ದೇವೆಗೌಡರೇ ಮೈಸೂರು ಕ್ಷೇತ್ರಕ್ಕೆ ಬಂದರೂ ನಮಗೆ ಅಂಜಿಕೆಯಿಲ್ಲ: ವಿ.ಶ್ರೀನಿವಾಸಪ್ರಸಾದ್

Update: 2019-03-12 18:27 GMT

ಮೈಸೂರು,ಮಾ.12: ಮಾಜಿ ಪ್ರಧಾನಿ ದೇವೇಗೌಡರೇ ಮೈಸೂರು ಕ್ಷೇತ್ರಕ್ಕೆ ಬಂದರೂ ನಮಗೆ ಅಂಜಿಕೆ ಇಲ್ಲ. ನಾವು ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದೇವೆ. ಚುನಾವಣೆ ಎದುರಿಸಿ ಗೆಲುವು ಸಾಧಿಸುತ್ತೇವೆ ಎಂದು ಮಾಜಿ ಸಚಿವ, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ ಅವರು ಮೈಸೂರು-ಕೊಡಗು ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸ್ಪರ್ಧೆ ಮಾಡುವ ವಿಚಾರ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇಲ್ಲಿ ಯಾರೇ ಸ್ಪರ್ಧೆ ಮಾಡಿದರೂ ನಾವು ರೆಡಿ ಇದ್ದೇವೆ. ದೇವೇಗೌಡರೇ ಮೈಸೂರು ಕ್ಷೇತ್ರಕ್ಕೆ ಬಂದರೂ ನಮಗೆ ಅಂಜಿಕೆ ಇಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಸಿಟ್ಟಿಂಗ್ ಎಂಪಿ ನಮ್ಮವರೇ ಇದ್ದಾರೆ. ನಾವು ಫೇಸ್ ಮಾಡೋಕೆ ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಂಡಿದ್ದೇವೆ. ಈ ಬಾರಿ ಮೈಸೂರಿನಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿದರು.

ಹಾಸನದ ಎ.ಮಂಜು ನನ್ನ ಶಿಷ್ಯ. ಹಾಸನ ಲೋಕಸಭೆಗೆ ಬಿಜೆಪಿಯಿಂದ ಎ.ಮಂಜು ಸ್ಪರ್ಧೆ ಮಾಡುವಂತೆ ನಾನು ಹೇಳಿದ್ದೇನೆ. ಮಂಜು ಬಗ್ಗೆ ನಾನು ಬಿಜೆಪಿ ವರಿಷ್ಠರ ಜೊತೆ ಮಾತನಾಡುತ್ತೇನೆ. ಮಂಜು ಕಾಂಗ್ರೆಸ್ ಪಕ್ಷದ ನಡೆಯಿಂದ ಅಸಾಮಾಧಾನಗೊಂಡಿದ್ದಾರೆ. ಬಿಜೆಪಿ ನಾಯಕರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದರು. 

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಇನ್ನೂ ಫೈನಲ್ ಆಗಿಲ್ಲ. ಇನ್ನೆರಡು ದಿನಗಳಲ್ಲಿ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಫೈನಲ್ ಆಗುತ್ತದೆ. ನಾನು ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಚಾಮರಾಜನಗರದಲ್ಲಿ ನಾನೇ ಚುನಾವಣಾ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತೇನೆ ಎಂದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News