ಬೆಂಗಳೂರು: ಪತ್ರಿಕೋದ್ಯಮ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

Update: 2019-01-24 14:22 GMT

ಬೆಂಗಳೂರು, ಜ.24: ಪತ್ರಿಕೋದ್ಯಮ ವ್ಯಾಸಂಗ ಮಾಡುತ್ತಿದ್ದ ಮುಂಬೈ ಮೂಲದ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೆ.ನಾರಾಯಣಪುರ ಬಳಿಯ ಖಾಸಗಿ ಕಾಲೇಜಿನಲ್ಲಿ 4ನೆ ಸೆಮಿಸ್ಟರ್ ಪತ್ರಿಕೋದ್ಯಮ ವ್ಯಾಸಂಗ ಮಾಡುತ್ತಿದ್ದ ಮುಂಬೈ ಮೂಲದ ಸೋಫಿಯಾ ದಮನಿ ಮೃತಪಟ್ಟಿರುವ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.

ಕಳೆದ ಒಂದು ವರ್ಷದಿಂದ ಬೆಂಗಳೂರಿನಲ್ಲಿ ನೆಲೆಸಿದ್ದ ಸೋಫಿಯಾ, ಬುಧವಾರ ಬೆಳಗ್ಗೆ ವಸತಿ ಗೃಹದಲ್ಲಿ ಸಹಪಾಠಿಗಳ ಜತೆ ಮಾತನಾಡಿ, ನಾನು ಇಂದು ಕಾಲೇಜಿಗೆ ಬರುವುದಿಲ್ಲ ಎಂದು ಹೇಳಿದ್ದರಿಂದ ಸಹಪಾಠಿಗಳು ಕಾಲೇಜಿಗೆ ತೆರಳಿದ್ದರು ಎನ್ನಲಾಗಿದೆ. ಸಂಜೆ ಕಾಲೇಜು ಮುಗಿಸಿಕೊಂಡು ಸಹಪಾಠಿಗಳು ವಸತಿ ಗೃಹಕ್ಕೆ ವಾಪಸಾದಾಗ ಈಕೆ ತನ್ನ ಕೊಠಡಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇದನ್ನು ಗಮನಿಸಿದ ಸಹಪಾಠಿಗಳು ಗಾಬರಿಯಾಗಿ ತಕ್ಷಣ ವಸತಿ ಗೃಹದ ಮುಖ್ಯಸ್ಥರಿಗೆ ತಿಳಿಸಿದ್ದು, ಅವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸೋಫಿಯಾ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News