ಎಚ್.ಸಿ.ಮಹದೇವಪ್ಪ ಕಾಂಗ್ರೆಸ್ ನಿಂದ ದೂರ ಸರಿಯಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ

Update: 2019-03-14 18:26 GMT

ಮೈಸೂರು,ಮಾ.14: ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಪಕ್ಷದಿಂದ ದೂರ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಅವರು, ಡಾ.ಎಚ್.ಸಿ.ಮಹದೇವಪ್ಪ ಅವರು ಲೋಕಸಭಾ ಚುನಾವಣೆಯಿಂದ ದೂರ ಇದ್ದಾರಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮೊನ್ನೆ ಟಿ.ನರಸೀಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಲು ವೈಯಕ್ತಿಕ ಕಾರಣಗಳಿಂದ ಸಾಧ್ಯವಿಲ್ಲ ಎಂದು ಆರ್.ಧ್ರುವನಾರಾಯಣ್ ಅವರಿಗೆ ದೂರವಾಣಿ ಮೂಲಕ ತಿಳಿಸಿದ್ದರು. ನಾಳೆ ನಡೆಯುವ ಪರಿವರ್ತನಾ ರ್ಯಾಲಿಯಲ್ಲಿ ಭಾಗವಹಿಸುವ ಮೂಲಕ ನಿಮ್ಮೆಲ್ಲ ಗೊಂದಲಗಳಿಗೆ ಉತ್ತರಿಸಲಿದ್ದಾರೆ ಎಂದು ಹೇಳಿದರು.

ಡಾ.ಎಚ್.ಸಿ.ಮಹದೇವಪ್ಪ ಅವರೊಂದಿಗೆ ನಾವು ಉತ್ತಮ ಬಾಂಧವ್ಯ ಹೊಂದಿದ್ದು, ಅವರು ಪಕ್ಷದ ಎಲ್ಲಾ ಕಾರ್ಯಕ್ರಮಗಳಲ್ಲೂ ಭಾಗವಹಿಸಲಿದ್ದಾರೆ. ಈಗಾಗಲೇ ಎಚ್.ಡಿ.ಕೋಟೆಯಲ್ಲಿ ನಡೆದ ಕಾರ್ಯಕ್ರಮ ಮತ್ತು ಮೈಸೂರಿನಲ್ಲಿ ಸಿದ್ದರಾಮಯ್ಯ ಅವರು ಆಗಮಿಸಿದ್ದ ವೇಳೆ ಜೊತೆಯಲ್ಲೇ ಇದ್ದು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಅವರು ಸದಾ ಕಲಾ ನಮ್ಮೊಂದಿಗೆ ಇರಲಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News