ಕೆಡಿಪಿ ಸಭೆ : ಮಂಗನ ಕಾಯಿಲೆ ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ

Update: 2019-03-01 11:35 GMT

ಶಿವಮೊಗ್ಗ, ಮಾ. 1: ಮಂಗನ ಕಾಯಿಲೆಯಿಂದ ಜಿಲ್ಲೆಯಲ್ಲಿ 8 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಮೃತರ ಕುಟುಂಬಗಳಿಗೆ ತಲಾ 10ಲಕ್ಷ ರೂ. ಪರಿಹಾರ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಜೇಶ ಸುರಗಿಹಳ್ಳಿ ಅವರು ತಿಳಿಸಿದರು.

ಶುಕ್ರವಾರ ನಡೆದ ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಈ ಮಾಹಿತಿಯನ್ನು ನೀಡಿದರು. ಜಿಲ್ಲೆಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಲಸಿಕೆ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಪ್ರಸ್ತುತ 45ಸಾವಿರ ಲಸಿಕೆ ಲಭ್ಯವಿದ್ದು, ಈ ತಿಂಗಳ ಅಂತ್ಯದ ಒಳಗಾಗಿ ಇನ್ನೂ 50ಸಾವಿರ ಲಸಿಕೆ ಹಾಗೂ ಮುಂದಿನ ತಿಂಗಳು 55ಸಾವಿರ ಲಸಿಕೆ ಲಭ್ಯವಾಗಲಿದೆ. ಇದರಿಂದ ಮುಂದಿನ ಮಳೆಗಾಲದ ಬಳಿಕ ಮಂಗನ ಕಾಯಿಲೆ ಬಾರದಂತೆ ತಡೆಯಲು ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಜಿಲ್ಲೆಯಲ್ಲಿ ಲಭ್ಯವಾಗಲಿದೆ ಎಂದರು.

ಜಿಲ್ಲೆಯಲ್ಲಿ ಈ ಬಾರಿ ಒಟ್ಟು 176 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು 8 ಮಂದಿ ಸಾವನ್ನಪ್ಪಿರುವುದು ದೃಡಪಟ್ಟಿದೆ. ಒಟ್ಟು 309 ಮಂಗಗಳು ಈ ಅವಧಿಯಲ್ಲಿ ಸಾವಿಗೀಡಾಗಿದ್ದು, 19ಪ್ರಕರಣಗಳಲ್ಲಿ ಕೆಎಫ್‍ಡಿ ವೈರಸ್ ಇರುವುದು ಪತ್ತೆಯಾಗಿದೆ. 109 ಉಣುಗುಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದ್ದು, 41 ಉಣುಗುಗಳಲ್ಲಿ ಕೆಎಫ್‍ಡಿ ವೈರಸ್ ಕಂಡು ಬಂದಿದೆ ಎಂದು ಹೇಳಿದರು.

ಮಾರ್ಚ್ ಒಳಗಾಗಿ ಅನುದಾನ ವೆಚ್ಚವಾಗಬೇಕು: ಕೆಲವು ಇಲಾಖೆಗಳಲ್ಲಿ ಕಾರ್ಯಕ್ರಮಗಳ ಅನುಷ್ಟಾನ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಎಲ್ಲಾ ಇಲಾಖೆಗಳು ತಮಗೆ ಬಿಡುಗಡೆ ಮಾಡಿರುವ ಅನುದಾನವನ್ನು ಮಾರ್ಚ್ ಕೊನೆಯ ಒಳಗಾಗಿ ಸಂಪೂರ್ಣವಾಗಿ ವೆಚ್ಚ ಮಾಡಬೇಕು. ಅನುದಾನ ಲೋಪವಾದರೆ ಆಯಾ ಇಲಾಖಾ ಅಧಿಕಾರಿಗಳೇ ಹೊಣೆಗಾರರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೀವರಾಮೇಗೌಡ ಅವರು ಎಚ್ಚರಿಕೆ ನೀಡಿದರು.

ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳಿಗೆ ಈ ವರ್ಷ 114 ಕೋಟಿ ಅನುದಾನ ನಿಗದಿಪಡಿಸಲಾಗಿದ್ದು, ಜನವರಿ ಕೊನೆಯವರೆಗೆ ಕೇವಲ 16ಕೋಟಿ ರೂ. ವೆಚ್ಚ ಮಾಡಲಾಗಿದೆ. ತಾಲೂಕು ಟಾಸ್ಕ್‍ಫೋರ್ಸ್ ಸೇರಿದಂತೆ ಎಲ್ಲಾ ಕುಡಿಯುವ ನೀರಿನ ಕಾಮಗಾರಿಗಳನ್ನು ಎಪ್ರಿಲ್ ಮೊದಲ ವಾರದ ಒಳಗಾಗಿ ಪೂರ್ಣಗೊಳಿಸಬೇಕು. ಬೇಸಿಗೆಯಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಇಲಾಖೆಗಳು ಈ ವರ್ಷದ ಕ್ರಿಯಾ ಯೋಜನೆಯನ್ನು ಈ ತಿಂಗಳ ಅಂತ್ಯದ ಒಳಗಾಗಿ ಅನುಷ್ಟಾನಗೊಳಿಸಬೇಕು. ಮುಂದಿನ ವರ್ಷದ ಕ್ರಿಯಾ ಯೋಜನೆಯನ್ನು ಈಗಲೇ ಸಿದ್ಧಪಡಿಸಿ ಸಲ್ಲಿಸಬೇಕು. ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ ಹಾಗು ಅರಣ್ಯ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳು ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷ ಜ್ಯೋತಿ ಎಸ್ ಕುಮಾರ್, ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಗ ನಾಯಕ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಬಿ.ಶ್ರೀನಿವಾಸ್, ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News