ಶಾಸಕ ಮಹೇಶ್ ಕುಮಟಳ್ಳಿ ನಾಪತ್ತೆ ಪ್ರಕರಣ: ರಮೇಶ್ ಜಾರಕಿಹೊಳಿ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2019-02-11 12:49 GMT
ಶಾಸಕ ಮಹೇಶ್ ಕುಮಟಳ್ಳಿ\ ರಮೇಶ್ ಜಾರಕಿಹೊಳಿ

ಬೆಂಗಳೂರು, ಫೆ.11: ಅಥಣಿ ಶಾಸಕ ಮಹೇಶ್ ಕುಮಟಳ್ಳಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. 

ಈ ಕುರಿತು ಬೆಳಗಾವಿ ಜಿಲ್ಲೆಯ ಅಥಣಿಯ ನಿವಾಸಿ ವಕೀಲ ಹಾಗೂ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಮೋದ ದಯಾನಂದ ಹಿರೇಮನಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಫಣೀಂದ್ರ ಹಾಗೂ ನ್ಯಾಯಮೂರ್ತಿ ನಟರಾಜನ್ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಅಕ್ರಮ ಬಂಧನದಲ್ಲಿಟ್ಟುಕೊಂಡಿದ್ದು, ಅವರನ್ನು ಪತ್ತೆ ಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ಶಾಸಕ ಮಹೇಶ್ ಕುಮಟಳ್ಳಿಯವರ ಜೀವಕ್ಕೆ ಅಪಾಯವಿದೆ. ಅವರನ್ನು ಪತ್ತೆ ಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಗೃಹ ಇಲಾಖೆ, ರಮೇಶ್ ಜಾರಕಿಹೊಳಿ ಹಾಗೂ ಅಥಣಿ ಪೊಲೀಸರಿಗೆ ನಿರ್ದೇಶನ ನೀಡಬೇಕು. ಅಲ್ಲದೇ ಶಾಸಕರ ನಾಪತ್ತೆ ವಿಚಾರವಾಗಿ ರಮೇಶ್ ಜಾರಕಿಹೊಳಿಯವರನ್ನು ತಕ್ಷಣ ವಿಚಾರಣೆಗೊಳಪಡಿಸಲು ಅಥಣಿ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ಪ್ರಕರಣವೇನು: ರಮೇಶ್ ಜಾರಕಿಹೊಳಿಯವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ನನ್ನ ಮೇಲೆ ತುಂಬಾ ಒತ್ತಡ ಹಾಕುತ್ತಿದ್ದಾರೆ. ಅಲ್ಲದೇ ಅಪಹರಿಸಿಕೊಂಡು ಹೋಗುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಮಹೇಶ್ ಕುಮಟಳ್ಳಿ ಇತ್ತೀಚಿಗೆ ಅರ್ಜಿದಾರರ ಮುಂದೆ ಹೇಳಿಕೊಂಡಿದ್ದರು. ಈ ಮಧ್ಯೆ ಕಳೆದ ಒಂದು ತಿಂಗಳಿಂದ ಶಾಸಕರು ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಅಲ್ಲದೇ ಅಥಣಿಯಲ್ಲೂ ಅವರು ಕಾಣಿಸಿಕೊಂಡಿಲ್ಲ. ಈ ಬಗ್ಗೆ ವಿಚಾರಿಸಿದರೆ ಅವರ ಕುಟುಂಬದವರು, ಸಂಬಂಧಿಕರು, ಆಪ್ತರು ಸ್ಪಷ್ಟ ಉತ್ತರ ಕೊಡುತ್ತಿಲ್ಲ. ರಮೇಶ್ ಜಾರಕಿಹೊಳಿಯವರ ಬಗ್ಗೆ ಮಹೇಶ ಕುಮಟಳ್ಳಿಯವರು ಕೆಲವೊಂದು ಅನುಮಾನಾಸ್ಪದ ಹೇಳಿಕೆ ನೀಡಿದ್ದನ್ನು ಗಮನಿಸಿದರೆ ರಮೇಶ್ ಜಾರಕಿಹೊಳಿಯವರೇ ಶಾಸಕರನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದಾರೆ ಎಂದು ಅರ್ಜಿದಾರರು ಅನುಮಾನ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಫೆ.7ರಂದು ಅರ್ಜಿದಾರರು ಅಥಣಿ ಪೊಲೀಸರಿಗೆ ದೂರು ಕೊಟ್ಟರು. ಆದರೆ, ದೂರು ಸ್ವೀಕರಿಸಿದ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ಬದಲಿಗೆ ಮಹೇಶ ಕುಮಟಳ್ಳಿಯವರು ವಿಧಾನಸಭೆಯ ಬಜೆಟ್ ಅಧಿವೇಶನಕ್ಕೆ ಹಾಜರಾಗಲು ಬೆಂಗಳೂರಿನಲ್ಲಿ ಇರಬಹುದು ಎಂದು ಹಾರಿಕೆ ಉತ್ತರ ನೀಡಿದರು. ಅದಕ್ಕಾಗಿ ಅರ್ಜಿದಾರರು ತಕ್ಷಣ ಬೆಂಗಳೂರಿಗೆ ಆಗಮಿಸಿ ಶಾಸಕರ ಭವನಕ್ಕೆ ಬಂದು ನೋಡಿದರೆ ಅಲ್ಲಿ ಶಾಸಕರು ಸಿಕ್ಕಿಲ್ಲ. ಇದೇ ವೇಳೆ ಅರ್ಜಿದಾರರರು ರಮೇಶ್ ಜಾರಕಿಹೊಳಿಯವರ ಕುರಿತು ವಿಚಾರಿಸಿದರೆ ಅವರ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ. ಹೀಗಾಗಿ, ಅಕ್ರಮ ಬಂಧನದಲ್ಲಿರುವ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಮತ್ತು ಈ ವಿಚಾರವಾಗಿ ರಮೇಶ್ ಜಾರಕಿಹೊಳಿ ಅವರನ್ನು ತಕ್ಷಣ ವಿಚಾರಣೆಗೊಳಪಡಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News