ಆಯವ್ಯಯದಲ್ಲಿ ರೈತ ಪರ ಯೋಜನೆಗಳಿಗೆ ಆದ್ಯತೆ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-01-25 14:35 GMT

ಬೆಂಗಳೂರು, ಜ. 25: ಮುಂದಿನ ತಿಂಗಳ 8ರಂದು ಬಜೆಟ್ ಮಂಡನೆಗೆ ಸಿದ್ಧತೆ ನಡೆಸಿರುವ ಮೈತ್ರಿ ಸರಕಾರದಲ್ಲಿ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ರೈತರ ಮುಖಂಡರೊಂದಿಗೆ ಬಜೆಟ್ ಮಂಡನೆ ಸಂಬಂಧ ಸಮಾಲೋಚನೆ ನಡೆಸಿದರು.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರ ಮುಖಂಡರ ಜತೆ ಸುದೀರ್ಘ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಮುಂದಿನ ಆಯವ್ಯಯದಲ್ಲಿ ರೈತಪರ ಉತ್ತಮ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಬಜೆಟ್ ಪೂರ್ವಭಾವಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಕುಮಾರಸ್ವಾಮಿ, ಆಯವ್ಯಯ ಮಂಡನೆ ಹಿನ್ನೆಲೆಯಲ್ಲಿ ಇಲಾಖಾವಾರು ಮಾಹಿತಿ ಪಡೆದಿದ್ದು, ಇಂದು ರೈತ ಮುಖಂಡರ ಸಲಹೆ-ಸೂಚನೆಗಳನ್ನು ಪಡೆದಿದ್ದೇನೆ. ರೈತರಿಗೆ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರ, ಕಬ್ಬಿನ ಬಾಕಿ ಕೊಡಿಸುವುದು ಸೇರಿದಂತೆ ಎಲ್ಲ ವಿಚಾರಗಳ ಚರ್ಚೆ ಮಾಡಲಾಗಿದೆ ಎಂದರು.

ಫೆ.6ರಿಂದ ಜಂಟಿ ಅಧಿವೇಶನ ಆರಂಭವಾಗಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಹೀಗಾಗಿ ರಾಜ್ಯಪಾಲರನ್ನು ಭೇಟಿ ಮಾಡಿ, ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವಂತೆ ಆಹ್ವಾನ ನೀಡಿ ಮನವಿ ಮಾಡಿದ್ದೇನೆ ಎಂದು ಹೇಳಿದರು.

ರಾಜ್ಯಪಾಲರ ಅಂಕಿತ: ವಿಧಾನ ಪರಿಷತ್ ನಾಮನಿರ್ದೇಶನ ಸ್ಥಾನಕ್ಕೆ ಕೆ.ಎ. ತಿಪ್ಪೇಸ್ವಾಮಿಯವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿತ್ತು. ರಾಜ್ಯಪಾಲರು ಇಂದು ತಿಪ್ಪೇಸ್ವಾಮಿ ಅವರನ್ನು ಮೇಲ್ಮನೆಗೆ ನಾಮನಿರ್ದೇಶನಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ರೈತರ ಸಭೆಯಲ್ಲಿ ನಟಿ ಭಾವನಾ: ರೈತ ಮುಖಂಡರೊಂದಿಗಿನ ಸಭೆಯಲ್ಲಿ ನಟಿ ಭಾವನಾ ಪಾಲ್ಗೊಂಡಿದ್ದರು. ಬಜೆಟ್‌ನಲ್ಲಿ ಮೀನುಗಾರರಿಗೆ ನೀಡುತ್ತಿರುವ ಸಬ್ಸಿಡಿ ಹೆಚ್ಚಿಸಬೇಕು. ಜತೆಗೆ ಏತ ನೀರಾವರಿ ಯೋಜನೆಗಳ ವಿದ್ಯುತ್ ಬಿಲ್ ಅನ್ನು ಸಂಬಂಧಿಸಿದ ಸಹಕಾರ ಸಂಘಗಳು ಭರಿಸಬೇಕೆಂಬ ಸರಕಾರದ ನಿಯಮವನ್ನು ಸಡಿಲಿಸಬೇಕು ಎಂದು ಭಾವನಾ ಒತ್ತಾಯಿಸಿದರು.

ರೈತರನ್ನು ಕರೆದು ಅವರ ಸಮಸ್ಯೆಗಳನ್ನು ಆಲಿಸುವುದು ಮುಖ್ಯವಲ್ಲ, ಬಜೆಟ್‌ನಲ್ಲಿ ರೈತರ ಯೋಜನೆಗಳ ಘೋಷಣೆ, ಅನುಷ್ಠಾನ ಮುಖ್ಯ. ಆ ನಿಟ್ಟಿನಲ್ಲಿ ಸರಕಾರ ಗಂಭೀರ ಕ್ರಮ ಕೈಗೊಳ್ಳಬೇಕು. ಕಬ್ಬಿನ ಬಾಕಿ ಕೊಡಿಸಲು ಸರಕಾರ ಕಠಿಣ ಕ್ರಮ ವಹಿಸಬೇಕೆಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.

‘ರೈತರ ಸಾಲಮನ್ನಾ, ಗ್ರಾಮೀಣಾಭಿವೃದ್ಧಿ, ನೀರಾವರಿ, ರೇಶ್ಮೆ ಸೇರಿದಂತೆ ರೈತರ ಅಭಿವೃದ್ಧಿ ದೃಷ್ಟಿಯಿಂದ ಬಜೆಜ್ ಆಶಾದಾಯಕವಾಗಿರುತ್ತದೆಂಬ ವಿಶ್ವಾಸವಿದೆ. ಒಂದು ವೇಳೆ ರೈತರ ವಿರುದ್ಧವಾಗಿದ್ದರೆ ಹೋರಾಟ ನಡೆಸಬೇಕಾಗುತ್ತದೆ’

-ಕೋಡಿಹಳ್ಳಿ ಚಂದ್ರಶೇಖರ್ ,ರೈತ ಮುಖಂಡ

‘ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರಕಾರ ಕೃಷಿ ಉತ್ಪನ್ನಗಳಿಗೆ ನಿಗದಿ ಪಡಿಸಿರುವ ಬೆಲೆ ಅವೈಜ್ಞಾನಿಕವಾಗಿದ್ದು, ಅದನ್ನು ಸರಿಪಡಿಸಬೇಕು. 10 ಸಾವಿರ ಕೋಟಿ ರೂ.ಆವರ್ತನಿಧಿ ಇರಿಸಬೇಕು. ಕೈಗಾರಿಕೆಗಳಿಗೆ ಕೃಷಿ ಭೂಮಿ ನೀಡುವ ಮೂಲಕ ರೈತರಿಗೆ ಅನ್ಯಾಯವಾಗುತ್ತಿದ್ದು, ಅದನ್ನು ನಿಲ್ಲಿಸಬೇಕು. ಬೆಲೆ ಕುಸಿತಕ್ಕೆ ಕಾರಣವಾಗಿರುವ ತೊಗರಿ ಆಮದು ನಿಲ್ಲಿಸಲು ಕೇಂದ್ರಕ್ಕೆ ನಿಯೋಗ ಕೊಂಡೊಯ್ಯಬೇಕು’

-ಮಾರುತಿ ಮಾನ್ಪಡೆ, ಅಧ್ಯಕ್ಷರು ಪ್ರಾಂತ ರೈತ ಸಂಘ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News