70ನೇ ಗಣರಾಜ್ಯೋತ್ಸವ ಆಚರಣೆಗೆ ಭರದ ಸಿದ್ಧತೆ

Update: 2019-01-24 16:40 GMT

2300 ಮಕ್ಕಳಿಂದ ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳು

ಭದ್ರತೆಗೆ 1,400 ಪೊಲೀಸ್ ಸಿಬ್ಬಂದಿ ನೇಮಕ

ಬೆಂಗಳೂರು, ಜ. 24: ನಗರದಲ್ಲಿ 70 ನೆ ಗಣರಾಜ್ಯೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಬನ್ನೇರುಘಟ್ಟದ ನವಭಾರತ ನಿರ್ಮಾಣ ವಿದ್ಯಾಮಂದಿರ ಹಾಗೂ ಅಂಜನಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 700 ಮಕ್ಕಳ ಕಾರ್ಗಿಲ್ ಕಥನದ ದೃಶ್ಯಾವಳಿ ಈ ಬಾರಿಯ ಗಣರಾಜ್ಯೋತ್ಸವದ ವಿಶೇಷ ಆಕರ್ಷಣೆಯಾಗಿದೆ.

ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 70ನೆ ಗಣರಾಜ್ಯೋತ್ಸವದ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಬೆಳಗ್ಗೆ 8.58ಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಅವರು ಪರೇಡ್ ಮೈದಾನಕ್ಕಾಗಮಿಸಿ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಕಾರ್ಗಿಲ್ ಕಥನ ಸೇರಿದಂತೆ ಎಲೆಕ್ಟ್ರಾನಿಕ್ ಸಿಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶಮ್ಸ್ ಪ್ರೌಢಶಾಲೆಯ 800 ಮಕ್ಕಳ ನಮ್ಮ ಭಾರತ ಭವ್ಯ ಭಾರತ ನೃತ್ಯ, ನಾಗಸಂದ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ದೊಡ್ಡ ಬಿದರಕಲ್ಲು ವಿದ್ಯಾಕೇಂದ್ರದ 650 ಮಕ್ಕಳಿಂದ ರಾಷ್ಟ್ರೀಯ ಭಾವೈಕ್ಯತೆ, ಎಎಸ್‌ಸಿ ಕೇಂದ್ರ ಮತ್ತು ಕಾಲೇಜು ತಂಡದಿಂದ ‘ಮ್ಯೂಲ್ ಟ್ರಿಕ್ ರೈಡಿಂಗ್ ಟೀಮ್’, ಪ್ಯಾರಾ ತಂಡದಿಂದ ‘ರೂಮ್ ಇಂಟರ್‌ವೆನ್ಷನ್’ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಒಟ್ಟಾರೆಯಾಗಿ 2300 ಮಕ್ಕಳು ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣದ ಬಳಿಕ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪುಷ್ಪನಮನ ಸಲ್ಲಿಸಲಾಗುತ್ತದೆ. ಅನಂತರ ರಾಷ್ಟ್ರಪತಿ ಗೌರವರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ. ಈ ಬಾರಿಯ ಪಥಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್ ಅಂಡ್ ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲಾ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು 38 ಬ್ಯಾಂಡ್ ತುಕಡಿಗಳಲ್ಲಿ ಸುಮಾರು 1500ಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

9 ಸಾವಿರ ಆಸನ ವ್ಯವಸ್ಥೆ: ಈ ಬಾರಿಯ ಗಣರಾಜ್ಯೋತ್ಸವ ವೀಕ್ಷಿಸಲು ಅತಿಗಣ್ಯ, ಗಣ್ಯ, ಇತರೆ ಆಹ್ವಾನಿತರಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕವಾಗಿ 9 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. ಅತಿಗಣ್ಯ ವ್ಯಕ್ತಿಗಳಿಗೆ 2 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಜಿ-2 ಪ್ರವೇಶದ್ವಾರದ ಮೂಲಕ ಆಗಮಿಸಬೇಕು. ಸ್ವಾತಂತ್ರ ಹೋರಾಟಗಾರರು ರಕ್ಷಣಾ ಇಲಾಖೆ ಅಧಿಕಾರಿಗಳಿಗಾಗಿ 2 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಅವರು ಜೀವನ್ ಪ್ರವೇಶದ್ವಾರ ಬಳಕೆ ಮಾಡಿಕೊಳ್ಳಬೇಕು.

ಇತರೆ ಎಲ್ಲ ಇಲಾಖೆಯ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳು ಮತ್ತು ಬಿಎಸ್‌ಎಫ್ ಅಧಿಕಾರಿಗಳಿಗೆ 2 ಸಾವಿರ ಆಸನ ವ್ಯವಸ್ಥೆ ಇದ್ದು, ಜಿ-3 ಪ್ರವೇಶದ್ವಾರದ ಮೂಲಕ ಸಭಾಂಗಣಕ್ಕೆ ಆಗಮಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇನ್ನು ಸಾರ್ವಜನಿಕರಿಗೆ 3 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದ್ದು, ಸಮಾರಂಭಕ್ಕೆ ಆಗಮಿಸುವವರು ಜಿ-4 ಪ್ರವೇಶದ್ವಾರ ಬಳಕೆ ಮಾಡಿಕೊಳ್ಳಬಹುದಾಗಿದೆ.

ಸಮಾರಂಭದಲ್ಲಿ ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಲು ಅಗತ್ಯವಿರುವಷ್ಟು ಆ್ಯಂಬುಲೆನ್ಸ್ ಸೇವೆ, ವೈದ್ಯಕೀಯೇತರ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಜತೆಗೆ ನಗರದ ವಿವಿಧ ಆಸ್ಪತ್ರೆಗಳಲ್ಲಿ ಸಾಕಷ್ಟು ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಭಾಯಿಸಲು ಮೈದಾನದ ಸುತ್ತ ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ ಎಂದು ಮಂಜುನಾಥ್ ಪ್ರಸಾದ್ ವಿವರಿಸಿದರು.

ಪೊಲೀಸ್ ಕಣ್ಗಾವಲು: ಗಣರಾಜ್ಯೋತ್ಸವ ಸಮಾರಂಭಕ್ಕೆ ಅಗತ್ಯ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಆಯಕಟ್ಟಿನ ಪ್ರದೇಶಗಳಲ್ಲಿ 50ಕ್ಕೂ ಅಧಿಕ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ವ್ಯವಸ್ಥಿತ ಸಂಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. 12 ಡಿಸಿಪಿ, 23 ಎಸಿಪಿ, 81 ಇನ್ಸ್‌ಸ್ಪೆಕ್ಟರ್, 158 ಪಿಎಸ್‌ಐ, 117 ಎಎಸ್‌ಐ, 1072 ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳನ್ನು ಭದ್ರತಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುನಿಲ್ಕುಮಾರ್ ಹೇಳಿದರು.

ನಿಷೇಧ: ಸಮಾರಂಭದ ಸಭಾಂಗಣದೊಳಗೆ ನೀರಿನ ಬಾಟಲ್, ಸಿಗರೇಟ್, ಬೆಂಕಿಪೊಟ್ಟಣ, ಕರಪತ್ರಗಳು, ಬಣ್ಣದ ದ್ರಾವಣಗಳು, ವಿಡಿಯೋ ಮತ್ತು ಸ್ಟಿಲ್ ಕ್ಯಾಮರಾ, ಚಾಕು-ಚೂರಿ, ಕಪ್ಪುಕರವಸ್ತ್ರ, ಮಾದಕ ವಸ್ತು, ಬಾವುಟಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಮೈದಾನದ ಸುತ್ತಮುತ್ತ ಗಣ್ಯ ಮತ್ತು ಅತಿಗಣ್ಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ವಾಹನ ನಿಲುಗಡೆ ಪ್ರದೇಶದಲ್ಲೇ ವಾಹನಗಳನ್ನು ಪಾರ್ಕಿಂಗ್ ಮಾಡಬೇಕು ಹಾಗೂ ನಿಗದಿಪಡಿಸಿದ ದ್ವಾರದಲ್ಲಿ ಸಭಾಂಗಣ ಪ್ರವೇಶಿಸಿ ತಮ್ಮ ಆಸನಗಳಲ್ಲಿ ಆಸೀನರಾಗಬೇಕು ಎಂದು ಸುನಿಲ್ ಕುಮಾರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News