ಮೂರು ತಿಂಗಳಲ್ಲಿ ಉಪನ್ಯಾಸಕರ ಹುದ್ದೆ ಭರ್ತಿ: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ

Update: 2019-01-06 12:42 GMT

ಬೆಂಗಳೂರು, ಜ.6: ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿಯಿರುವ 395 ಪ್ರಾಂಶುಪಾಲರು ಹಾಗೂ 3800 ಉಪನ್ಯಾಸಕರ ಹುದ್ದೆಗಳನ್ನು 3 ತಿಂಗಳೊಳಗೆ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ. ರವಿವಾರ ನಗರದ ಶಿಕ್ಷಕರ ಸದನದಲ್ಲಿ ರಾಜ್ಯ ಐಸಿಎಸ್‌ಇ ಶಾಲಾ ಕನ್ನಡ ಶಿಕ್ಷಕರ ಸಂಘ ಆಯೋಜಿಸಿದ್ದ ರಾಜ್ಯ ಐಸಿಎಸ್‌ಇ ಶಾಲಾ ಕನ್ನಡ ಶಿಕ್ಷಕರ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಹುದ್ದೆ ಭರ್ತಿಗೆ ಸಂಬಂಧಿಸಿದಂತೆ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಒಟ್ಟು ಹುದ್ದೆಯ ಶೇ.50ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅತಿ ಹೆಚ್ಚು ಅಂಕ ಪಡೆದ ಶೇ.50ರಷ್ಟು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದೆಂದು ಹೇಳಿದರು. ಪ್ರಾಥಮಿಕ ಶಾಲಾ ಶಿಕ್ಷಕರಿಂದ ಹಿಡಿದು ಪದವಿ ಉಪನ್ಯಾಸಕರವರೆಗೂ ಆಯಾ ವಿಷಯಗಳ ವಿಷಯ ತಜ್ಞರಿಂದ ತರಬೇತಿ ನೀಡುವ ವ್ಯವಸ್ಥೆ ಕೈಗೊಳ್ಳಲಾಗುವುದು. ಬರುವ ಶೈಕ್ಷಣಿಕ ಸಾಲಿನಿಂದ ಪದವಿ ಕಾಲೇಜುಗಳಲ್ಲಿನ ಪಠ್ಯಕ್ರಮಗಳನ್ನು ವಿಷಯ ತಜ್ಞರೊಂದಿಗೆ ಚರ್ಚಿಸಿ ಬದಲಾಯಿಸಲಾಗುವುದು ಎಂದು ತಿಳಿಸಿದರು. ಪ್ರಸ್ತುತ ಪಠ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳು ದೊರೆಯದಿರುವುದನ್ನು ಪರಿಗಣಿಸಿ ಉದ್ಯೋಗ ಪಡೆದುಕೊಳ್ಳಲು ಪೂರಕವಾಗುವ ಪಠ್ಯಕ್ರಮಗಳನ್ನು ಅಳವಡಿಸಲಾಗುವುದು ಎಂದು ತಿಳಿಸಿದರು. ಪ್ರಸ್ತುತ ಅತಿಥಿ ಉಪನ್ಯಾಸಕರಾಗಿ 11,500 ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ.

10 ವರ್ಷ ಹಾಗೂ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಉಪನ್ಯಾಸಕರನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ಹಳೆ ಶಿಕ್ಷಣ ಪದ್ಧತಿ ಬದಲಾಗಬೇಕು. ಆ ನಿಟ್ಟಿನಲ್ಲಿ ಸರಕಾರ, ಶಿಕ್ಷಣ ತಜ್ಞರು, ವಿಷಯ ತಜ್ಞರು ಚಿಂತಿಸಬೇಕು ಎಂದ ಅವರು, ಹೊಸ ಕಾಲೇಜುಗಳನ್ನು ಆರಂಭಿಸುವ ಬದಲು ಈಗಿರುವ ಎಲ್ಲ ಕಾಲೇಜುಗಳಿಗೆ ಅಗತ್ಯ ಉಪನ್ಯಾಸಕರ ನೇಮಕ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು. ಇಂದು ಶಿಕ್ಷಣ ಕ್ಷೇತ್ರ ಎತ್ತ ಸಾಗುತ್ತಿದೆ ಎನ್ನುವುದರ ಕುರಿತು ಪ್ರತಿ ನಾಗರಿಕರು ಅವಲೋಕಿಸಬೇಕಿದೆ.

ಪ್ರಾಥಮಿಕ ಶಿಕ್ಷಕರು ಸಂಬಳಕ್ಕಾಗಿ ಕೆಲಸ ಮಾಡಿಲ್ಲ. ಸಮಾಜ ಸೇವೆಗೆ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದಾರೆ ಎಂದ ಅವರು ಮಕ್ಕಳಲ್ಲಿ ಶಿಕ್ಷಕರನ್ನು ಪ್ರಶ್ನಿಸುವ ಮನೋಭಾವ ಹೆಚ್ಚಾದಾಗ ಶಿಕ್ಷಣ ಅಭಿವೃದ್ಧಿಯಾಗಲಿದೆ ಎಂದರು. ಕಾರ್ಯಕ್ರಮದ ಅಂಗವಾಗಿ ರಾಜ್ಯದ ಐಸಿಎಸ್‌ಇ ಶಾಲೆಗಳಲ್ಲಿ ಅತ್ಯುತ್ತಮ ಅಂಕ ಪಡೆದ 9 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ ಪ್ರೊ.ಮಲ್ಲೆಪುರಂ ಜಿ. ವೆಂಕಟೇಶ್, ಕವಿ ಡಾ.ಎಚ್.ಎಸ್. ವೆಂಕಟೇಶಮೂರ್ತಿ, ಶಾಸಕ ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಕನ್ನಡ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ವಿ. ಮತ್ತೂರ, ವಿಧಾನ ಪರಿಷತ್ ಸದಸ್ಯ ಆ.ದೇವೇಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಯಲ್ಲಪ್ಪಗೌಡ, ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಸಿದ್ದರಾಜು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News