ಆಪರೇಷನ್ ಕಮಲದ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎಚ್.ಡಿ.ದೇವೇಗೌಡ

Update: 2019-01-16 13:58 GMT

ಬೆಂಗಳೂರು, ಜ.16: ಬಿಜೆಪಿಯವರು ನಡೆಸಲು ಪ್ರಯತ್ನಿಸುತ್ತಿರುವ ಆಪರೇಷನ್ ಕಮಲದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಯಾವ ಶಾಸಕರನ್ನೂ ಹಿಡಿದಿಟ್ಟುಕೊಳ್ಳುವ ಅವಶ್ಯಕತೆ ನಮಗಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.

ಬುಧವಾರ ಪದ್ಮಾನಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಕುರಿತು ನಾನು ರಾಜ್ಯ ನಾಯಕರಾಗಲಿ, ರಾಷ್ಟ್ರೀಯ ಕಾಂಗ್ರೆಸ್ ನಾಯಕರಾಗಲಿ ಯಾರೊಂದಿಗೂ ಚರ್ಚೆ ಮಾಡಿಲ್ಲ ಎಂದರು.

ಬಿಜೆಪಿಯವರು ಆಪರೇಷನ್ ಕಮಲ ಪ್ರಾರಂಭ ಮಾಡಿದ್ದಾರೆ. ತುಂಬಾ ಸಂತೋಷ. ನನ್ನ ಸೊಸೆ ಸೇರಿದಂತೆ ನಮ್ಮ ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಾಗಿದ್ದಾರೆ. ಯಾರೊಬ್ಬರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಅವರು ಹೇಳಿದರು.

ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ತುಮಕೂರಿಗೆ ಹೋಗುತ್ತಿದ್ದೇನೆ. ನಾಳೆ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರ ಸಮುದಾಯದ ಸಮಾವೇಶವನ್ನು ಆಯೋಜಿಸಲಾಗಿದೆ. ಸಮಾವೇಶಕ್ಕೆ ಅಲ್ಪಸಂಖ್ಯಾತರ ಸಮುದಾಯದವರನ್ನು ಕರೆ ತರುವ ಜವಾಬ್ದಾರಿಯನ್ನು ಶಾಸಕರಿಗೆ ಹಂಚಿಕೆ ಮಾಡಲಾಗಿದೆ ಎಂದು ದೇವೇಗೌಡ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News