ಉಡುಪಿ ಜಿಲ್ಲೆಯಲ್ಲಿ ಸೀ ವಿಜಿಲ್ ಅಣಕು ಕಾರ್ಯಾಚರಣೆ: ಜಿಲ್ಲಾಧಿಕಾರಿ

Update: 2019-01-18 16:40 GMT

ಉಡುಪಿ, ಜ.18: ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿಗಳನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಭದ್ರತಾ ದೃಷ್ಠಿಯಿಂದ ಪ್ರಸ್ತುತ ಇರುವ ರಕ್ಷಣಾ ಕ್ರಮಗಳು ಎಷ್ಟು ಸಮರ್ಥವಾಗಿವೆ ಎಂಬುದನ್ನು ಸ್ವಯಂ ವೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ಜನವರಿ 22 ಮತ್ತು 23ರಂದು ಜಿಲ್ಲೆಯಾದ್ಯಂತ ಸೀ ವಿಜಿಲ್ ಅಣಕು ಕಾರ್ಯಾಚರಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸೀ ವಿಜಿಲ್ ಅಣಕು ಕಾರ್ಯಾಚರಣೆಯ ಪೂರ್ವಭಾವಿ ಸಿದ್ದತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಅಣಕು ಕಾರ್ಯಾಚರಣೆಯ ಸಂದರ್ಭದಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು, ಬೀಚ್‌ಗಳು, ದೇವಸ್ಥಾನ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣ ಹಾಗೂ ಪ್ರಮುಖ ವಾಣಿಜ್ಯ ಸಂಕೀರ್ಣದಲ್ಲಿ ವ್ಯಾಪಕ ತಪಾಸಣೆ ನಡೆಯಲಿದೆ. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಹಾಗೂ ಈ ಸ್ಥಳಗಳಲ್ಲಿ ಯಾವುದೇ ಅಪರಿಚಿತ ವ್ಯಕ್ತಿಗಳು ಅಥವಾ ವಸ್ತುಗಳು ಕಂಡು ಬಂದಲ್ಲಿ ಪೊಲೀಸ್ ಕಂಟ್ರೊಲ್ ರೂಂ 100ಕ್ಕೆ, ಕರಾವಳಿ ಕಾವಲು ಪಡೆ ಕಂಟ್ರೊಲ್ ರೂಂ 1093, ಜಿಲ್ಲಾಧಿಕಾರಿ ಕಂಟ್ರೊಲ್ ರೂಂ 1077ಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಅಣಕು ಕಾರ್ಯಾಚರಣೆ ಸಂದರ್ಭದಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಹಕಾರದಿಂದ ಯಾವುದೆ ಲೋಪವಾಗದಂತೆ ಕಾರ್ಯ ನಿರ್ಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು. ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ವಾಹನಗಳ ವ್ಯಾಪಕ ತಪಾಸಣೆ ನಡೆಯಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ದೋಣಿಗಳಲ್ಲಿ ಗುರುತಿನ ಚೀಟಿ ಮತ್ತು ಅಗತ್ಯ ದಾಖಲೆ ಪತ್ರಗಳನ್ನು ಇಟ್ಟುಕೊಳ್ಳುವಂತೆ ಹಾಗೂ ಸಮುದ್ರದಲ್ಲಿ ಅಪರಿಚಿತ ದೋಣಿಗಳು ಅಥವಾ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಮೀನುಗಾರರ ಮುಖಂಡರಿಗೆ ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರ್ಗಿ, ಮೀನುಗಾರರು ಈ ಮುನ್ನೆಚ್ಚರಿಕಾ ಕ್ರಮಗಳನ್ನು ಅಣುಕು ಕಾರ್ಯಾಚರಣೆ ಸಂದರ್ಭದಲ್ಲಿ ಮಾತ್ರವಲ್ಲದೇ ಸದಾ ಕಾಲ ಪಾಲಿಸುವುದು ದ್ರತೆಯ ದೃಷ್ಠಿಯಿಂದ ಅವಶ್ಯಕ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News