ಅತ್ಯಾಚಾರ ಎಸಗಿ ಬಾಲಕಿ ಕೊಲೆ: ಮುಂದುವರೆದ ತನಿಖೆ

Update: 2019-03-12 16:38 GMT

ಮಣಿಪಾಲ, ಮಾ.12: ಮೂಡುಸಗ್ರಿ ರೈಲ್ವೆ ಹಳಿಯ ಸಮೀಪದ ಹಾಡಿ ಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

ಉಡುಪಿಯಲ್ಲಿ ವಾಸವಾಗಿರುವ ಬಾದಾಮಿ ಮೂಲದ ವಲಸೆ ಕಾರ್ಮಿಕರೊಬ್ಬರ 17ರ ಹರೆಯದ ಮಗಳಾದ ಮೃತ ಬಾಲಕಿಯನ್ನು ದುಷ್ಕರ್ಮಿಗಳು ಹಾಡಿಗೆ ಕರೆದೊಯ್ದು ಕುತ್ತಿಗೆಯನ್ನು ಶಾಲಿನಿಂದ ಬಿಗಿದು ಕೊಲೆ ಮಾಡಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ. ಇದೇ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದರೂ ಮಣಿಪಾಲದ ವಿಧಿ ವಿಜ್ಞಾನ ತಜ್ಞರ ವರದಿ ಬಂದ ಬಳಿಕವಷ್ಟೆ ದೃಢಪಡಬೇಕಾಗಿದೆ.

ಉಡುಪಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈಕೆ ಮಾ.9ರಂದು ಮಧ್ಯಾಹ್ನ ವೇಳೆ ಅಂಗಡಿಯಿಂದ ಮನೆಗೆ ಹೊರಟಳು ನಾಪತ್ತೆಯಾಗಿದ್ದಳು. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೂಡುಸಗ್ರಿಯ ಪದ್ಮನಾಭ ಮೂಲ್ಯ ಎಂಬವರ ಪತ್ನಿ ಮಾ.10ರಂದು ಸಂಜೆ 5ಗಂಟೆ ಸುಮಾರಿಗೆ ಮನೆ ಸಮೀಪದ ಹಾಡಿಗೆ ಸೌದೆ ತರಲು ಹೋದಾಗ ಬಾಲಕಿಯ ಮೃತದೇಹವು ಕೊಲೆ ಮಾಡಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖಾಧಿಕಾರಿಯಾಗಿರುವ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್, ಡಿಸಿಐಬಿ ಪೊಲೀಸ್ ನಿರೀಕ್ಷಕ ಕಿರಣ್, ಮಹಿಳಾ ಠಾಣಾ ಪೊಲೀಸ್ ನಿರೀಕ್ಷಕ ಸಂಪತ್ ಕುಮಾರ್ ಹಾಗೂ ಸೆನ್ ಅಪರಾಧ ಠಾಣೆಯ ಪೊಲೀಸ್ ನಿರೀಕ್ಷಕ ಸೀತಾರಾಮ್ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ನಗರದಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವೊಂದು ಮಹತ್ತರ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಅದರ ಆಧಾರದಲ್ಲಿ ತನಿಖೆ ಯನ್ನು ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News