.
ಸಂಜೆ ವೇಳೆ ದೇವಸ್ಥಾನಕ್ಕೆ ತೆರಳುವ ವೇಳೆ ಬಿಜೆಪಿ ಮುಖಂಡ ಯಶವಂತರಾಯ ರೂಗಿ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದಾರೆನ್ನಲಾಗಿದ್ದು, ಗಾಯಾಳುಗಳನ್ನು ಸಿಂದಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.