×
Ad

ಪ್ರಜಾಪ್ರಭುತ್ವ-ಸರ್ವಾಧಿಕಾರದ ನಡುವಿನ ಚುನಾವಣೆ: ಸಿದ್ದರಾಮಯ್ಯ

Update: 2019-03-11 19:31 IST

ಹೊಸದಿಲ್ಲಿ, ಮಾ.11: ಮುಂಬರುವ ಸಾರ್ವತ್ರಿಕ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಡುವಿನ ಚುನಾವಣೆಯಲ್ಲ, ಬದಲಾಗಿ ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರದ ನಡುವಿನ ಚುನಾವಣೆಯಾಗಿದೆ ಎಂದು ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಲು ಸೋಮವಾರ ಹೊಸದಿಲ್ಲಿಗೆ ಭೇಟಿ ನೀಡಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಕಾಂಗ್ರೆಸ್‌ನ ಹಾಲಿ ಸಂಸದರಿರುವ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡುವ ಬಗ್ಗೆ ನಿರ್ಧಾರವಾಗಿಲ್ಲ. ಜೆಡಿಎಸ್‌ಗೆ ಎಷ್ಟು ಸ್ಥಾನ ಎಂದು ನಾನು ಹೇಳಲು ಆಗುವುದಿಲ್ಲ. ಮೈಸೂರು ಕ್ಷೇತ್ರ ಬಿಟ್ಟು ಕೊಡುವ ಬಗ್ಗೆ ಸಭೆಯಲ್ಲಿ ನನ್ನ ನಿರ್ಧಾರ ಹೇಳುತ್ತೇನೆ ಎಂದು ಅವರು ತಿಳಿಸಿದರು.

ಸುಮಲತಾ ಅಂಬರೀಶ್ ಹಿಂದೆ ಸಿದ್ದರಾಮಯ್ಯ ಇದ್ದಾರೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ಸುಮಲತಾ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವುದಿಲ್ಲ. ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವುದಿಲ್ಲ ಎಂದು ಹೇಳಿದವನೇ ನಾನು. ನಾನು ಹೇಗೆ ಪರೋಕ್ಷವಾಗಿ ಅವರನ್ನು ಬೆಂಬಲಿಸುತ್ತೇನೆ ಎಂದು ಪ್ರಶ್ನಿಸಿದರು. ಸಚಿವ ಡಿ.ಕೆ.ಶಿವಕುಮಾರ್ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ನಾಯಕರೊಂದಿಗೆ ಸಭೆ ನಡೆಸಿರುವ ವಿಚಾರ ನನಗೆ ಗೊತ್ತಿಲ್ಲ. ಆ ಸಭೆಗೆ ಮಂಡ್ಯದ ನಾಯಕರು ಹೋಗಿಲ್ಲ ಎನ್ನುವ ಬಗ್ಗೆಯೂ ಮಾಹಿತಿ ಇಲ್ಲ ಎಂದು ಅವರು ತಿಳಿಸಿದರು.

ಜೆಡಿಎಸ್‌ನ ಕುಟುಂಬ ರಾಜಕಾರಣ ಮೈತ್ರಿ ಸರಕಾರದ ಮೇಲೆ ಯಾವುದೇ ದುಷ್ಪರಿಣಾಮ ಬೀರಲ್ಲ. ಮಂಡ್ಯದಲ್ಲಿ ನಿಖಿಲ್, ಹಾಸನದಲ್ಲಿ ಪ್ರಜ್ವಲ್ ನಿಲ್ಲಿಸೋದು ಜೆಡಿಎಸ್ ನಿರ್ಧಾರ. ಜೆಡಿಎಸ್‌ಗೆ ಬಿಟ್ಟುಕೊಟ್ಟ ಕ್ಷೇತ್ರದಲ್ಲಿ ಇಂತವರನ್ನೇ ಅಭ್ಯರ್ಥಿ ಹಾಕಿ ಎಂದು ನಾವು ಹೇಳುವುದಕ್ಕೆ ಆಗುವುದಿಲ್ಲ. ಹಾಗೆಯೇ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಅವರು ನಮಗೆ ಏನೂ ಹೇಳುವುದಕ್ಕೆ ಆಗುವುದಿಲ್ಲ ಎಂದು ಅವರು ಮಾಹಿತಿ ನೀಡಿದರು.

ಎ. ಮಂಜು ಬಿಜೆಪಿಗೆ ಹೋಗಲ್ಲ

ಮಾಜಿ ಸಚಿವ ಎ.ಮಂಜು ಬಿಜೆಪಿ ಸೇರ್ಪಡೆಗೊಂಡು ಬಿಜೆಪಿಯಂದ ಹಾಸನ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ತಯಾರಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಎ.ಮಂಜು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗುವ ಪ್ರಮೇಯವೇ ಇಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News