ಒಂದೇ ವೇದಿಕೆಯಲ್ಲಿ ಕಾಣಿಸಿ ಅಚ್ಚರಿ ಮೂಡಿಸಿದ ಯಡಿಯೂರಪ್ಪ- ಸಿದ್ದರಾಮಯ್ಯ
Update: 2019-03-02 14:36 GMT
ಮೈಸೂರು,ಮಾ.2: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಬಿ.ಎಸ್.ಯಡಿಯೂರಪ್ಪ ಒಂದೇ ವೇದಿಕೆಯಲ್ಲಿ ಬಹಿರಂಗವಾಗಿ ಕಾಣಿಸಿಕೊಳ್ಳುವ ಮೂಲಕ ರಾಜ್ಯದ ಜನರಿಗೆ ಅಚ್ಚರಿಯನ್ನುಂಟು ಮಾಡಿದ್ದಾರೆ.
ರಾಜಕೀಯವಾಗಿ ಪರಸ್ಪರ ಆರೋಪ ಪ್ರತ್ಯಾರೋಗಳಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿಗಳು ಶನಿವಾರ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ 34ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಒಂದೇ ವೇದಿಕೆ ಹಂಚಿಕೊಂಡರು. ಇದಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿದೇಶಿಕೇಂದ್ತ ಸ್ವಾಮೀಜಿ ಹಾಗೂ ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಪತ್ರಕರ್ತರು ಸಾಕ್ಷಿಯಾದರು.
ಪತ್ರಕರ್ತರ ಸಮ್ಮೇಳನದ ಸಮಾರೋಪಕ್ಕೆ ಮೊದಲು ಆಗಮಿಸಿ ವೇದಿಕೆಯಲ್ಲಿ ಸಿದ್ದರಾಮಯ್ಯ ಆಸೀನರಾದರು. ನಂತರ ಆಗಮಿಸಿದ ಯಡಿಯೂರಪ್ಪ ವೇದಿಕೆ ಮೇಲೆ ಬಂದು ಸ್ವಾಮೀಜಿಗಳಿಗೆ ನಮಸ್ಕರಿಸಿ ನಂತರ ಸಿದ್ದರಾಮಯ್ಯ ಅವರಿಗೆ ಹಸ್ತಲಾಘವ ನೀಡಿದರು. ಈ ವೇಳೆ ನೆರಿದಿದ್ದ ಪತ್ರಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತು.