ಪ್ರಕರಣವನ್ನು ಇತ್ಯರ್ಥಪಡಿಸಲು ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ

Update: 2019-01-31 17:11 GMT

ಬೆಂಗಳೂರು, ಜ.31: ಮಾರತಹಳ್ಳಿ ವ್ಯಾಪ್ತಿಯ ದೇವರಬೀಸನಹಳ್ಳಿಯ ಖಾಸಗಿ ಶಾಲೆಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಘಟನೆ ಖಂಡಿಸಿ ಪ್ರತಿಭಟನೆ ನಡೆಸಿದ ಸಂಬಂಧ ತಮ್ಮ ವಿರುದ್ದ ದಾಖಲಾಗಿರುವ ಎಫ್‌ಐಆರ್ ರದ್ದುಕೋರಿ ಮತ್ತು ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ಕೋರಿ ಶಾಸಕ ಅರವಿಂದ್ ಲಿಂಬಾವಳಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಅಧೀನ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆ ಮಾಡಿ ಇತ್ಯರ್ಥಪಡಿಸಲು ಸೂಚಿಸಿದೆ.

ಈ ಸಂಬಂಧ ಶಾಸಕ ಅರವಿಂದ್ ಲಿಂಬಾವಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಅರವಿಂದ್‌ಕುಮಾರ್ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅಧೀನ ನ್ಯಾಯಾಲಯಕ್ಕೆ ಅರವಿಂದ್ ಲಿಂಬಾವಳಿ ಪ್ರಕರಣವನ್ನು ವಿಚಾರಣೆ ಮಾಡಿ ಇತ್ಯರ್ಥಪಡಿಸಲು ಸೂಚಿಸಿತು.

2017 ಫೆ.18ರಂದು ಖಾಸಗಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಘಟನೆ ನಡೆದಿತ್ತು. ಇದನ್ನು ಖಂಡಿಸಿ ಶಾಸಕ ಅರವಿಂದ ಲಿಂಬಾವಳಿ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ರಸ್ತೆ ತಡೆ ನಡೆಸಿ ಸಂಚಾರ ದಟ್ಟಣೆ ಉಂಟು ಮಾಡಿ ಸಾರ್ವಜನಿಕ ಜನಜೀವನಕ್ಕೆ ತೊಂದರೆ ನೀಡಲಾಗಿದೆ ಎಂದು ಆರೋಪಿಸಿ ಎಚ್‌ಎಎಲ್ ಠಾಣಾ ಪೊಲೀಸರು ಅರವಿಂದ ಲಿಂಬಾವಳಿ ಸೇರಿ 24 ಮಂದಿ ವಿರುದ್ಧ ಎಫ್‌ಐರ್ ದಾಖಲಿಸಿಕೊಂಡು ತನಿಖೆ ನಡೆಸಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಸದ್ಯ ಪ್ರಕರಣವು ನಗರದ ಸಿಸಿಎಚ್-82 ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ತಮ್ಮ ವಿರುದ್ಧದ ಪ್ರಕರಣ ಹಾಗೂ ಅಧೀನ ನ್ಯಾಯಾಲಯದ ವಿಚಾರಣೆ ಸುಳ್ಳು ಹಾಗೂ ಕಾನೂನುಬಾಹಿರವಾಗಿದೆ. ಹೀಗಾಗಿ, ಎಫ್‌ಐಆರ್ ರದ್ದುಗೊಳಿಸಬೇಕು ಹಾಗೂ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು. ಹೀಗಾಗಿ, ನ್ಯಾಯಪೀಠವು ಅಧೀನ ನ್ಯಾಯಾಲಯಕ್ಕೆ ಪ್ರಕರಣವನ್ನು ವಿಚಾರಣೆ ಮಾಡಿ ಇತ್ಯರ್ಥಪಡಿಸಲು ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News