ಬಿಜೆಪಿ 22 ಸ್ಥಾನಗಳಲ್ಲಿ ಗೆದ್ದರೆ ಮೈತ್ರಿ ಸರಕಾರ ಉಳಿಯದು: ಬಿಎಸ್‌ವೈ ಭವಿಷ್ಯ

Update: 2019-03-10 14:41 GMT

ಬೆಳಗಾವಿ, ಮಾ. 10: ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಹೆಚ್ಚುದಿನ ಉಳಿಯುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಇಂದಿಲ್ಲಿ ಭವಿಷ್ಯ ನುಡಿದಿದ್ದಾರೆ.

ರವಿವಾರ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶೀಘ್ರದಲ್ಲೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ಹಾಲಿ ಸಂಸದರಿಗೆ ಟಿಕೆಟ್ ನೀಡುವ ಉದ್ದೇಶವಿದೆ ಎಂದರು.

ಒಂದೆರಡು ಕ್ಷೇತ್ರಗಳಲ್ಲಿ ಮಾತ್ರ ಬದಲಾವಣೆ ಆಗಬಹುದು. ರಾಜ್ಯದಲ್ಲಿ 22 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ. ಅದಕ್ಕಾಗಿ ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಮೈತ್ರಿ ಸರಕಾರದ ವಿರುದ್ಧ ಜನರು ಬೇಸತ್ತು ಹೋಗಿದ್ದಾರೆ. ಮೈತ್ರಿ ಕುರಿತು ಆಯಾ ಪಕ್ಷಗಳ ಮುಖಂಡರಲ್ಲೆ ಅಸಮಾಧಾನವಿದೆ ಎಂದರು.

ಉಗ್ರ ಅಝರ್ ಮಸೂದ್‌ನನ್ನು ಬಿಡುಗಡೆಗೊಳಿಸಿದ್ದು ಬಿಜೆಪಿ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ರಾಹುಲ್ ಇನ್ನೂ ಎಳಸು. ರಾಹುಲ್ ಗಾಂಧಿ ಅವರ ಮಾತಿಗೆ ಏನು ಹೇಳೋದು. ವಾಜಪೇಯಿ ಅಧಿಕಾರವಧಿಯಲ್ಲಿ ಯಾವ ಪರಿಸ್ಥಿತಿ ಇತ್ತು ಎನ್ನುವುದು ಜಗತ್ತಿಗೆ ಗೊತ್ತಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News