ಗೌರಿ ಲಂಕೇಶ್ ಹತ್ಯೆ ಪ್ರಕರಣ: ಅಮೋಲ್ ಕಾಳೆ ಸೇರಿ 16 ಆರೋಪಿಗಳ ಆದೇಶ ಕಾಯ್ದಿರಿಸಿದ ಕೋರ್ಟ್

Update: 2019-01-25 16:26 GMT

ಬೆಂಗಳೂರು, ಜ.25: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೋಲ್ ಕಾಳೆ ಸೇರಿ 16 ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ನಗರದ ಸಿಟಿ ಸಿವಿಲ್ ಕೋರ್ಟ್, ಆದೇಶವನ್ನು ಕಾಯ್ದಿರಿಸಿತು.

ಆರೋಪಿಗಳ ಪರ ವಾದಿಸಿದ ವಕೀಲರು, ಎಸ್‌ಐಟಿ ಅಧಿಕಾರಿಗಳು ನಿಗದಿತ ಅವಧಿಗೂ ಮುನ್ನವೇ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಆರೋಪಿಗಳ ವಿರುದ್ಧ ಕೋಕಾ ಕಾಯ್ದೆ ಜಾರಿಗೊಳಿಸಲಾಗಿದೆ. ಹೀಗಾಗಿ, ಜಾಮೀನು ನೀಡುವಂತೆ ಆರೋಪಿಗಳ ಪರ ವಕೀಲರು ಮನವಿ ಮಾಡಿದರು. ಈ ವೇಳೆ ಎಸ್‌ಐಟಿ ವಕೀಲರು, ಕೋಕಾ ಕಾಯ್ದೆ ಜಾರಿಗೊಳಿಸಿದ ನಂತರ ಕಡ್ಡಾಯ ಜಾಮೀನು ನೀಡಲು ಬರುವುದಿಲ್ಲ. ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ವಜಾಗೊಳಿಸಬೇಕೆಂದು ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಫೆ.7ಕ್ಕೆ ಆದೇಶವನ್ನು ಕಾಯ್ದಿರಿಸಿತು.

ಪತ್ರಕರ್ತೆ ಗೌರಿ ಲಂಕೇಶ್‌ರನ್ನು 2017ರ ಸೆಪ್ಟೆಂಬರ್ 5ರಂದು ಕೊಲೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ತನಿಖೆ ನಡೆಸಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಅಮೋಲ್ ಕಾಳೆ, ಪರಶುರಾಮ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ಬುದ್ದಿ ಸೇರಿ 16 ಆರೋಪಿಗಳ ಮೇಲೆ ದೋಷಾರೋಪಣಾ ಪಟ್ಟಿಯಲ್ಲಿ ಇವರ ಹೆಸರನ್ನು ನಮೂದಿಸಲಾಗಿತ್ತು. ಈ ಆರೋಪಿಗಳೆಲ್ಲರೂ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News