10 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ: ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು, ಫೆ.28: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಸರಕಾರದ ಕಂದಾಯ ಭೂಮಿಯಲ್ಲಿ ಮನೆ ಕಟ್ಟಿಕೊಂಡು, 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ 10 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಗುರುವಾರ ಕಂದಾಯ ಇಲಾಖೆಯು ಬೆಂಗಳೂರು ಜಿಲ್ಲಾಡಳಿತದ ವತಿಯಿಂದ ನಗರದ ಅರಮನೆ ಮೈದಾನದಲ್ಲಿರುವ ತ್ರಿಪುರ ವಾಸಿನಿಯಲ್ಲಿ ಆಯೋಜಿಸಿದ್ದ 10 ಸಾವಿರ ಹಕ್ಕು ಪತ್ರಗಳ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮದು ರೈತರ ಪರ, ಬಡವರ ಪರವಾದ ಸರಕಾರ. ಈ ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ವೇಳೆ 2007ರಲ್ಲಿ ಬಾಬುಜಗಜೀವನ್ರಾಮ್ ಜನ್ಮದಿನಾಚರಣೆಯಂದು ಬಡವರಿಗೆ ಹಕ್ಕು ಪತ್ರ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು. ಈ ಸರಕಾರದಲ್ಲಿಯೂ ಬಡವರು 94 ಸಿ, 94 ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಮಾ.31ರವರೆಗೆ ವಿಸ್ತರಿಸಲಾಗಿದೆ ಎಂದು ಅವರು ಹೇಳಿದರು.
ಬೆಂಗಳೂರು ನಗರದಲ್ಲಿ ಬಡ ಕುಟುಂಬಗಳಿಗೆ ಒಂದು ಲಕ್ಷ ಮನೆಗಳನ್ನು ನಿರ್ಮಿಸಲು 1600 ಎಕರೆ ಸರಕಾರಿ ಭೂಮಿಯನ್ನು ರಾಜೀವ್ಗಾಂಧಿ ವಸತಿ ನಿಗಮಕ್ಕೆ ವರ್ಗಾಯಿಸಲಾಗಿದೆ. ಒಂದು ಲಕ್ಷ ಮನೆಗಳಿಗಾಗಿ ಸುಮಾರು 48 ಸಾವಿರ ಕುಟುಂಬಗಳು ಅರ್ಜಿ ಸಲ್ಲಿಸಿವೆ. ಆಟೋ ಚಾಲಕರು, ಬೀದಿ ವ್ಯಾಪಾರಿಗಳು, ಗಾರ್ಮೆಂಟ್ಸ್ ನೌಕರರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
1600 ಎಕರೆ ಭೂಮಿಯೊಂದಿಗೆ ರಾಜ್ಯ ಸರಕಾರದ ವತಿಯಿಂದ ತಲಾ ಒಂದು ಮನೆಗೆ 1.50 ಲಕ್ಷ ರೂ., ಕೇಂದ್ರ ಸರಕಾರದಿಂದ 1.50 ಲಕ್ಷ ರೂ., ಫಲಾನುಭವಿ ಮೂಲಕ 1 ಲಕ್ಷ ರೂ.ಗಳನ್ನು ಪಡೆದು, ಬ್ಯಾಂಕುಗಳಿಂದ 3-4 ಲಕ್ಷರೂ.ಗಳನ್ನು ಸರಕಾರದ ಭದ್ರತೆಯೊಂದಿಗೆ ಹಣ ಪಡೆದು ಈ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದರು.
ಬೆಂಗಳೂರು ನಗರದಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯವಿರುವ ಮೂಲಭೂತ ಸೌಕರ್ಯ ಕಲ್ಪಿಸಲು ಸರಕಾರ ಬದ್ಧವಾಗಿದೆ. ಪೆರಿಫೆರಲ್ ರಸ್ತೆಯನ್ನು 17 ಸಾವಿರ ಕೋಟಿ ರೂ.ವೆಚ್ಚದಲ್ಲಿ ಚಾಲನೆ ನೀಡಲು ನಿರ್ಧರಿಸಲಾಗಿದೆ. ಬೆಂಗಳೂರು ನಗರದ ಒಳಭಾಗದಲ್ಲಿ 102 ಕಿ.ಮೀ.ಎಲಿವೇಟೆಡ್ ರಸ್ತೆಯನ್ನು 24 ಸಾವಿರ ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಮೊದಲ ಹಂತದಲ್ಲಿ 9 ಸಾವಿರ ಕೋಟಿ ರೂ.ವೆಚ್ಚದಲ್ಲಿ ಚಾಲನೆ ನೀಡಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಮೆಟ್ರೋ ರೈಲು ಯೋಜನೆಯನ್ನು ಇಡೀ ನಗರಕ್ಕೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಉಪ ನಗರ ರೈಲು ಯೋಜನೆಯನ್ನು ಕೇಂದ್ರ ಸರಕಾರದೊಂದಿಗೆ ಒಡಂಬಡಿಕೆ ಮಾಡಿಕೊಂಡು, ನಮ್ಮ ಪಾಲು 11,500 ಕೋಟಿ ರೂ., ಕೇಂದ್ರ ಸರಕಾರದ ಪಾಲು 11,500 ಕೋಟಿ ರೂ.ಗಳನ್ನು ಬಳಸಿಕೊಂಡು ಈ ಕಾರ್ಯಕ್ರಮ ಅನುಷ್ಠಾನ ಮಾಡಲು ಮುಂದಾಗಿದ್ದೇವೆ ಎಂದು ಅವರು ಹೇಳಿದರು.
ಬಡವರ ಬಂಧು ಎಂಬ ಯೋಜನೆಯನ್ನು ಜಾರಿಗೆ ತಂದು ರಾಜ್ಯದಲ್ಲಿರುವ 4.50 ಲಕ್ಷ ಬೀದಿ ವ್ಯಾಪಾರಿಗಳಿಗೆ 1 ಸಾವಿರ ರೂ.ಗಳಿಂದ 10 ಸಾವಿರ ರೂ.ಗಳವರೆಗೆ ಬಡ್ಡಿ ರಹಿತ ಸಾಲ ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದೇವೆ. ಹಕ್ಕು ಪತ್ರಕ್ಕಾಗಿ ಆಗ್ರಹಿಸಿ ಬಡವರು, ದಲಿತರು ಹಲವಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಹೋರಾಟಕ್ಕೆ ಇಂದು ನ್ಯಾಯ ಸಿಕ್ಕಿದೆ. ಗ್ರಾಮೀಣ ಪ್ರದೇಶದಲ್ಲಿ 94 ಸಿ ಅಡಿಯಲ್ಲಿ ಈವರೆಗೆ 1,11,800 ಜನರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ. ನಗರ ಪ್ರದೇಶದಲ್ಲಿ 45,193 ಮಂದಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, 31,140 ಪ್ರಕರಣ ವಿಲೇವಾರಿಗೆ ಬಾಕಿಯಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಮುನಿರಾಜು, ರಾಜ್ಯಸಭಾ ಸದಸ್ಯ ಡಿ.ಕುಪೇಂದ್ರರೆಡ್ಡಿ, ಶಾಸಕರಾದ ರೋಷನ್ ಬೇಗ್, ಎಸ್.ಟಿ.ಸೋಮಶೇಖರ್, ಮುನಿರತ್ನ, ಆರ್.ಮಂಜುನಾಥ, ಪಿ.ಆರ್.ರಮೇಶ್, ರಿಝ್ವನ್ ಅರ್ಶದ್, ಬಿ.ಎಸ್.ಸುರೇಶ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ರಾಜ್ಕುಮಾರ್ ಖತ್ರಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯ್ ಶಂಕರ್ ಉಪಸ್ಥಿತರಿದ್ದರು.
ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮವು 12.32 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿರುವ ಹಿನ್ನೆಲೆಯಲ್ಲಿ ನಿಗಮದ ಅಧ್ಯಕ್ಷ ಬಿ.ಎಸ್.ಸುರೇಶ್ ಇದೇ ವೇಳೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 2.50 ಕೋಟಿ ರೂ.ಗಳ ಚೆಕ್ ಅನ್ನು ಹಸ್ತಾಂತರಿಸಿದರು.