ಬಜೆಟ್‌ಗೆ ಅನುಮೋದನೆ ಸಿಗುತ್ತದೆ: ಮಾಜಿ ಸಿಎಂ ಸಿದ್ದರಾಮಯ್ಯ

Update: 2019-02-05 14:43 GMT

ಬೆಂಗಳೂರು, ಫೆ.5: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಜೆಟ್ ಮಂಡಿಸಲಿದ್ದು, ಅದಕ್ಕೆ ಅನುಮೋದನೆಯೂ ಸಿಗುತ್ತದೆ. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಂಗಳವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರಕಾರಕ್ಕೆ ಏನು ಆಗುವುದಿಲ್ಲ. ಕಲ್ಲು ಬಂಡೆ ರೀತಿಯಲ್ಲಿ ಸರಕಾರ ಸ್ಥಿರವಾಗಿದೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಅತೃಪ್ತರಿಲ್ಲ, ಎಲ್ಲ ಶಾಸಕರು ತೃಪ್ತರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಸದನಕ್ಕೆ ಬರುತ್ತಾರೆ. ಅಧಿವೇಶನ ಸುಗಮವಾಗಿ ನಡೆಯುತ್ತದೆ. ಬಿಜೆಪಿಯವರ ಆಪರೇಷನ್ ಕಮಲ ಪದೇ ಪದೇ ವಿಫಲವಾಗುತ್ತಿದ್ದು, ಅವರು ಮುಖಭಂಗವನ್ನು ಅನುಭವಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಂದಲೂ ಸ್ಪರ್ಧಿಸುವಂತೆ ಒತ್ತಡವಿದೆ. ಆದರೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಲಾಗಿದೆ ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News