ಸಾಲಮನ್ನಾ ಜೊತೆಗೆ ನಿರುದ್ಯೋಗ ನಿವಾರಣೆಗೆ ಆದ್ಯತೆ: ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-02-18 18:29 GMT

ಹಾಸನ ಫೆ.18: ಸರ್ಕಾರ ರೈತರ ಹಿತದೃಷ್ಠಿಯ ಜೊತೆಗೆ ನಿರುದ್ಯೋಗ ನಿವಾರಣೆಯ ಉದ್ದೇಶದಿಂದ ರಾಜ್ಯದ 9 ಜಿಲ್ಲೆಗಳಲ್ಲಿ ಹೊಸ ಕಾರ್ಖಾನೆಗಳ ಸ್ಥಾಪನೆಗೆ ಮುಂದಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸಹಕಾರ ಬ್ಯಾಂಕ್ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ರೈತರ ಸಾಲಮನ್ನಾ ತೀರುವಳಿ ಪತ್ರ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಅವರು ರೈತರಿಗೆ ಆತ್ಮಸ್ಥೆರ್ಯವನ್ನು ತುಂಬುವ ಉದ್ದೇಶದಿಂದ ಸಾಲಮನ್ನಾ ಯೋಜನೆ ಜಾರಿಗೆ ತರಲಾಗಿದ್ದು, ಎರಡೇ ಕಂತುಗಳಲ್ಲಿ ಸಾಲಮನ್ನಾ ಪೂರ್ಣಗೊಳಿಸಲಾಗುವುದು ಎಂದರು.

ನಾಡಿನ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗಿ ಚಿತ್ರದುರ್ಗ, ಕೊಪ್ಪಳ, ಬಳ್ಳಾರಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಕಾರ್ಖಾನೆಗಳಿಗೆ ಚಾಲನೆ ನೀಡಿದ್ದೇವೆ. ಕೊಪ್ಪಳ ಜಿಲ್ಲೆಯಲ್ಲಿ ಹಾಂಗ್‍ ಕಾಂಗ್‍ನ ಕೈಗಾರಿಕೋದ್ಯಮ ಕ್ಲಸ್ಟರ್ ಉದ್ಘಾಟಿಸಲಾಗಿದೆ. ಅಲ್ಲಿ 10,000 ಮಂದಿಗೆ ಉದ್ಯೋಗವನ್ನು ಸೃಷ್ಟಿಸಲಾಗಿದೆ ಎಂದು ಹೇಳಿದರು.

ಬಳ್ಳಾರಿಯಲ್ಲಿ 25-30 ಸಾವಿರ ಯುವಕರಿಗೆ ಉದ್ಯೋಗ ಸೃಷ್ಟಿಸಲು ಹಲವು ವಸ್ತ್ರೋದ್ಯಮ ಕಾರ್ಖಾನೆಗಳಿಗೆ ಚಾಲನೆ ನೀಡಲಾಗಿದೆ. 3-4 ವರ್ಷಗಳಿಂದ ಬರಗಾಲದ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ ರೈತರ ಹಿತಕಾಯಲು ಸಾಲಮನ್ನಾ ಮಾಡಲಾಗಿದೆ. ಜಿಲ್ಲೆಯಲ್ಲಿ ಪ್ರವಾಸ ಕ್ಷೇತ್ರಕ್ಕೆ ಹೆಚ್ಚಿನ ಯಾತ್ರಿಕರನ್ನು ಅಥವಾ ಪ್ರವಾಸಿಗರನ್ನು ಆಕರ್ಷಿಸುವ ಮೂಲಕ ಉದ್ಯೋಗ ನಿರ್ಮಾಣವಾಗಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.

ರೈತರ ಉತ್ಪನ್ನಗಳನ್ನು ವಿದೇಶಕ್ಕೆ ರಪ್ತು ಮಾಡಬೇಕು ಎಂಬ ಉದ್ದೇಶದಿಂದ ಹಾಸನ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇಗೌಡರು ಪ್ರಯತ್ನಿಸಿದ್ದಾರೆ. ಅದನ್ನು ಈಡೇರಿಸಲು ನಿರ್ಧಾರ ಕೈಗೊಂಡಿದ್ದೇವೆ. ಜಿಲ್ಲೆಯ ಅಭಿವೃದ್ದಿ ಜೊತೆಗೆ ನಾಡಿನ ಪ್ರಗತಿಗೂ ಸಮಾನ ಆದ್ಯತೆ ನೀಡುತ್ತಿದ್ದೇವೆ. ಕುಡಿಯುವ ನೀರು, ಕೃಷಿ, ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಮಾಜಿ ಪ್ರಧಾನ ಹೆಚ್.ಡಿ.ದೇವೇಗೌಡ ಮಾತನಾಡಿ, ರೈತರು ಈ ನಾಡಿನ ಬೆನ್ನೆಲುಬು. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದರು.

ಸಹಕಾರ ಬ್ಯಾಂಕ್ ಮತ್ತು ವಾಣಿಜ್ಯ ಬ್ಯಾಂಕ್‍ಗಳಲ್ಲಿ ರೈತರು ಮಾಡಿದ್ದ 46,000 ಕೋಟಿ ಸಾಲಮನ್ನಾ ಮಾಡಲಾಗಿದೆ. ಜೊತೆಗೆ ಈ ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಜಾರಿಗೊಳಿಸಿದ್ದ ಯೋಜನೆಗಳನ್ನು ಮುಂದುವರೆಸಲಾಗಿದೆ ಎಂದ ಅವರು, ಸರ್ಕಾರದ ರೈತಪರ ಕಾಳಜಿ ಮತ್ತು ಯೋಜನೆಗಳ ಬಗ್ಗೆ ಮೆಚ್ಚುಗೆ ಸೂಚಿಸಿದರು. 

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ. ರೇವಣ್ಣ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾರ್ಯಗಳ ಬಗ್ಗೆ ವಿವರಿಸಿದರು. ಹೊಸ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಆದ್ಯತೆಗಳ ಬಗ್ಗೆ ತಿಳಿಸಿದರು. ಫೆ. 23-24 ರಂದು ನಗರದಲ್ಲಿ ಉದ್ಯೋಗ ವೇಳ ಆಯೋಜಿಸಲಾಗಿದೆ ಅಲ್ಲದೆ ವಿವಿಧ ತಾಲೂಕುಗಳಿಗೆ ಮುಖ್ಯಮಂತ್ರಿಯವರು ಆಗಮಿಸಲಿದ್ದಾರೆ ಎಂದು ಸಚಿವರು ಹೇಳಿದರು.

ಸಹಕಾರ ಸಚಿವ ಬಂಡೆಪ್ಪ ಕಾಶಂಪುರ್, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್, ಸಣ್ಣ ನೀರಾವರಿ ಸಚಿವ ಪುಟ್ಟಸ್ವಾಮಿ, ದಕ್ಷಿಣ ವಲಯ ಐ.ಜಿ.ಪಿ ಶರತ್‍ ಚಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಶ್ವೇತಾ ದೇವರಾಜ್, ವಿಧಾನ ಪರಿಷತ್ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಎಂ.ಎ. ಗೋಪಾಲಸ್ವಾಮಿ, ಶಾಸಕರಾದ ಎ.ಟಿ.ರಾಮಸ್ವಾಮಿ, ಹೆಚ್.ಕೆ.ಕುಮಾರಸ್ವಾಮಿ, ಕೆ.ಎಮ. ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ, ಕೆ.ಎಸ್.ಲಿಂಗೇಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್.ಪ್ರಕಾಶ್ ಗೌಡ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ, ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಲೋಕೇಶ್, ವಿವಿಧ ಇಲಾಖೆಯ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಅನೇಕರು ಹಾಜರಿದ್ದರು.

ಪುಸ್ತಕ ಬಿಡುಗಡೆ: ಇದೇ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ 'ಮೈತ್ರಿಯ ನಡಿಗೆ ಅಭಿವೃದ್ದಿಯ ಕಡೆಗೆ' ಎಂಬ ಜಿಲ್ಲಾ ಪ್ರಗತಿ ನೋಟ ಪುಸ್ತಕವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಬಿಡುಗಡೆ ಮಾಡಿದರು.

ಉದ್ಯೋಗ ಮೇಳದ ಪ್ರಚಾರ ಫಲಕ ಬಿಡುಗಡೆ: ಫೆ 23, 24 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಉದ್ಯೋಗ ಮೇಳದ ಪ್ರಚಾರ ಫಲಕವನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದರು. 

ಬಹುಮಾನ ವಿತರಣೆ: ಫೆ.17 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಪಶುಮೇಳದಲ್ಲಿ ಹಾಲು ಕರೆಯುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 50 ಸಾವಿರ, ದ್ವಿತೀಯ ಸ್ಥಾನ 30 ಸಾವಿರ, ತೃತೀಯ ಸ್ಥಾನ 20 ಸಾವಿರ ರೂಪಾಯಿ ಬಹುಮಾನದ ಚೆಕ್ ವಿತರಿಸಲಾಯಿತು.

ರಂಜಿಸಿದ ಶಮಿತಾ ಮಲ್ನಾಡ್ ತಂಡ: ಸಾಲಮನ್ನಾ ತೀರುವಳಿ ಪತ್ರ ವಿತರಣೆ ಸಮಾರಂಭಕ್ಕೂ ಮುನ್ನಾ ಖ್ಯಾತ ಸ್ಯಾಂಡಲ್‍ವುಡ್ ಗಾಯಕಿ ಶಮಿತಾ ಮಲ್ನಾಡ್ ಮತ್ತು ತಂಡದವರಿಂದ ಸುಮಾರು 3 ಗಂಟೆಗಳ ಸಂಗೀತ ಕಾರ್ಯಕ್ರಮ ನಡೆಯಿತು. ಕೇಳುಗರು ಚಪ್ಪಾಳೆ ತಟ್ಟಿ ಹಾಡುಗಳನ್ನು ಆನಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News