ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಶಾಸಕ ಬಿ.ಸಿ.ಪಾಟೀಲ್

Update: 2019-02-09 13:16 GMT

ಬೆಂಗಳೂರು, ಫೆ. 9: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಶಾಸಕ ಬಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.

ಶನಿವಾರ ಬೆಳಗ್ಗೆ ಇಲ್ಲಿನ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಶಾಸಕ ಬಿ.ಸಿ.ಪಾಟೀಲ್, ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ. ಖಾಸಗಿ ಸುದ್ದಿವಾಹಿನಿಗಳಲ್ಲಿ ಬಿ.ಸಿ.ಪಾಟೀಲ್ ಮುಂಬೈಗೆ ತೆರಳಿದ್ದಾರೆಂಬ ಸುದ್ದಿ ಬಿತ್ತರವಾದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಬೇಸರ ಇರುವುದು ನಿಜ: ನನ್ನನ್ನು ಸಚಿವ ಸ್ಥಾನಕ್ಕೆ ಪರಿಗಣಿಸದ ಹಿನ್ನೆಲೆಯಲ್ಲಿ ಅಸಮಾಧಾನ ಇರುವುದು ನಿಜ. ಆದರೆ, ನಾನು ಯಾವುದೇ ಕಾರಣಕ್ಕೂ ಪಕ್ಷವನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ಅಂತಹ ಯಾವುದೇ ಸಮಸ್ಯೆಯೂ ಉದ್ಭವಿಸಿಲ್ಲ ಎಂದು ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದರು.

ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ನೋವುಗಳನ್ನು ಹೇಳಿಕೊಂಡಿದ್ದೇನೆ. ‘ಮುಂಬೈಗೆ ಹೋಗಿದ್ದೇನೆ, ಅತೃಪ್ತರ ಗುಂಪಿಗೆ ಹೋಗಿದ್ದೇನೆ’ ಎಂದು ಮಾಧ್ಯಮಗಳ ಸುದ್ದಿ ಶುದ್ಧ ಸುಳ್ಳು ಎಂದು ಪಾಟೀಲ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News