ರಾಜ್ಯ ಹೆದ್ದಾರಿಯಲ್ಲಿ ಅಕ್ರಮ ಟೋಲ್ ಸಂಗ್ರಹ ಆರೋಪ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2019-02-20 15:57 GMT

ಬೆಂಗಳೂರು, ಫೆ.19: ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿಯಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹಿಸುತ್ತಿರುವ ಆರೋಪ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು-ದೊಡ್ಡಬಳ್ಳಾಪುರ ರಸ್ತೆ ನಿರ್ಮಾಣ ಕಾಮಗಾರಿ ಪುರ್ಣಗೊಳ್ಳದಿದ್ದರೂ ರಾಜಾನಕುಂಟೆ ಸಮೀಪದ ಟೋಲ್ ಕೇಂದ್ರದಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿ ಯಲಹಂಕ ನಿವಾಸಿ ಎಸ್.ನವೀನ್ ಕುಮಾರ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಬುಧವಾರ ಈ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ರಸ್ತೆ ಅಭಿವೃದ್ಧಿ ನಿಗಮ, ಯಲಹಂಕ ಎ.ಪಿ.ಬಾರ್ಡರ್, ಟೋಲ್ ವೇಯ್ಸಿ ಪೈ.ಲಿ, ಮೆರ್ಸಸ್ ಆರ್ವಿ ಅಸೋಸಿಯೇಟೆಡ್ ಆರ್ಕಿಟೆಕ್ ಎಂಜಿನಿಯರ್ಸ್‌ ಆ್ಯಂಡ್ ಕನ್ಸಲ್‌ಟೆಂಟ್ ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮಕ್ಕೆ (ಬಿಎಂಟಿಸಿ) ನೋಟಿಸ್ ಜಾರಿ ಮಾಡಿತು.

ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ನಿಯಮದ ವಿರುದ್ಧ ರಸ್ತೆ ನಿರ್ಮಾಣ ಕಾಮಗಾರಿ ಕನಿಷ್ಠ ಶೇ.70ರಷ್ಟು ಪೂರ್ಣಗೊಳ್ಳದ ಹೊರತು ಆ ರಸ್ತೆಯಲ್ಲಿ ಪ್ರಯಾಣಿಸುವ ವಾಹನ ಸವಾರರಿಂದ ಟೋಲ್ ಸಂಗ್ರಹಿಸುವಂತಿಲ್ಲ. ಹಾಗೆಯೇ, ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ ಕಾಮಗಾರಿ ಶೇ.100ರಷ್ಟು ಪೂರ್ಣಗೊಳ್ಳದೆ ಟೋಲ್ ಸಂಗ್ರಹಿಸುವಂತಿಲ್ಲ ಎಂಬುದಾಗಿ ಸರಕಾರ ಮತ್ತು ಗುತ್ತಿಗೆದಾರನ ಮಧ್ಯೆ ಒಪ್ಪಂದ ಏರ್ಪಟ್ಟಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಸಾರ್ವಜನಿಕರನ್ನು ಟೋಲ್ ಸಿಬ್ಬಂದಿ ಅಸಂವಿಧಾನಿಕ ಪದಗಳಿಂದ ನಿಂದಿಸಿ ದೌರ್ಜನ್ಯ ಎಸಗುತ್ತಿದ್ದಾರೆ. ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗುತ್ತಿಲ್ಲ. ಟೋಲ್ ಸಂಗ್ರಹಿಸಿದಂತೆ ನಿರ್ದೇಶಿಸಲು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಮನವಿ ಪತ್ರ ಸಲ್ಲಿಸಿದರೂ ಪರಿಗಣಿಸಿಲ್ಲ. ರಸ್ತೆ ಪೂರ್ಣಗೊಂಡ ನಂತರ ಟೋಲ್ ಸಂಗ್ರಹಣೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಅದಕ್ಕೂ ಮುನ್ನವೇ ಹಾಗೂ ಸೂಕ್ತ ಮೂಲ ಸೌಕರ್ಯ, ಸಂಚಾರಿ ನಿಯಮ ಸೂಚನಾ ಫಲಕ ಅಳವಡಿಸದೆ ಟೋಲ್ ಸಂಗ್ರಹ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ ಎಂದು ಅರ್ಜಿದಾರರು ದೂರಿದ್ದು, ರಸ್ತೆ ಕಾಮಗಾರಿ ಪೂರ್ಣಗೊಳ್ಳುವರೆಗೂ ಟೋಲ್ ಸಂಗ್ರಹಿಸದಂತೆ ಸರಕಾರ ಹಾಗೂ ಗುತ್ತಿಗೆದಾರರಿಗೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News