ಆಪರೇಷನ್ ಕಮಲಕ್ಕೆ ಬಲಿಯಾಗಬೇಡಿ: ಕಾಂಗ್ರೆಸ್ ಶಾಸಕರಿಗೆ ಕೆ.ಸಿ.ವೇಣುಗೋಪಾಲ್ ಸಲಹೆ

Update: 2019-01-21 15:43 GMT

ಬೆಂಗಳೂರು, ಜ.21: ತಮ್ಮ ಮುಂದಿನ ರಾಜಕೀಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಆಪರೇಷನ್ ಕಮಲಕ್ಕೆ ಯಾವುದೇ ಕಾರಣಕ್ಕೂ ಬಲಿಯಾಗಬೇಡಿ, ಪಕ್ಷದ ಬಗ್ಗೆ ನಿಷ್ಠೆಯನ್ನು ಉಳಿಸಿಕೊಳ್ಳಿ, ನಿಮಗೆ ಒಳ್ಳೆಯ ಭವಿಷ್ಯವಿದೆ ಎಂದು ಕಾಂಗ್ರೆಸ್ ಶಾಸಕರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಲಹೆ ನೀಡಿದ್ದಾರೆ.

ಬಿಡದಿ ಬಳಿಯ ಈಗಲ್‌ಟನ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ಶಾಸಕರನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಒಡ್ಡುವ ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗಬೇಡಿ. ನಿಮ್ಮ ಹಿತವನ್ನು ಕಾಪಾಡುವ ಜಬಾವ್ದಾರಿ ನಮ್ಮದು ಎಂದು ಅಭಯ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಬಿಜೆಪಿ ಕೈ ಹಾಕಿದೆ. ನಮ್ಮ ಕೆಲವು ಶಾಸಕರನ್ನು ಬಿಜೆಪಿಯವರು ಸಂಪರ್ಕ ಮಾಡುತ್ತಿರುವ ಮಾಹಿತಿ ನಮ್ಮ ಬಳಿಯಿದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿಯ ಜನಪ್ರಿಯತೆ ಕುಗ್ಗುತ್ತಿದೆ. ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಿಂದ ಇದು ಸಾಬೀತಾಗಿದೆ ಎಂದು ಅವರು ಹೇಳಿದ್ದಾರೆ.

ಆಮಿಷಗಳಿಗೆ ಬಲಿಯಾಗಿ ಬಿಜೆಪಿ ಸೇರಿದರೆ ಭವಿಷ್ಯದಲ್ಲಿ ನಿಮ್ಮ ರಾಜಕೀಯ ಏಳಿಗೆ ಸಾಧ್ಯವಿಲ್ಲ. ಮುಂದಿನ ರಾಜಕೀಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪಕ್ಷದಲ್ಲಿ ಉಳಿಯಿರಿ, ಕಾಂಗ್ರೆಸ್ ಪಕ್ಷ ನಿಮ್ಮನ್ನು ಎಂದಿಗೂ ಕೈ ಬಿಡುವುದಿಲ್ಲ ಎಂದು ವೇಣುಗೋಪಾಲ್ ಕಿವಿಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News