ಪ್ರಧಾನಿ ಮೋದಿ ನಿವಾಸದಲ್ಲಿ ಸಿಸಿಎಸ್ ಸಭೆ
ಹೊಸದಿಲ್ಲಿ, ಫೆ. 26: ಭಾರತೀಯ ವಾಯು ಪಡೆ ಪಾಕಿಸ್ತಾನದಲ್ಲಿ ವಾಯು ದಾಳಿ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಮಂಗಳವಾರ ಬೆಳಗ್ಗೆ ಭದ್ರತೆಗಿರುವ ಸಂಪುಟ ಸಮಿತಿಯ ಸಭೆ ನಡೆಯಿತು. ಹಣಕಾಸು ಸಚಿವ ಅರುಣ್ ಜೇಟ್ಲಿ, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಭೆಯಲ್ಲಿ ಉಪಸ್ಥಿತರಿದ್ದರು.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಪ್ರಧಾನಿ ಮಂತ್ರಿ ಅವರ ಕಚೇರಿಯ ಉನ್ನತ ಅಧಿಕಾರಿಗಳು ಹಾಗೂ ರಕ್ಷಣಾ ಅಧಿಕಾರಿಗಳು ಕೂಡ ಸಭೆಯಲ್ಲಿ ಉಪಸ್ಥಿತರಿದ್ದರು. ಭಾರತೀಯ ಸೇನೆ ಮಂಗಳವಾರ ಬೆಳಗ್ಗೆ ಪಾಕಿಸ್ತಾನದ ಒಳಗೆ ನುಗ್ಗಿ ಭಯೋತ್ಪಾದಕರ ಶಿಬಿರಗಳನ್ನು ಗುರಿಯಾಗಿರಿಸಿ ವಾಯು ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.
ಈ ದಾಳಿಯಲ್ಲಿ ಪಾಲ್ಗೊಂಡ ಭಾರತೀಯ ವಾಯು ಪಡೆಯ ಹಲವು ಯುದ್ಧ ವಿಮಾನಗಳು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಾಲಕೋಟ್ನಲ್ಲಿದ್ದ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ ಶಿಬಿರಗಳನ್ನು ಯಶಸ್ವಿಯಾಗಿ ನಾಶಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.