ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ರಾಜಶೇಖರ್ ಪಾಟೀಲ್

Update: 2019-01-19 14:27 GMT

ಬೆಂಗಳೂರು, ಜ. 19: ಸಚಿವ ಸ್ಥಾನ ತ್ಯಾಗ ಸೇರಿದಂತೆ ಪಕ್ಷದ ಹೈಕಮಾಂಡ್‌ನ ಎಲ್ಲ ಸೂಚನೆಗಳನ್ನು ಪಾಲಿಸಲು ನಾವು ಬದ್ಧರಾಗಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಬೆಂಗಳೂರು ಹೊರವಲಯದ ಈಗಲ್‌ಟನ್ ರೆಸಾರ್ಟ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪಕ್ಷಕ್ಕಾಗಿ ನಾವು ತ್ಯಾಗ ಮಾಡಬೇಕಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಭೆ ಕರೆದಿದ್ದು, ತೆರಳುತ್ತಿದ್ದೇವೆ ಎಂದರು.

ಆಪರೇಷನ್ ಕಮಲದ ಮಾಹಿತಿ ಹಿನ್ನೆಲೆಯಲ್ಲಿ ನಮ್ಮ ಶಾಸಕರು ರೆಸಾರ್ಟ್‌ನಲ್ಲಿದ್ದು, ಕ್ಷೇತ್ರಗಳ ಸಮಸ್ಯೆಗಳನ್ನು ನಾವು ಆಲಿಸುತ್ತೇವೆ, ಅಗತ್ಯವಿದ್ದರೆ ಕ್ಷೇತ್ರಗಳಿಗೂ ಹೋಗಿ ಬರುತ್ತೇವೆ. ನಾವು ಕ್ಷೇತ್ರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಅವರು ಇದೇ ವೇಳೆ ಸ್ಪಷ್ಟಣೆ ನೀಡಿದರು.

‘ನಮ್ಮ ಅಭಿಪ್ರಾಯವನ್ನು ಈಗಾಗಲೇ ಪಕ್ಷದ ಮುಖಂಡರಿಗೆ ತಿಳಿಸಿದ್ದು, ಎಲ್ಲ ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ನಾವು ಎಲ್ಲಿಯೂ ಹೋಗಿಲ್ಲ, ಹೋಗುವುದು ಇಲ್ಲ. ಪಕ್ಷದ ಮುಖಂಡರು ಸಭೆ ಕರೆದಿದ್ದು, ಅದರಲ್ಲಿ ಪಾಲ್ಗೊಳ್ಳಲಿದ್ದೇನೆ’

ಗಣೇಶ್,  ಕಂಪ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News