ಆಳುಪ 1ನೇ ಕುಲಶೇಖರನ ತುಳು ಶಾಸನ ಪತ್ತೆ: ತುಳು ಲಿಪಿ, ತುಳು ಭಾಷೆಯಲ್ಲಿ ರಚಿಸಿದ ಶಾಸನ

Update: 2019-02-22 18:00 GMT

ಮಂಗಳೂರು, ಫೆ.22: ತುಳು ಲಿಪಿ ಮತ್ತು ತುಳು ಭಾಷೆಯಲ್ಲಿ ಬರೆದ ಅತ್ಯಂತ ಪ್ರಾಚೀನ ಶಾಸನ ನಗರದ ಕುಲಶೇಖರದ ಶ್ರೀ ವೀರನಾರಾಯಣ ದೇವಾಲಯದಲ್ಲಿ ಪತ್ತೆಯಾಗಿದೆ.

ಆಳುಪ ಚಕ್ರವರ್ತಿ 1ನೇ ಕುಲಶೇಖರನ ಕಾಲದ ಈ ಶಾಸನವನ್ನು ಸಂಪೂರ್ಣವಾಗಿ ತುಳು ಭಾಷೆಯಲ್ಲಿ ರಚಿಸಲ್ಪಟ್ಟಿರುವುದು ತುಳು ಭಾಷೆ ಹಾಗೂ ಸಂಸ್ಕೃತಿಯ ಅಧ್ಯಯನಕ್ಕೆ ಭದ್ರವಾದ ಬುನಾದಿಯನ್ನು ಒದಗಿಸಿದೆ ಎಂದು ಶಿರ್ವ ಎಂಎಸ್‌ಆರ್‌ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರೊ.ಟಿ.ಮುರುಗೇಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಶಾಸನ ‘ಶ್ರೀ ಹರಿಯೇ ನಮಃ’ ಎಂಬ ಒಂದು ಸಾಲಿನ ಪ್ರಾರ್ಥನಾ ಶ್ಲೋಕದೊಂದಿಗೆ ಆರಂಭವಾಗಿದೆ. ನಂತರ ಶಾಸನದಲ್ಲಿ ಸೌರ ಪಂಚಾಗದ ರೀತಿ ಕಾಲಮಾನವನ್ನು ಉಲ್ಲೇಖಿಸಲಾಗಿದೆ. ಶಾಸನೋಕ್ತ ವರದಿ ಪ್ರಕಾರ ‘ಸಕ್ ಪದರಾಡ್’ ಅಂದರೆ ಶಕ 12, ಮೇಘ ಮಾಸ, ಕೃಷ್ಣ ಪಕ್ಷದಲ್ಲಿ ಧನುಪುಳೇ (9ನೇ ರಾಶಿ) ಅಂದರೆ 9ನೇ ದಿನ ಕಳೆದು ಎಂದು ಅರ್ಥಸಿಕೊಂಡಲ್ಲಿ ಈ ಶಾಸನದ ಕಾಲ ಕ್ರಿ.ಶ. 1159, ಫೆ.10, ಶನಿವಾರಕ್ಕೆ ಸರಿಹೊಂದುತ್ತದೆ. ನಂತರ ಶಾಸನ ಪದಿರಾಡ್ ಊರ್ ಸೀಮೆಲ ಎಂದು ಉಲ್ಲೇಖಿಸಿದ್ದು, ಈ ದೇವಾಲಯ 12 ಊರುಗಳಿಗೆ ಪಿತೃ ದೇವತೆಯಾಗಿತ್ತೆಂದು ತಿಳಿಸುತ್ತದೆ. ಶಾಸನದ 9ನೇ ಸಾಲಿನಲ್ಲಿ ಕುಳೆ ಸೇಖರ ಲೋಕೋಂತಮಾಂತ ಎಂಬ ಉಲ್ಲೇಖದೆ. ಅಂದರೆ ಭುವನ ಅಥವಾ ಲೋಕ ಖ್ಯಾತ ಕುಲಶೇಖರನೆಂದು, ಆಳುಪ ದೊರೆಯನ್ನು ಕೊಂಡಾಡಲಾಗಿದೆ. ಮುಂದಿನ ಸಾಲುಗಳು ನೆಲದಲ್ಲಿ ಹುಗಿದು ಹೋಗಿವೆ. ಶಾಸನದ ಮೂಲ ಉದ್ದೇಶ ಧರ್ಮಸೇನಜ್ಙ ಎಂಬ ವ್ಯಕ್ತಿ ತಾನು ಮಾಡಿದ ಯಾವುದೋ ಪಾಪಕ್ಕೆ ಪ್ರಾಯಶ್ಚಿತ್ತವನ್ನು ಮಾಡಿಕೊಂಡದ್ದನ್ನು ದಾಖಲಿಸುವುದಾಗಿದೆ.

ಶಾಸನದ ಮಹತ್ವ: ಶಾಸನ ಆಳುಪರ ಚರಿತ್ರೆ ಮತ್ತು ತುಳು ಸಾಹಿತ್ಯ ಹಾಗೂ ತುಳು ಲಿಪಿ ಅಧ್ಯಯನದ ದೃಷ್ಟಿಯಿಂದ ಅತ್ಯಂತ ಮಹತ್ವದ ದಾಖಲೆ ಯಾಗಿದೆ. ಈ ಶಾಸನ 1ನೇ ಕುಲಶೇಖರ ಆಳುಪೇಂದ್ರನ ಕುರಿತಾಗಿ ದೊರೆಯುವ ಪ್ರಪ್ರಥಮ ಶಾಸನವಾಗಿದೆ, ಇದುವರೆಗೆ ಕ್ರಿ.ಶ. 1162ರ ಕೊರ್ಸಿ-ಕಾಲ್ತೋಡು ಶಾಸನವನ್ನು ಆತನ ಪ್ರಥಮ ಶಾಸನವೆಂದು ಭಾವಿಸಲಾಗಿತ್ತು. ಆದರೆ ಕುಲಶೇಖರದ ತುಳುಶಾಸನ ಆತನ ಆಳ್ವಿಕೆಯ ಕ್ರಿ.ಶ. 1159ರ ಕಾಲಕ್ಕೆ ಸಂಬಂಧಿಸಿರುವುದರಿಂದ, ಇದೇ ಆತನ ಪ್ರಥಮ ಶಾಸನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಶಾಸನದಲ್ಲಿ ಶುದ್ಧ ತುಳು ಪದಗಳಾದ ಧನುಪುಳೇ, ರತ್ನತೆಂದ್, ಸಕ್, ಪದರಾಡ್, ಪದಿರಾಡ್, ದಿಕ್ಕ್, ಲೋಕೊಂತಮಾಂತ ಮುಂತಾದ ಪದಗಳನ್ನು ಬಳಸಲಾಗಿದೆ. ಆದ್ದರಿಂದ ಈ ಶಾಸನವನ್ನು ತುಳು ಭಾಷೆಯ ಅತ್ಯಂತ ಪ್ರಾಚೀನ ಹಾಗೂ ಪ್ರಪ್ರಥಮ ಶಾಸನವೆಂದು ಪರಿಗಣಿಸಬಹುದಾಗಿದೆ. ಈ ಶಾಸನ ಶೋಧ, ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕು ಎಂಬ ಹೋರಾಟಕ್ಕೆ ಪ್ರಬಲ ಆಧಾರವಾಗಿದೆ ಎಂದು ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ.

ಈ ಶಾಸನ ಅಧ್ಯಯನಕ್ಕೆ ಅಧಿಕೃತವಾಗಿ ಆಹ್ವಾನಿಸಿದ ದ.ಕ.ಜಿಲ್ಲೆಯ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ, ದೇವಾಲಯದ ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿರುವ ಪ್ರೊ.ಟಿ.ಮುರುಗೇಶಿ, ಶಾಸನ ಅಧ್ಯಯನದಲ್ಲಿ ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಸಂಸ್ಥೆಯ ತುಳು-ಸಂಸ್ಕೃತದ ಹಿರಿಯ ವಿದ್ವಾಂಸ ವಿಘ್ನರಾಜ್, ಸ್ಥಳೀಯರಾದ ವಿಶ್ವಜಿತ್ ಮತ್ತು ವಿದ್ಯಾರ್ಥಿಗಳಾದ ಪ್ರಜ್ಞಾ, ಕೀರ್ತಿ ಮತ್ತು ಶ್ರೇಯಸ್ ಸಹಕರಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News