×
Ad

ಮನೆಗೆಲಸದ ಬಾಲಕಿಗೆ ದೌರ್ಜನ್ಯ ಆರೋಪ: ಫೆ.26ರೊಳಗೆ ಒಡಿಶಾಕ್ಕೆ ಕಳುಹಿಸಲು ಹೈಕೋರ್ಟ್ ನಿರ್ದೇಶನ

Update: 2019-02-22 22:30 IST

ಬೆಂಗಳೂರು, ಫೆ.22: ನಗರದ ಟೆಕ್ಕಿ ಒಬ್ಬರ ಮನೆಯಲ್ಲಿ ಕೆಲಸಕ್ಕೆ ಇರಿಸಿಕೊಂಡಿದ್ದ 16 ವರ್ಷದ ಬಾಲಕಿಯನ್ನು ಫೆ. 26ರ ಒಳಗೆ ಒಡಿಶಾ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ಒಪ್ಪಿಸಬೇಕು ಎಂದು ಹೈಕೋರ್ಟ್ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ನಿರ್ದೇಶಿಸಿದೆ.

ಬಾಲಕಿಯನ್ನು ಮನೆ ಗೆಲಸದಲ್ಲಿ ತೊಡಗಿಸಿ ಆಕೆಯನ್ನು ಶೋಷಿಸಿ ಮತ್ತು ದೌರ್ಜನ್ಯವೆಸಗಿದ ಆರೋಪದಲ್ಲಿ ತಲಾಷ್ ಸ್ವಯಂ ಸೇವಾ ಸಂಸ್ಥೆ ನೀಡಿದ್ದ ದೂರಿನ ಮೇರೆಗೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಾಲಕಿಯನ್ನು ಮನೆಯಲ್ಲಿರಿಸಿಕೊಂಡಿದ್ದ ಆರೋಪದಡಿ ಟೆಕ್ಕಿ ಶಿಬು ಪ್ರಸಾದ್ ಪಾದಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ನಂತರ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ತನ್ನ ವಶದಲ್ಲಿರಿಸಿಕೊಂಡಿತ್ತು.

ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ಅಕ್ರಮವಾಗಿ ಬಂಧನದಲ್ಲಿರಿಸಿಕೊಂಡಿದೆ ಎಂದು ಆರೋಪಿಸಿ ಆಕೆಯ ಪೋಷಕರು ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹಾಗೂ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಶುಕ್ರವಾರ ವಿಚಾರಣೆ ನಡೆಸಿತು.

ಸರಕಾರದ ಪರ ಹಾಜರಿದ್ದ ವಕೀಲ ಎಸ್.ವಿ. ಗಿರಿಕುಮಾರ್, ಶೋಷಣೆಗೊಳಗಾಗಿದ್ದ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ರಕ್ಷಣೆ ಮಾಡಿ ಪೋಷಿಸುತ್ತಿದೆ. ಇದರಲ್ಲಿ ಯಾವುದೇ ಅಕ್ರಮ ಬಂಧನದ ಪ್ರಶ್ನೆಯೇ ಇಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ವಿಲೇವಾರಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News