ತಾಯಿಯ ಅಂತ್ಯಸಂಸ್ಕಾರ ನಡೆಸಿ ಮೃತಪಟ್ಟ ಮಗ

Update: 2019-02-20 18:32 GMT

ಕಾರವಾರ, ಫೆ.20: ಮೃತ ತಾಯಿಯ ಅಂತ್ಯ ಸಂಸ್ಕಾರ ನಡೆಸಿದ ಬಳಿಕ ಮಗನೂ ಮೃತಪಟ್ಟ ಹೃದಯ ವಿದ್ರಾವಕ ಘಟನೆ ತಾಲೂಕಿನ ಸಿದ್ದರ ಗ್ರಾಮದಲ್ಲಿ ನಡೆದಿದೆ. 

ಮಂಜುನಾಥ ಆತ್ಮಾರಾಮ ಕೋಳಂಬಕರ್(49) ತಾಯಿಯ ಬೆನ್ನಲ್ಲೇ ಚಿತೆಗೇರಿದ ವ್ಯಕ್ತಿ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಸಾವಿತ್ರಿ ಕೊಳಂಬಕರ್ ನಿಧನರಾಗಿದ್ದರು. ಅವರ ಅಂತ್ಯಸಂಸ್ಕಾರಕ್ಕೆ ಸ್ಮಶಾನಕ್ಕೆ ಕೊಂಡೊಯ್ಯಲಾಗಿತ್ತು. ಒಬ್ಬನೇ ಮಗನಾಗಿದ್ದ ಮಂಜುನಾಥ ಸಕಲ ವಿಧಿವಿಧಾನಗಳನ್ನು ಪೂರೈಸಿದ್ದ. ಬಳಿಕ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆ ಮಂಜುನಾಥ ಎದೆಯಲ್ಲಿ ನೋವು ಎಂದು ಹೇಳುತ್ತಾ ಕೆಳಗೆ ಬಿದ್ದಿದ್ದಾನೆ ಎನ್ನಲಾಗಿದೆ. ಇದನ್ನು ಕಂಡ ಇತರರು ತಕ್ಷಣ ಅವರನ್ನು ಸಿದ್ಧರದ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಮೃತ ಮಂಜುನಾಥ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News