ಪ್ರತಿ ಜಿಲ್ಲೆಯಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-02-18 14:15 GMT

ಬೆಂಗಳೂರು, ಫೆ.18: ರಾಜ್ಯದ ಒಂಭತ್ತು ಜಿಲ್ಲೆಗಳಲ್ಲಿ ಸ್ಥಳೀಯ ವೈವಿಧ್ಯತೆ ಅನುಗುಣವಾಗಿ ಕೈಗಾರಿಕಾ ಕ್ಲಸ್ಟರ್‌ಗಳನ್ನು ಸ್ಥಾಪಿಸಲು ಉದ್ದೇಶಿಸಿದ್ದು, ಪ್ರತಿ ಜಿಲ್ಲೆಯಲ್ಲೂ ಒಂದು ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಸೋಮವಾರ ಇಲ್ಲಿನ ವಸಂತ ನಗರದ ಖಾಸಗಿ ಹೊಟೇಲ್‌ನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಏರ್ಪಡಿಸಿದ್ದ, ಚೀನಾ ಮಾದರಿ ಕೈಗಾರಿಕಾ ಕ್ಲಸ್ಟರ್‌ಗಳ ಅಭಿವೃದ್ಧಿ ಯೋಜನೆ ಅಡಿ ಕೊಪ್ಪಳ ಟಾಯ್ಸಿ ಕ್ಲಸ್ಟರ್, ಬಳ್ಳಾರಿ ಜವಳಿ ಕ್ಲಸ್ಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಶ್ವದರ್ಜೆಯ ಕೈಗಾರಿಕಾ ಕ್ಲಸ್ಟರ್ ಸ್ಥಾಪನೆ ಮಾಡುವ ಉದ್ದೇಶವಿದ್ದು, ಇದರ ಮೊದಲ ಭಾಗವಾಗಿ 2 ಜಿಲ್ಲೆಗಳಲ್ಲಿ ಕೈಗಾರಿಕಾ ಕ್ಲಸ್ಟರ್‌ಗೆ ಚಾಲನೆ ನೀಡಲಾಗಿದೆ ಎಂದ ಅವರು, ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯವಿರುವ ಪ್ರೋತ್ಸಾಹ ಹಾಗೂ ಸಹಕಾರ ನೀಡಲು ರಾಜ್ಯ ಸರಕಾರ ಸಿದ್ಧವಿದೆ. ಹೂಡಿಕೆದಾರರ ನಿರೀಕ್ಷೆಗೆ ತಕ್ಕಂತೆ ಪ್ರೋತ್ಸಾಹ ನೀಡಲಿದ್ದು, ಕರ್ನಾಟಕ ಹೂಡಿಕೆ ಸ್ನೇಹಿಯಾಗಿದೆ ಎಂದರು.

ರಾಜ್ಯದಲ್ಲಿ 7,940 ಕಿ.ಮೀ. ರಸ್ತೆ-ಸೇತುವೆ ನಿರ್ಮಾಣ ಮಾಡುವ ಮೂಲಕ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಒತ್ತು ನೀಡಲಾಗಿದೆ. ಸಿಲಿಕಾನ್ ವ್ಯಾಲಿಯಾಗಿರುವ ಬೆಂಗಳೂರಿನಲ್ಲಿ ಹೊಸ ಅನ್ವೇಷಣೆಗಳಿಗೂ ಆದ್ಯತೆ ದೊರೆಯುತ್ತಿದೆ. 400 ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿವೆ. ಬಳ್ಳಾರಿ, ಮೈಸೂರು, ಚಿತ್ರದುರ್ಗ, ಕಲಬುರ್ಗಿ ಜಿಲ್ಲೆಗಳಲ್ಲಿ ರಾಜ್ಯಮಟ್ಟದ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಿ ತಲಾ 5 ಕೋಟಿ ನೀಡಲಾಗಿದೆ ಎಂದು ಕುಮಾರಸ್ವಾಮಿ ನುಡಿದರು.

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತನಾಡಿ, ಕೈಗಾರಿಕಾ ಬೆಳವಣಿಗೆ ಶೇ.17ರಷ್ಟಿದ್ದು, ನವೋದ್ಯಮದಲ್ಲಿ ಜಾಗತಿಕವಾಗಿ ರಾಜ್ಯ 2ನೆ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ 8,000 ನವೋದ್ಯಮ ಸ್ಥಾಪನೆಯಾಗುತ್ತಿದೆ. ವಿದೇಶಿ ನೇರ ಬಂಡವಾಳದಲ್ಲಿ ಮುಂಚೂಣಿಯಲ್ಲಿದ್ದು, 2017-18ರಲ್ಲಿ 32.7 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆಯಾಗಿದೆ ಎಂದರು.

9 ಕೈಗಾರಿಕಾ ಕ್ಲಸ್ಟರ್‌ಗಳಿಂದ 1.5 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದೆ. ಮೈತ್ರಿ ಸರಕಾರ ಜನರಿಗೆ ನೀಡಿದ ಭರವಸೆಯಂತೆ ಉದ್ಯೋಗ ಮತ್ತು ಆರ್ಥಿಕಾಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ಇತ್ತೀಚಿಗೆ ತುಮಕೂರಿನ ಉದ್ಯೋಗ ಮೇಳದಲ್ಲಿ 20 ಸಾವಿರ ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡು, 8 ಸಾವಿರ ಮಂದಿ ನೋಂದಣಿ ಮಾಡಿಸಿ 4 ಸಾವಿರ ಮಂದಿಗೆ ಉದ್ಯೋಗ ಭರವಸೆ ಸಿಕ್ಕಿದ್ದು, ಒಟ್ಟು 160 ವಿವಿಧ ಕಂಪೆನಿಗಳು ಪಾಲ್ಗೊಂಡಿದ್ದವು ಎಂದು ಮಾಹಿತಿ ನೀಡಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ಬೆಂಗಳೂರಿನಲ್ಲಿ ಸೆಮಿ ಕಂಡಕ್ಟರ್, ನ್ಯಾನೋ, ರೊಬೋಟಿಕ್, ಡ್ರೋಣ್ ಸೇರಿದಂತೆ ವಿವಿಧ ವಲಯಗಳಲ್ಲಿ ಕೂಡ ಕೈಗಾರಿಕಾಭಿವೃದ್ಧಿಯಾಗುತ್ತಿದೆ. ಬಹು ಕೌಶಲ್ಯ ತರಬೇತಿ ಕೇಂದ್ರ ಸ್ಥಾಪಿಸಲಾಗಿದೆ. ರಾಜ್ಯದ ಮತ್ತು 3ನೇ ಹಂತದ ನಗರಗಳಲ್ಲಿ ಕೈಗಾರಿಕೆ ಸ್ಥಾಪಿಸುವ ಮೂಲಕ ಆರ್ಥಿಕ ಪ್ರಗತಿಗೆ ಒತ್ತು ಕೈಗಾರಿಕೆಗೆ ಬೇಕಾದ ಪೂರಕ ವಾತಾವರಣ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ಈ ಕ್ಲಸ್ಟರ್‌ಗಳು ಜಾಗತಿಕ ಮಟ್ಟದಲ್ಲಿ ಬೆಳೆಯಬೇಕೆಂಬ ಅಪೇಕ್ಷೆ ಇದೆ. ಅತ್ಯುತ್ತಮ ಉತ್ಪಾದನಾ ವಲಯವನ್ನಾಗಿಸುವುದು ನಮ್ಮ ಉದ್ದೇಶ ಎಂದ ಅವರು, ಕೈಗಾರಿಕಾಭಿವೃದ್ಧಿ ಮೂಲಕ ನಿರುದ್ಯೋಗ ನಿವಾರಣೆಗೆ ಒತ್ತು, ಕೊಪ್ಪಳ ವ್ಯಾಪ್ತಿ ಆಟಿಕೆ ಉದ್ಯಮ, ಬಳ್ಳಾರಿ ಜವಳಿ ಕ್ಲಸ್ಟರ್‌ಗಳ ಸ್ಥಾಪನೆಗೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಡಾ.ಎಸ್. ಸುಬ್ರಮಣ್ಯ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ, ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿಯಾ, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಶಂಕರ್, ಏಕಸ್ ಗ್ರೂಪ್ ಸಿಇಒ ಅಧ್ಯಕ್ಷ ಅರವಿಂದ ಮೆಳ್ಳಿಗೇರಿ, ಆನಂದ್ ಪದ್ಮನಾಭ್ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News