×
Ad

‘ಆಪರೇಷನ್’ ಕಾರ್ಮೋಡದ ನಡುವೆ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ಕ್ಷಣಗಣನೆ

Update: 2019-02-05 18:17 IST

ಬೆಂಗಳೂರು, ಫೆ. 5: ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ನಾಳೆ(ಜ.6) ಬೆಳಗ್ಗೆ 10:30ಕ್ಕೆ ರಾಜ್ಯಪಾಲ ವಜುಬಾಯಿ ವಾಲಾ ಅವರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಈ ಮಧ್ಯೆ ‘ಆಪರೇಷನ್ ಕಮಲ’ದ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಅಸ್ಥಿರಕ್ಕೆ ವಿಪಕ್ಷ ಬಿಜೆಪಿ ಸತತ ಪ್ರಯತ್ನ ನಡೆಸಿರುವ ಹಿನ್ನೆಲೆಯಲ್ಲಿ ವಿಧಾನ ಮಂಡಲ ಜಂಟಿ ಅಧಿವೇಶನ ತೀವ್ರ ಕುತೂಹಲ ಸೃಷ್ಟಿಸಿದೆ. ಅಲ್ಲದೆ, ಎಲ್ಲ ಜನರ ಚಿತ್ತ ಅಧಿವೇಶನದತ್ತ ನೆಟ್ಟಿದೆ.
ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಡಳಿತಾರೂಢ ಮೈತ್ರಿ ಸರಕಾರ ಹಾಗೂ ವಿಪಕ್ಷ ಬಿಜೆಪಿ ಪರಸ್ಪರ ತಂತ್ರ-ಪ್ರತಿತಂತ್ರದ ಮೊರೆ ಹೊಕ್ಕಿವೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಉಪಾಹಾರ ಮತ್ತು ಔತಣಕೂಟ ಏರ್ಪಡಿಸುವ ಮೂಲಕ ಶಾಸಕರ ವಿಶ್ವಾಸಗಳಿಸಲು ಮುಂದಾಗಿದೆ.

ಸರಕಾರದ ಮುನ್ನೋಟ: ಈ ಬೆಳವಣಿಗೆಗಳ ನಡುವೆಯೇ ರಾಜ್ಯಪಾಲ ವಜುಬಾಯಿ ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದು, ಭವಿಷ್ಯದ ಯೋಜನೆಗಳು ಹಾಗೂ ಮೈತ್ರಿ ಸರಕಾರದ ಮುನ್ನೋಟ ಏನೆಂಬುದನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಲಿದ್ದಾರೆ.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜ.8ರ ಶುಕ್ರವಾರ ಮಧ್ಯಾಹ್ನ 12:30ಕ್ಕೆ ಆಯವ್ಯಯ ಮಂಡನೆ ಮಾಡಲಿದ್ದಾರೆ. ಸರಕಾರದ ಎರಡನೆ ಬಜೆಟ್ ಇದಾಗಿದ್ದು, ರೈತರು, ಕಾರ್ಮಿಕರು, ಮಹಿಳೆಯರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದವರು ಸೇರಿದಂತೆ ಎಲ್ಲ ವರ್ಗದವರನ್ನೂ ಓಲೈಕೆಗೆ ಭರಪೂರ ಕೊಡುಗೆಗಳನ್ನು ಪ್ರಕಟಿಸುವ ನಿರೀಕ್ಷೆ ಇದೆ.

ಹಣಕಾಸು ಖಾತೆಯನ್ನು ಹೊಂದಿರುವ ಸಿಎಂ ಕುಮಾರಸ್ವಾಮಿ ಹದಿನೈದು-ಇಪ್ಪತ್ತು ದಿನಗಳಿಂದ ರೈತರು, ಮಹಿಳೆಯರು ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖರು, ಇಲಾಖೆವಾರು ಸಚಿವರು, ಅಧಿಕಾರಿಗಳ ಸಭೆ ನಡೆಸಿ ಬಜೆಟ್‌ನಲ್ಲಿ ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ವಾಗ್ಯುದ್ಧಕ್ಕೆ ವೇದಿಕೆ ಸಿದ್ಧ: ರಾಜ್ಯದಲ್ಲಿನ ಭೀಕರ ಸ್ವರೂಪದ ಬರ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಬರ ನಿರ್ವಹಣೆಯಲ್ಲಿನ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಮೈತ್ರಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷ ಬಿಜೆಪಿ ಸಜ್ಜಾಗಿದೆ.
ಈ ಮಧ್ಯೆ ರಾಷ್ಟ್ರೀಯ ಮುಖಂಡ ಸಭೆ ನೆಪದಲ್ಲಿ ಹರಿಯಾಣದ ಗುರುಗ್ರಾಮದ ರೆಸಾರ್ಟ್‌ಗೆ ಬಿಜೆಪಿ ತನ್ನ ಶಾಸಕರನ್ನು ಕರೆದೊಯ್ದು ಉಳಿಸಿಕೊಂಡಿದ್ದರು. ಈ ಮಧ್ಯೆ ಆಪರೇಷನ್ ಭೀತಿಯಿಂದ ಕಾಂಗ್ರೆಸ್ ತನ್ನ ಶಾಸಕರನ್ನು ನಗರದ ಹೊರ ವಲಯದ ರೆಸಾರ್ಟ್‌ನಲ್ಲಿ ಹಿಡಿದಿಟ್ಟುಕೊಂಡಿತ್ತು.
ಇದೇ ವೇಳೆ ಶಾಸಕರಾದ ಕಂಪ್ಲಿ ಗಣೇಶ್ ಮತ್ತು ಆನಂದ್ ಸಿಂಗ್ ನಡುವೆ ಹೊಡೆದಾಟ ನಡೆದಿತ್ತು. ಆ ಬಳಿಕ ಘಟನೆ ಮುಚ್ಚಿಹಾಕಲು ಕಾಂಗ್ರೆಸ್ ಮುಖಂಡರು ನಡೆಸಿದ ಕಸರತ್ತು, ಅಧಿವೇಶನದಲ್ಲಿ ಆಡಳಿತ ಮತ್ತು ವಿಪಕ್ಷ ಬಿಜೆಪಿಯ ನಡುವೆ ಮಾತಿನ ಚಕಮಕಿ, ವಾಗ್ಯುದ್ಧಕ್ಕೆ ಕಾರಣವಾಗುವ ಸಾಧ್ಯತೆಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News