‘ಬರ’ ಪರಿಹಾರ, ನರೇಗಾ ಬಾಕಿ ಬಿಡುಗಡೆಗೆ ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಮನವಿ

Update: 2019-03-09 13:14 GMT

ಹೊಸದಿಲ್ಲಿ, ಮಾ. 9: ಬರ ಪರಿಹಾರ ಕಾರ್ಯಕ್ಕೆ ಅನುದಾನ ಹಾಗೂ ಉದ್ಯೋಗ ಖಾತ್ರಿ ಯೋಜನೆ ಬಾಕಿ ಮೊತ್ತವನ್ನು ಕೂಡಲೆ ಬಿಡುಗಡೆ ಮಾಡಬೇಕೆಂದು ಕೋರಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಶನಿವಾರ ದಿಲ್ಲಿಯಲ್ಲಿ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಉದ್ಯೋಗ ಖಾತರಿ ಯೋಜನೆಯಡಿ ಬಾಕಿ ಇರುವ ವೇತನ ಮತ್ತು ಸಾಮಗ್ರಿ ವೆಚ್ಚದ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯವು 2018-19ನೆ ಸಾಲಿನ ಪ್ರವಾಹ ಪರಿಸ್ಥಿತಿ ಹಾಗೂ ಬರ ಸ್ಥಿತಿಯನ್ನು ಎದುರಿಸಿದೆ. ಕೊಡಗು, ಸಮೀಪದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ಭೂ ಕುಸಿತದಿಂದ ತೀವ್ರಹಾನಿ ಸಂಭವಿಸಿದೆ. ಅಲ್ಲದೆ, 100 ತಾಲೂಕುಗಳಲ್ಲಿ ಬರ ಪರಿಸ್ಥಿತಿ ತಲೆದೋರಿತ್ತು. ಇದಕ್ಕೆ 2,434 ಕೋಟಿ ರೂ.ಪರಿಹಾರ ಒದಗಿಸುವಂತೆ ರಾಜ್ಯ ಸರಕಾರ ಮನವಿ ಸಲ್ಲಿಸಿದೆ. ಕೇಂದ್ರ ಶೇ.50ಕ್ಕೂ ಕಡಿವೆು, 949 ಕೋಟಿ ರೂ. ಮಂಜೂರು ಮಾಡಿದೆ.

ಹಿಂಗಾರಿನಲ್ಲಿ ರಾಜ್ಯದಲ್ಲಿ ವಾಡಿಕೆ 188 ಮಿ.ಮಿ.ಮಳೆಯಾಗಬೇಕಾಗಿದ್ದು, ಕೇವಲ 96 ಮಿ.ಮೀ. ಮಳೆ ಆಗಿದ್ದು, ಉತ್ತರ ಒಳನಾಡಿನಲ್ಲಿ ಶೇ.66ರಷ್ಟು ಮಳೆ ಕೊರತೆ ಉಂಟಾಗಿತ್ತು. 176 ತಾಲೂಕುಗಳಲ್ಲಿ 156 ತಾಲೂಕುಗಳು ಬರಪೀಡಿತವೆಂದು ಘೋಷಿಸಲಾಗಿದೆ. ಇದರಲ್ಲಿ 107 ತಾಲೂಕುಗಳನ್ನು ತೀವ್ರ ಬರ ಪೀಡಿತ ಹಾಗೂ 49 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಗುರುತಿಸಲಾಗಿದೆ. ಹಿಂಗಾರು ಅವಧಿಯಲ್ಲಿ 11,384.47 ಕೋಟಿ ರೂ.ಮೌಲ್ಯದ ಬೆಳೆ ನಷ್ಟ ಉಂಟಾಗಿದೆ ಎಂದು ಹೇಳಿದರು.

ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ 32,335 ಕೋಟಿ ರೂ.ಗಳಷ್ಟು ನಷ್ಟ ಸಂಭವಿಸಿದ್ದು, ರಾಜ್ಯದ ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ ರಾಜ್ಯ ಸರಕಾರ ತ್ವರಿತ ಕ್ರಮಗಳನ್ನು ತೆಗೆದುಕೊಂಡಿದ್ದು, ಎಸ್‌ಡಿಆರ್‌ಎಫ್ ನಿಧಿಯಲ್ಲದೆ ರಾಜ್ಯ ಸರಕಾರದಿಂದ 386 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಮೇವು ಒದಗಿಸುವ ಜೊತೆಗೆ ಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ನರೇಗಾ ಯೋಜನೆಯಡಿ 8.18 ಕೋಟಿ ಮಾನವ ದಿನಗಳನ್ನು ಸೃಜಿಸಲಾಗಿದೆ. ಇದಕ್ಕಾಗಿ ಬಾಕಿ ಉಳಿದಿರುವ 1,351 ಕೋಟಿ ರೂ.ಗಳಷ್ಟು ವೇತನ ಹಾಗೂ ಸಾಮಗ್ರಿ ವೆಚ್ಚದ ಕೇಂದ್ರದ ಪಾಲನ್ನೂ, ಕೇಂದ್ರದಿಂದ ಅನುದಾನ ಬಿಡುಗಡೆಯನ್ನು ನಿರೀಕ್ಷಿಸಿ ರಾಜ್ಯ ಸರಕಾರವೇ ಬಿಡುಗಡೆ ಮಾಡಿದೆ. ಆದುದರಿಂದ ಈ ಬಾಕಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕೋರಿದರು.

ಅಲ್ಲದೆ ಈಗಾಗಲೇ ಕೇಂದ್ರ ಸರಕಾರಕ್ಕೆ ರಾಜ್ಯವು ಪ್ರಸ್ತಾವನೆ ಸಲ್ಲಿಸಿರುವಂತೆ ಬರ ಪರಿಹಾರ ಹಾಗೂ ನಿರ್ವಹಣೆಗೆ ಎಸ್‌ಡಿಆರ್‌ಎಫ್/ಎನ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ ಅಗತ್ಯವಿರುವ 2,064 ಕೋಟಿ ರೂ.ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದರು.

‘ಸತತ ಬರಗಾಲ, ಅನಿಶ್ಚಿತ ಮಳೆಯ ಪರಿಣಾಮವಾಗಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಸರಕಾರಗಳು ಧಾವಿಸಬೇಕಾದ್ದು ಅತಿ ಅಗತ್ಯ. ಆದುದರಿಂದ ಕೇಂದ್ರ ಸರಕಾರ ಕೂಡಲೇ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು’

-ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News