ಫೆ.10 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ

Update: 2019-02-09 14:08 GMT

ಹುಬ್ಬಳ್ಳಿ, ಫೆ.9: ಲೋಕಸಭಾ ಚುನಾವಣಾ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರಮೋದಿ ರವಿವಾರ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ನಗರದ ಗಬ್ಬೂರು ಬಳಿಯ ಕೆಎಲ್‌ಇ ಮೈದಾನದಲ್ಲಿ ಆಯೋಜಿಸಿರುವ ಬಹಿರಂಗ ಸಮಾವೇಶವನ್ನುದ್ದೇಶಿಸಿ ನರೇಂದ್ರಮೋದಿ ಭಾಷಣ ಮಾಡಲಿರುವ ಪ್ರಧಾನ ವೇದಿಕೆಯ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಇದಲ್ಲದೆ, ಸಂಸದರು, ಶಾಸಕರು ಸೇರಿದಂತೆ ಪ್ರಮುಖ ಮುಖಂಡರು ಆಸೀನರಾಗಲು ವ್ಯವಸ್ಥೆಯನ್ನು ಮಾಡಲಾಗಿದೆ.

ಸಮಾವೇಶದಲ್ಲಿ ಸುಮಾರು 90 ಸಾವಿರ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗುತ್ತಿದ್ದು, ಇದಕ್ಕಾಗಿ 65 ಎಕರೆ ಜಾಗವನ್ನು ಸ್ವಚ್ಛಗೊಳಿಸಲಾಗಿದೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ವಿಶೇಷ ಭದ್ರತಾ ಪಡೆ ಈಗಾಗಲೆ ಹುಬ್ಬಳ್ಳಿಗೆ ಆಗಮಿಸಿದ್ದು, ಸಮಾವೇಶದ ಸಿದ್ಧತೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಸಂಸದ ಪ್ರಹ್ಲಾದ್ ಜೋಶಿ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿಯ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ಪ್ರಧಾನಿ ಮೋದಿ, ಐಐಟಿ ಕಟ್ಟಡದ ಶಂಕುಸ್ಥಾಪನೆ, ಕಿಮ್ಸ್ ಕಟ್ಟಡ ಉದ್ಘಾಟನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News