ಶುಕ್ರವಾರದಿಂದಲೇ ತೊಗರಿ ಖರೀದಿ ಕಾರ್ಯ ಆರಂಭ: ಸಚಿವ ಬಂಡೆಪ್ಪ ಕಾಶೆಂಪೂರ್
ಬೆಂಗಳೂರು, ಜ.24: ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿ ಕಾಲಾವಕಾಶವನ್ನು ರಾಜ್ಯ ಸರಕಾರ ವಿಸ್ತರಿಸಿದ್ದು, ನಾಳೆಯಿಂದಲೇ(ಶುಕ್ರವಾರ) ತೊಗರಿ ಖರೀದಿ ಕಾರ್ಯ ಪ್ರಾರಂಭವಾಗುತ್ತದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಉತ್ಪನ್ನಗಳನ್ನು ಖರೀದಿಸುವ ಕುರಿತು ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು. ಈ ಖರೀದಿ ಅವಧಿಯನ್ನು ಮಾ.12ರವರೆಗೆ ವಿಸ್ತರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಜೊತೆಗೆ ಬೆಂಬಲ ಬೆಲೆ ಅಡಿಯಲ್ಲಿ ತೊಗರಿಯನ್ನು ಪ್ರತಿ ಕ್ವಿಂಟಾಲ್ಗೆ 6100 ರೂ.ಗಳಂತೆ ಖರೀದಿಸಲಾಗುತ್ತದೆ ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ.
ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕ್ರೂಪ್ ಕೌರ್, ಎಪಿಎಂಸಿ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರು ಸೇರಿದಂತೆ ಕೆಲ ಅಧಿಕಾರಿಗಳು ಉಪಸ್ಥಿತರಿದ್ದರು.