ಗೌರಿ ಹತ್ಯೆ ಪ್ರಕರಣ: ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Update: 2019-01-18 15:42 GMT
ಬೆಂಗಳೂರು, ಜ.18: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಬಂಧಿತರಾಗಿರುವ ಆರೋಪಿ ಅಮೋಲ್ ಕಾಳೆ ಸೇರಿ 16 ಆರೋಪಿಗಳ ಜಾಮೀನು ಅರ್ಜಿಯನ್ನು ಸಿಟಿ ಸಿವಿಲ್ ನ್ಯಾಯಾಲಯ ಮುಂದೂಡಿ ಆದೇಶಿಸಿದೆ.
ಅರ್ಜಿ ವಿಚಾರಣೆ ನ್ಯಾಯಾಧೀಶ ಶಿವಶಂಕರ್ ಅಮರಣ್ಣನವರ್ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಾದಿಸಿದ ವಕೀಲ ಟಿ.ಕೃಷ್ಣಮೂರ್ತಿ ಅವರು, ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾಗ 60 ರಿಂದ 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕು. ಎಸ್ಐಟಿ ಅಧಿಕಾರಿಗಳು ನಿಗದಿತ ಸಮಯದಲ್ಲಿ ಚಾರ್ಜ್ಶೀಟ್ ಸಲ್ಲಿಸದೆ ವಿಳಂಬ ಮಾಡಿದ್ದಾರೆ. 167(2) ಅಡಿ ಚಾರ್ಜ್ಶೀಟ್ ಸಲ್ಲಿಸಲು ವಿಳಂಬವಾದರೆ ಜಾಮೀನು ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಎಸ್ಐಟಿ ಪರ ವಾದಿಸಿದ ವಕೀಲ ಬಾಲನ್ ಅವರು, ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೇಳಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಲಯ ಜ.25ಕ್ಕೆ ವಿಚಾರಣೆಯನ್ನು ಮುಂದೂಡಿತು.