×
Ad

'ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಾಣವಾದಲ್ಲಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗುವುದು'

Update: 2019-02-08 23:53 IST

ಮಂಗಳೂರು, ಫೆ. 8: ನಗರದಲ್ಲಿ ಬಹುಮಹಡಿ ಕಟ್ಟಡಗಳಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಒದಗಿಸದಿರುವುದು ಮತ್ತಿತರ ಕಟ್ಟಡ ನಿಯಮಗಳನ್ನು ಉಲ್ಲಂಘಿಸಿದ ಕಟ್ಟಡಗಳ ಅಂಕಿ ಅಂಶ ಸಹಿತ ಮಾಹಿತಿಯನ್ನು ಸಂಗ್ರಹಿಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ತಿಳಿಸಿದ್ದಾರೆ.

ಶುಕ್ರವಾರ ನಡೆದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ನಾಗರಿಕರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ನಗರದಲ್ಲಿ ಕೆಲವು ಬಹು ಮಹಡಿ ಕಟ್ಟಡಗಳಲ್ಲಿ ವಾಹನ ಪಾರ್ಕಿಂಗ್‌ಗೆ ಮೀಸಲಿರಿಸಿದ ಜಾಗದಲ್ಲಿ ಅಂಗಡಿಗಳನ್ನು ತೆರೆದು ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿದ್ದು, ಇದರಿಂದ ವಾಹನಗಳನ್ನು ರಸ್ತೆ ಬದಿ ನಿಲ್ಲಿಸಬೇಕಾಗಿದೆ. ರಸ್ತೆಗಳನ್ನು ಅಗಲ ಮಾಡಿದ್ದರೂ ಅದೆಲ್ಲವೂ ವಾಹನ ಪಾರ್ಕಿಂಗ್‌ಗೆ ಅವಕಾಶ ಮಾಡಿ ಕೊಟ್ಟಂತಾಗಿದೆ. ಅಲ್ಲದೆ ಇದರಿಂದ ಸುಗಮ ವಾಹನ ಸಂಚಾರಕ್ಕೆ ತಡೆ ಉಂಟಾಗುತ್ತಿದೆ.ಈ ಬಗ್ಗೆ ಮಹಾನಗರ ಪಾಲಿಕೆಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಪೊಲೀಸರು ಈ ಬಗ್ಗೆ ಒತ್ತಡ ತರಬೇಕು ಎಂದು ನಾಗರಿಕರು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಕಟ್ಟಡ ನಿಯಮ ಉಲ್ಲಂಸಿದ ಕಟ್ಟಡಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಿ ಈಗಾಗಲೇ ಮಹಾನಗರ ಪಾಲಿಕೆಗೆ ವರದಿ ಸಲ್ಲಿಸಲಾಗಿದೆ. ಆದರೆ ಪಾಲಿಕೆಯಿಂದ ಯಾವುದೇ ಕ್ರಮ ಆಗಿಲ್ಲ. ಆದ್ದರಿಂದ ಜಿಲ್ಲಾಧಿಕಾರಿಗಳಿಗೆ ಈ ಮಾಹಿತಿಯನ್ನು ಸಲ್ಲಿಸಿ ಕ್ರಮಕ್ಕೆ ವಿನಂತಿಸಲಾಗುವುದು ಎಂದರು.

ಕೇಬಲ್ ಟಿ.ವಿ. ಸಮಸ್ಯೆ ಕುರಿತಂತೆ ಗ್ರಾಹಕರೊಬ್ಬರು ಕರೆ ಮಾಡಿ, ಹೊಸ ನಿಯಮಾವಳಿಯಿಂದಾಗಿ ಈಗ ಕೇಬಲ್ ಟಿವಿಯೂ ಇಲ್ಲ, ಸೆಟ್ ಅಪ್ ಬಾಕ್ಸ್ ವ್ಯವಸ್ಥೆಯೂ ಇಲ್ಲ. ಸೆಟ್ ಅಪ್ ಬಾಕ್ಸ್‌ಗೆ ನೀಡಿದ 4,500 ರೂ. ಪಾವತಿಸಲಾಗಿದೆ. ಈಗ ಎರಡೂ ವ್ಯವಸ್ಥೆ ಇಲ್ಲ ಎಂದು ದೂರಿದರು.

105 ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ 34 ಕರೆಗಳು ಬಂದವು. ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್, ದ.ಕ. ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ, ಡಿಸಿಪಿಗಳಾದ ಹನುಮಂತರಾಯ ಮತ್ತು ಉಮಾ ಪ್ರಶಾಂತ್, ಎಸಿಪಿಗಳಾದ ಮಂಜುನಾಥ್ ಶೆಟ್ಟಿ ಮತ್ತು ಶ್ರೀನಿವಾಸ ಗೌಡ, ಇನ್‌ಸ್ಪೆಕ್ಟರ್‌ಗಳಾದ ಶಿವಪ್ರಕಾಶ್, ಅಮಾನುಲ್ಲಾ, ಗುರುದತ್ತ ಕಾಮತ್, ಎಎಸ್ಸೈ ಯೋಗೇಶ್ವರನ್, ಎಚ್‌ಸಿ ಪುರುಷೋತ್ತಮ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News