ಕೊಡಗು-ಮೈಸೂರು ಲೋಕಸಭಾ ಕ್ಷೇತ್ರ: ದೇವೇಗೌಡ ಸ್ಪರ್ಧೆಗೆ ಕೊಡಗು ಜೆಡಿಎಸ್ ಇಂಗಿತ

Update: 2019-03-08 18:31 GMT

ಮಡಿಕೇರಿ, ಮಾ.8: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ.ದೇವೇಗೌಡ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂದು ಇಂಗಿತ ವ್ಯಕ್ತಪಡಿಸಿರುವ ಪಕ್ಷದ ಕೊಡಗು ಜಿಲ್ಲೆಯ ಪ್ರಮುಖರು, ಈ ಸಂಬಂಧ ಮಾ.10ರಂದು ದೇವೇಗೌಡ ಅವರನ್ನು ಭೇಟಿಯಾಗಿ ಸ್ಪರ್ಧಿಸುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಕೊಡಗು ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತರುವುದರಲ್ಲಿ ದೇವೇಗೌಡ ಐದನೇ ಸ್ಥಾನದಲ್ಲಿದ್ದು, ಅವರು ಕೊಡಗು- ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದಲ್ಲಿ ಅತ್ಯಧಿಕ ಮತಗಳಿಂದ ಜಯಗಳಿಸುವುದರ ಜೊತೆಗೆ ಕೊಡಗಿನ ಅಭಿವೃದ್ಧಿಯೂ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೊಡಗಿಗೆ ಸುಮಾರು 6 ಬಾರಿ ಭೇಟಿ ನೀಡಿದ್ದು, ಇದು ಜಿಲ್ಲೆಯ ಬಗ್ಗೆ ಅವರಿಗೆ ಇರುವ ಕಾಳಜಿಯನ್ನು ತೋರಿಸಿದೆ ಎಂದು ವಿವರಿಸಿದರು.

ಪ್ರಕೃತಿ ವಿಕೋಪದಿಂದ ನಲುಗಿದ ಕೊಡಗಿನಲ್ಲಿ ಸಂತ್ರಸ್ತರಾದವರ ಕುಟುಂಬಗಳ ನೆರವಿಗೆ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಿದ್ದಾರೆ. ಬಜೆಟ್‌ನಲ್ಲೂ ಕೊಡವ ಸಮಾಜದ ಅಭಿವೃದ್ಧಿಗೆ ಹಾಗೂ ಕೊಡವರ ಹಾಕಿ ಕ್ರೀಡಾಂಗಣ ನಿರ್ಮಾಣಕ್ಕೆ ತಲಾ 5 ಕೋಟಿ ರೂ. ಅನುದಾನ ಒದಗಿಸಿದ್ದು, ಇದರೊಂದಿಗೆ ಗೌಡ ಹಾಗೂ ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ 25 ಕೋಟಿ ರೂ. ಸೇರಿದಂತೆ ಜಿಲ್ಲೆಯ ವಿವಿಧ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ಒದಗಿಸಿದ್ದು, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕುಶಾಲನಗರ ಹಾಗೂ ಪೊನ್ನಂಪೇಟೆ ತಾಲೂಕು ಬೇಡಿಕೆಗೂ ಕುಮಾರಸ್ವಾಮಿ ಸ್ಪಂದಿಸಿ ಎರಡು ತಾಲೂಕುಗಳನ್ನು ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಅಭಿವೃದ್ಧಿ ಕಾರ್ಯಗಳು ಪೂರಕವಾಗಲಿದ್ದು, ಪಕ್ಷದ ವರಿಷ್ಠ ದೇವೇಗೌಡ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಪಕ್ಷದ ಕೊಡಗು ಜಿಲ್ಲೆಯ ಪ್ರಮುಖರ ಒಮ್ಮತದ ಅಭಿಪ್ರಾಯವಾಗಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರಕಾರವಿರುವುದರಿಂದ ಲೋಕಸಭಾ ಸೀಟು ಹಂಚಿಕೆ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಮಾತುಕತೆ ಮುಂದುವರಿದಿದೆ. ಒಂದು ವೇಳೆ ಈ ಕ್ಷೇತ್ರವನ್ನು ಕಾಂಗ್ರೆಸ್ ಉಳಿಸಿಕೊಂಡಲ್ಲಿ ಆ ಪಕ್ಷದ ಅಭ್ಯರ್ಥಿಯ ಗೆಲುವಿಗೂ ಜೆಡಿಎಸ್ ಶಕ್ತಿ ಮೀರಿ ಪ್ರಯತ್ನಿಸಲಿದೆ ಎಂದು ಹೇಳಿದರು.

ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ವಿ.ನಾಗೇಶ್, ವಕ್ತಾರ ಎಂ.ಟಿ.ಕಾರ್ಯಪ್ಪ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರಾದ ಸಿ.ಎಲ್.ವಿಶ್ವ, ಆದಿಲ್‌ಪಾಷಾ, ರೆನ್ನಿ ಬರೋಸ್ ಇತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News