ರಾಜಕೀಯ ಪಕ್ಷಗಳೊಂದಿಗೆ ಸಮಾನಾಂತರ ಕಾಯ್ದುಕೊಳ್ಳಲು ತೀರ್ಮಾನ: ಕುರುಬೂರು ಶಾಂತಕುಮಾರ್

Update: 2019-02-23 18:34 GMT

ಮೈಸೂರು,ಫೆ.23: ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಗುರುತಿಸಿಕೊಳ್ಳದೇ ಸಮಾನಾಂತರ ಕಾಯ್ದು ಕೊಳ್ಳುವ ನಿಲುವನ್ನು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ತಾಳಿದೆ ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಂಘವು ಬಿಜೆಪಿ, ಕಾಂಗ್ರೆಸ್, ಸ್ವರಾಜ್ ಇಂಡಿಯಾ ಸೇರಿದಂತೆ ಯಾವ ಪಕ್ಷದೊಂದಿಗೆ ಗುರುತಿಸಿಕೊಳ್ಳದೇ ರೈತ ಸಂಘಟನೆಯಾಗಿಯೇ ಉಳಿಯಲಿದೆ ಎಂದು ಸ್ಪಷ್ಟಪಡಿಸಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಗಳು ಪ್ರಕಟಿಸುವ ಪ್ರಣಾಳಿಕೆಯಲ್ಲಿ ರೈತ ಅಭಿವೃದ್ಧಿ ಪೂರಕವಾಗುವ ಯೋಜನೆಗಳನ್ನು ಕೈಗೆತ್ತಿಕೊಂಡು ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ, ವಿವಿಧ ರಾಜ್ಯಗಳ ಸುಮಾರು 20 ಮಂದಿ ರೈತ ಮುಖಂಡರು ಫೆ.27, 28ರಂದು ನವದೆಹಲಿಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.

ಬೇಡಿಕೆ: ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು, ಬೆಳೆಗೆ ಬೆಂಬಲ ಬೆಲೆ ನಿಗದಿ, ಕೃಷಿ ಭೂಮಿ ಮಾರುಕಟ್ಟೆ ಮೌಲ್ಯಕ್ಕೆ ಅನುಗುಣವಾಗಿ ಸಾಲ ಲಭಿಸಬೇಕು, ಹೆಚ್ಚಿನ ನೀರಾವರಿ ಯೋಜನೆಗಳಿಗೆ ಒತ್ತು ನೀಡಬೇಕು. ಬೆಳೆ ವಿಮೆ ಪದ್ಧತಿ ಬದಲಾಯಿಸಬೇಕು, ಪ್ರತಿ ವರ್ಷಕ್ಕೊಮ್ಮೆ ದಕ್ಷಿಣ ಭಾರತದಲ್ಲಿ ಸಂಸತ್ ಅಧಿವೇಶನ ನಡೆಸಬೇಕು, ಕೃಷಿಗೆ ಪ್ರತ್ಯೇಕ ಉಪಪ್ರಧಾನಿ ಹುದ್ದೆಯನ್ನು ನೇಮಕಗೊಳಿಸಬೇಕು ಎಂಬ ಮುಂತಾದ ವಿಷಯಗಳನ್ನು ಪ್ರಣಾಳಿಕೆಯಲ್ಲಿ ಅಳವಡಿಸಿಕೊಂಡು ಅನುಷ್ಠಾನಗೊಳಿಸಬೇಕೆಂದು ರಾಜಕೀಯ ಪಕ್ಷಗಳ ಮುಖಂಡರಲ್ಲಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಸಕ್ಕರೆಯ ಕನಿಷ್ಠ ಬೆಲೆಯನ್ನು 31ರೂ. ಗೆ ಏರಿಕೆ ಮಾಡಿದ್ದು, ಆ ಕಾರಣ ಕಬ್ಬಿನ ಎಫ್ಆರ್ಪಿ ದರನ್ನು ಪ್ರತಿ ಟನ್ನಿಗೆ 200 ರೂ. ಗಳನ್ನು ಹೆಚ್ಚವರಿಯಾಗಿ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಮುಖಂಡರಾದ ಬರಡನಪುರ ನಾಗರಾಜ್, ಕನಕಪುರ ರವಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News