ವಾಸ್ತವಿಕ ಬಜೆಟ್ ಮಂಡನೆಗೆ ಬಿಬಿಎಂಪಿ ಸಿದ್ಧತೆ: ಹೇಮಲತಾ ಗೋಪಾಲಯ್ಯ

Update: 2019-02-11 16:20 GMT

ಬೆಂಗಳೂರು, ಫೆ.11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫೆ.18ರಂದು ಬಜೆಟ್ ಮಂಡನೆಗೆ ಸಕಲ ಸಿದ್ಧತೆ ಕೈಗೊಂಡಿದ್ದು, ಈ ಬಾರಿ ವಾಸ್ತವಿಕ ಬಜೆಟ್ ಮಂಡನೆಗೆ ಒತ್ತು ನೀಡುವುದಾಗಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ಬಜೆಟ್ ಮಂಡನೆ ಸಂಬಂಧ ಪತ್ರಕರ್ತರ ಸಲಹೆ ಸೂಚನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಬಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎಲ್ಲ ವರ್ಗ ಹಾಗೂ ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತಹ ಜನಪರ ಬಜೆಟ್ ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಬಜೆಟ್‌ನ್ನು ಜನಪರವಾಗಿ ಮಂಡಿಸಲಾಗುತ್ತದೆ ಎಂದು ಹೇಳಿದರು.

ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ನಗರಾಭಿವೃದ್ಧಿಗೆ ಐದು ವರ್ಷಕ್ಕಾಗಿ 8015 ಕೋಟಿ ರೂ. ಹಣ ಮೀಸಲಿಟ್ಟಿದ್ದಾರೆ. ಪ್ರಸಕ್ತ ವರ್ಷದಲ್ಲಿ 2,300 ಕೋಟಿ ರೂ. ಗಳ ಅನುದಾನ ಒದಗಿಸಲಾಗಿದ್ದು, ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ವಾಸ್ತವಿಕ ಬಜೆಟ್ ಮಂಡಿಸಲಾಗುವುದು ಎಂದರು.

ಪ್ರತಿವರ್ಷ ಬಿಬಿಎಂಪಿ ಶಾಲಾ ಮಕ್ಕಳಿಗೆ ನಿಗದಿತ ಸಮಯದಲ್ಲಿ ಶಾಲಾ ಸಮವಸ್ತ್ರ ಮತ್ತು ಶೂ ನೀಡಲಾಗುತ್ತಿಲ್ಲ. ಈ ಬಾರಿ ಶಾಲೆ ಆರಂಭದಲ್ಲಿಯೇ ಮಕ್ಕಳಿಗೆ ಸಮವಸ್ತ್ರ ಶೂ ವಿತರಿಸಲಾಗುವುದು. ಹೆಣ್ಣು ಮಕ್ಕಳಿಗೆ ವಿಶೇಷ ಯೋಜನೆಗಳನ್ನು ರೂಪಿಸಲಾಗುವುದು. ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿ ಮಳೆ ನೀರು ಕೊಯ್ಲು, ಹಿಂಗು ಗುಂಡಿ ನಿರ್ಮಾಣ ಹಾಗೂ ಹಸಿರು ವಲಯಗಳ ಹೆಚ್ಚಳಕ್ಕೆ ಆದ್ಯತೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.

ಒಟ್ಟಾರೆ ಸಂಘ ಸಂಸ್ಥೆಗಳು, ನಾಗರಿಕರು, ತಜ್ಞರು, ಹಿರಿಯ ಮುಖಂಡರೊಂದಿಗೆ ಚರ್ಚಿಸಿ ವಾಸ್ತವಿಕ ಬಜೆಟ್ ಮಂಡಿಸಿ, ಜನಮನ ಗೆಲ್ಲುವ ವಿಶ್ವಾಸವನ್ನು ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ವ್ಯಕ್ತಪಡಿಸಿದರು.

ಬಜೆಟ್‌ನಲ್ಲಿ ಸಣ್ಣ ಪತ್ರಿಕೆಗಳಿಗೆ ಸಹಾಯಧನ, ಸಮರ್ಪಕ ಆಸ್ತಿ ತೆರಿಗೆ, ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆಗಳ ಜೀರ್ಣೋದ್ಧಾರ, ಕೌಶಲ್ಯ ತರಬೇತಿ ಸೇರಿದಂತೆ ವಿವಿಧ ವಿಚಾರಗಳಿಗೆ ಆದ್ಯತೆ ನೀಡಲಾಗುವುದು.

-ಹೇಮಲತಾ ಗೋಪಾಲಯ್ಯ, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News