ದೇಶದ ಶೇ.80 ಮಂದಿಗೆ ಉಚಿತ ಕಾನೂನು ನೆರವು:ಸಿ.ಎಂ.ಜೋಷಿ
ಉಡುಪಿ, ಫೆ.28: ಕಾನೂನು ಸೇವಾ ಪ್ರಾಧಿಕಾರದ ಮೂಲಕ ದೇಶದ ಶೇ.80ರಷ್ಟು ಜನತೆ ಉಚಿತ ಕಾನೂನು ನೆರವು ಪಡೆಯಬಹುದಾಗಿದ್ದು, ಈ ಕುರಿತು ಸೂಕ್ತ ಅರಿವು ಇಲ್ಲದ ಕಾರಣ ಸಾರ್ವಜನಿಕರು ಕಾನೂನು ತೊಡಕು ಗಳಿಗೆ ಸಿಲುಕಿ ತೊಂದರೆ ಪಡುತ್ತಿದ್ದಾರೆ. ಈ ಬಗ್ಗೆ ಕಾನೂನು ಸಾಕ್ಷರತಾ ರಥ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ. ಜೋಷಿ ಹೇಳಿದ್ದಾರೆ.
ಗುರುವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ವಕೀಲರ ಸಂಘ, ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕ್ರಿಶ್ಚಿಯನ್ ಪ್ರೌಢಶಾಲೆಯಲ್ಲಿ ನಡೆದ ಕಾನೂನು ಸಾಕ್ಷರತಾ ರಥ (ಸಂಚಾರಿ ಜನತಾ ನ್ಯಾಯಾಲಯ ಮತ್ತು ಕಾನೂನು ಸಾಕ್ಷರತಾ ರಥ)ದ ಮೂಲಕ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಕಾನೂನು ಸೇವಾ ಪ್ರಾಧಿಕಾರವು ಜನಸಾಮಾನ್ಯರಿಗೆ ಕಾನೂನು ಕುರಿತು ಹೆಚ್ಚಿನ ತಿಳುವಳಿಕೆ ನೀಡುವುದು. ಕಾನೂನು ತೊಡಕುಗಳಿಗೆ ಸಿಲುಕಿದವರಿಗೆ ಉಚಿತ ನೆರವು ನೀಡುವುದು. ರಾಜೀ ಸಂಧಾನ ಮತ್ತು ಲೋಕ ಅದಾಲತ್ ಮೂಲಕ ಪ್ರಕರಣಗಳನ್ನು ತ್ವರಿತ ಇತ್ಯರ್ಥ ಮಾಡುತಿದ್ದು, ಸಮಾಜದ ಎಲ್ಲಾ ಮಹಿಳೆಯರಿಗೆ ಮತ್ತು ಆರ್ಥಿಕ ದುರ್ಬಲ ವರ್ಗದವರಿಗೆ ಉಚಿತ ನೆರವು ನೀಡುವ ಮೂಲಕ ಒಟ್ಟು ಜನಸಂಖ್ಯೆಯ ಶೇ.80ರಷ್ಟು ಮಂದಿಗೆ ಇದರ ಪ್ರಯೋಜನ ಪಡೆಯಲು ಸಾಧ್ಯವಾಗುತ್ತದೆ ಎಂದರು.
ಇಂದು ಚಾಲನೆ ಪಡೆದಿರುವ ಕಾನೂನು ಸಾಕ್ಷರತಾ ರಥ ಎಲ್ಲಡೆ ಸಂಚರಿಸಿ ವಿವಿಧ ವಿಷಯಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಕಾನೂನು ಅರಿವು ಮೂಡಿಸಲಾಗುತ್ತದೆ. ಉಡುಪಿ ಜಿಲ್ಲೆಯಲ್ಲಿ 3 ದಿನ ಸಂಚರಿಸುವ ಸಾಕ್ಷರತಾ ರಥವು, ಪೋಕ್ಸೋ ಕಾಯಿದೆ, ಮಾದಕ ವ್ಯಸನ, ಮೋಟಾರ್ ವಾಹನ ಕಾಯಿದೆ, ಗ್ರಾಹಕರ ಹಕ್ಕು ಮತ್ತು ರಕ್ಷಣೆ, ಬಾಲಾಪರಾಧ ಮತ್ತು ಬಾಲ ನ್ಯಾಯ ಕಾಯ್ದೆ, ಸೈಬರ್ ಕ್ರೈಮ್ ಬಗ್ಗೆ ಅರಿವು ಮೂಡಿಸಲಿದೆ ಎಂದು ಸಿ.ಎಂ. ಜೋಷಿ ಹೇಳಿದರು.
ವಿದ್ಯಾರ್ಥಿಗಳಿಗೆ ಕಾನೂನಿನ ಪರಿಜ್ಞಾನ ನೀಡುವುದರಿಂದ ಸಮಾಜ ಸುಶಿಕ್ಷಿತಗೊಳ್ಳುತ್ತದೆ ಎಂದ ಜಿಲ್ಲಾ ನ್ಯಾಯಾಧೀಶರು, ಮತದಾನ ಮಹತ್ವದ ಕುರಿತಂತೆಯೂ ಮಾತನಾಡಿದರು.
ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು, ಮತ ಚಲಾಯಿಸದೇ ಇರುವುದು ತಪ್ಪು. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಮತ ಚಲಾಯಿಸುವಂತೆ ಪ್ರೇರೇಪಿಸಬೇಕು ಎಂದವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಮತಯಂತ್ರ ಮತ್ತು ವಿವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷಿಕೆಯೂ ನಡೆಯಿತು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಹೆಚ್.ರತ್ನಾಕರ್ ಶೆಟ್ಟಿ ಮಾತನಾಡಿ, ಕಾನೂನಿನ ಪರಿಜ್ಞಾನ ಪ್ರತಿಯೊಬ್ಬರಿಗೂ ಅಗತ್ಯ. ಕಾನೂನಿನಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕು ಮತ್ತು ಸ್ವಾತಂತ್ರ್ಯವನ್ನು ನೀಡಲಾಗಿದೆ. ಅನಕ್ಷರತೆ ಮತ್ತು ಕಾನೂನಿನ ಜ್ಞಾನ ಇಲ್ಲದೆ ಇರುವುದರಿಂದ ಎಲ್ಲರಿಗೂ ತಿಳಿದುಕೊಳ್ಳಲು ಸಾಧ್ಯವಾಗಿಲ್ಲ. ವಿದ್ಯಾರ್ಥಿಗಳು ಕಾನೂನಿನ ಪರಿಜ್ಞಾನ, ಹಕ್ಕು ಮತ್ತು ಕರ್ತವ್ಯಗಳ ಕುರಿತು ತಿಳಿದುಕೊಳ್ಳುವ ಅಗತ್ಯವಿದೆ ಎಂದರು.
ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜ್ಯೋತಿ ಪಿ. ನಾಯಕ್ ಪೋಕ್ಸೋ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿವೇಕಾನಂದ ಎಸ್. ಪಂಡಿತ್, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕುಮಾರಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಂಜುಳ, ಕ್ರಿಶ್ಚಿಯನ್ ಹೈಸ್ಕೂಲ್ ಮುಖ್ಯ ಶಿಕ್ಷಕಿ ಹೆಲೆನ್ ವಿ ಸಾಲಿನ್ಸ್ ಉಪಸ್ಥಿತರಿದ್ದರು.
ಕ್ರಿಶ್ಚಿಯನ್ ಪ್ರೌಢಶಾಲೆಯ ಹಿರಿಯ ಉಪಾಧ್ಯಾಯ ಸುಬ್ರಾಯ ಸ್ವಾಗತಿಸಿದರು.